ಉಡುಪಿ: ಕಲ್ಯಾಣ ಕ್ರಾಂತಿಯ ನಂತರ ನಶಿಸಿಹೋಗುತ್ತಿದ್ದ ಬಸವಣ್ಣ, ಅಲ್ಲಮಪ್ರಭು ಅಕ್ಕಮಹಾದೇವಿ ಸೇರಿದಂತೆ ಹಲವಾರು ಶರಣರು ರಚಿಸಿದ ಸಾವಿರಾರು ವಚನಗಳನ್ನು ಸಂಗ್ರಹಿಸಿ, ಸಂರಕ್ಷಿಸಿ, ಅವುಗಳನ್ನು ಮುದ್ರಿಸುವ ಮೂಲಕ ವಚನ ಸಾಹಿತ್ಯವೂ ಇಂದಿಗೂ ಜನಮಾನಸದಲ್ಲಿ ಉಳಿಯುವಂತೆ ಮಾಡಿದ ಫ. ಗು. ಹಳಕಟ್ಟಿಯವರ ಶ್ರಮ ಅವಿಸ್ಮರಣೀಯವಾದುದು ಎಂದು ಕರಾವಳಿ ಅಬಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಹೇಳಿದರು. ಅವರು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲಾಡಳಿತ ಆಶ್ರಯದಲ್ಲಿ ನಡೆದ ಡಾ.ಫ.ಗು ಹಳಕಟ್ಟಿಯವರ ಜನ್ಮದಿನ - ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, 12 ನೇ ಶತಮಾನದಲ್ಲಿ ಶಿವಶರಣರಿಂದ ರಚಿತಗೊಂಡು, ನಂತರದ ಶತಮಾನಗಳಲ್ಲಿ ಚದುರಿಹೋಗಿದ್ದ ವಚನ ಸಾಹಿತ್ಯಗಳನ್ನು ಫ.ಗು. ಹಳಕಟ್ಟಿಯವರು ರಕ್ಷಿಸದೇ ಹೋಗಿದ್ದರೆ ಇಂದು ಕನ್ನಡ ಸಾಹಿತ್ಯ ಇಷ್ಟು ಶ್ರೀಮಂತವಾಗಿ ಉಳಿಯುತ್ತಿರಲಿಲ್ಲ. ವಕೀಲ ವೃತ್ತಿಯಿಂದ ಬಂದ ಆದಾಯವನ್ನೆಲ್ಲಾ ವಚನ ಸಾಹಿತ್ಯಗಳ ಸಂರಕ್ಷಣೆ, ಪ್ರಚಾರಕ್ಕೆ ಮುಡಿಪಾಗಿಟ್ಟ ಅವರು ಕನ್ನಡದ ಅಮೂಲ್ಯ ವಚನಗ್ರಂಥ ಭಂಡಾರ ವಿಶ್ವಕ್ಕೆ ಪರಿಚಯಿಸಿದರು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಇಲಾಖೆಯ ಸಿಬ್ಬಂದಿ ವರ್ಷಾ ಬಿ. ಕೋಟ್ಯಾನ್ ನಿರೂಪಿಸಿ, ಸಿದ್ಧಬಸಯ್ಯ ಸ್ವಾಮಿ ಚಿಕ್ಕಮಠ ವಂದಿಸಿದರು.