ಕನ್ನಡಪ್ರಭ ವಾರ್ತೆ ಕುಶಾಲನಗರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜಿಲ್ಲೆಯ 15 ಸರ್ಕಾರಿ ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರ ಮಂಜೂರಾತಿ ನೀಡಲಾಗಿದೆ ಎಂದು ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕರಾದ ಲೀಲಾವತಿ ಅವರು ತಿಳಿಸಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಮುದಾಯ ಅಬಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಸೋಮವಾರಪೇಟೆ ತಾಲೂಕಿನ ಸರ್ಕಾರಿ ಶಾಲೆಗಳಿಗೆ ನಿಯೋಜಿಸಲಾದ ಜ್ಞಾನದೀಪ ಶಿಕ್ಷಕರಿಗೆ ಮಂಜೂರಾತಿ ಪತ್ರವನ್ನು ಕುಶಾಲನಗರದ ಯೋಜನಾ ಕಚೇರಿಯಲ್ಲಿ ವಿತರಿಸಿ ಮಾತನಾಡಿದರು.
ಕ್ಷೇತ್ರದಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದು, ಶಾಲೆಗಳಿಗೆ ಪೀಠೋಪಕರಣ ಒದಗಿಸುವ ಕಾರ್ಯಕ್ರಮ, ಜ್ಞಾನ ದೀಪ ಶಿಕ್ಷಕರ ನೇಮಕ ಮಾಡುವುದು, ಉನ್ನತ ಶಿಕ್ಷಣ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯ ವೇತನ ಪಾವತಿ ಮೂಲಕ ಬಡ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ನೆರವಾಗಿದೆ. ಹಾಗೂ ಕೇತ್ರದ ಹಲವಾರು ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳ ಕೊಡುಗೆಯ ಬಗ್ಗೆ ಮಾಹಿತಿ ನೀಡಿದರು. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ 1 ಶಾಲೆಗೆ, ವಿರಾಜಪೇಟೆ ತಾಲೂಕಿನ 8 ಶಾಲೆಗಳಿಗೆ ಹಾಗೂ ಸೋಮವಾರಪೇಟೆ ತಾಲೂಕಿನ 6 ಶಾಲೆಗಳಿಗೆ ಒಟ್ಟು 15 ಶಾಲೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಜ್ಞಾನದೀಪ ಶಿಕ್ಷಕರ ನೇಮಕಾತಿಯಾಗಿದೆ ಎಂದು ತಿಳಿಸಿದರು.ಸೋಮವಾರಪೇಟೆ ತಾಲೂಕಿನ ಜ್ಞಾನದೀಪ ಶಿಕ್ಷಕರಾದ ಶೀಲಾ ಎ ಎಲ್, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಳ್ಳೂರು, ರಶ್ಮಿ ಟಿ ಪಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕಿರಗಂದೂರು, ನಿತ್ಯ ವಿ.ಎನ್., ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹುಲುಗುಂದ, ಜಯಲಕ್ಷ್ಮೀ ಎಚ್ ಜೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, 7ನೇ ಹೊಸಕೋಟೆ, ಮಾನಸ ಕೆ.ಎಂ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಳಗುಂದ ಅವರಿಗೆ ಮಂಜೂರಾತಿ ಪತ್ರ ವಿತರಿಸಲಾಯಿತು. ಈ ಸಂದರ್ಭ ತಾಲೂಕಿನ ಯೋಜನಾಧಿಕಾರಿಗಳಾದ ಹನುಮಂತಪ್ಪ ಅಂಗಡಿ, ಹಾಗೂ ಶಾಲೆಗಳ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.