ಒಳ ಮೀಸಲು ಜಾರಿಗೆ ಆಗ್ರಹಿಸಿ ಅರೆಬೆತ್ತಲೆ ಪ್ರತಿಭಟನೆ

KannadaprabhaNewsNetwork |  
Published : Aug 01, 2025, 11:45 PM IST
ಸಿಕೆಬಿ-3 ನಗರ ಹೊರವಲಯದ ಪ್ರಜಾಸೌಧದ ಮುಂದೆ ಓಳ ಮೀಸಲಾತಿಗೆ ಆಗ್ರಹಿಸಿ ಕರ್ನಾಟಕ ಮಾದಿಗ ಮಹಾಸಭಾ- ದಲಿತ ಸಂಘಟನೆಗಳ ಒಕ್ಕೂಟದಿಂದ ಅರಬೆತ್ತಲೆ ಪ್ರತಿಭಟನೆ  ನಡೆಯಿತು. | Kannada Prabha

ಸಾರಾಂಶ

ಒಳ ಮೀಸಲಾತಿಯ ಬೇಡಿಕೆ ಮತ್ತು ಹೋರಾಟ 15 ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಈ ಅಸಮಾನತೆಯನ್ನು ಸರಿಪಡಿಸಲು, ಸರ್ವೋಚ್ಛ ನ್ಯಾಯಾಲಯದ ತೀರ್ಪು ನೀಡಿದ್ದು, ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಸಮುದಾಯಗಳಿಗೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ನೀಡಲು ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿದ್ದರೂ ಸರ್ಕಾರ ಜಾರಿ ಮಾಡುತ್ತಿಲ್ಲ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಒಳ ಮೀಸಲಾತಿಗೆ ಆಗ್ರಹಿಸಿ ಕರ್ನಾಟಕ ಮಾದಿಗ ಮಹಾಸಭಾ- ದಲಿತ ಸಂಘಟನೆಗಳ ಒಕ್ಕೂಟದಿಂದ ನಗರ ಹೊರವಲಯದ ಪ್ರಜಾಸೌಧದ ಮುಂದೆ ಶುಕ್ರವಾರ ಅರಬೆತ್ತಲೆ ಪ್ರತಿಭಟನೆ ನಡೆಸಲಾಯಿತು..

ಕರ್ನಾಟಕ ಮಾದಿಗ ಮಹಾಸಭಾ- ದಲಿತ ಸಂಘಟನೆಗಳ ಒಕ್ಕೂಟದ ಸಂಚಾಲಕ ಬಿ.ಎನ್.ಗಂಗಾಧರಪ್ಪ ಮಾತನಾಡಿ, ಪರಿಶಿಷ್ಟ ಜಾತಿಗಳ ಸಮುದಾಯದೊಳಗಿನ ಅವಕಾಶ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ಒದಗಿಸುವ ಸಲುವಾಗಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿದರು.

ಕೋರ್ಟ್‌ ತೀರ್ಪು ಜಾರಿಗೊಳಿಸಿ

ಒಳ ಮೀಸಲಾತಿಯ ಬೇಡಿಕೆ ಮತ್ತು ಹೋರಾಟ 15 ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಈ ಅಸಮಾನತೆಯನ್ನು ಸರಿಪಡಿಸಲು, ಸರ್ವೋಚ್ಛ ನ್ಯಾಯಾಲಯದ ತೀರ್ಪು ನೀಡಿದ್ದು, ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಸಮುದಾಯಗಳಿಗೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ನೀಡಲು ರಾಜ್ಯ ಸರ್ಕಾರಗಳಿಗೆ ಆದೇಶವನ್ನು ನೀಡಿದೆ. ಆದರೆ, ರಾಜ್ಯ ಸರ್ಕಾರ ಈ ಆದೇಶವನ್ನು ಜಾರಿಗೊಳಿಸಲು ಅನಗತ್ಯವಾಗಿ ವಿಳಂಬ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ಈ ವಿಳಂಬ ನೀತಿಯಿಂದಾಗಿ ನಮ್ಮ ಸಮುದಾಯದ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು, ಕಾರ್ಮಿಕರು ಹಾಗೂ ಮಹಿಳೆಯರು ಹಾಗೂ ಒಟ್ಟಾರೆ ಸಮಾಜ ತಮ್ಮ ನ್ಯಾಯಯುತ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನ ತರುವಾಯ ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ ಸರ್ಕಾರಗಳು ತುರ್ತು ನಿಗಾ ವಹಿಸಿ ತಮ್ಮ ರಾಜ್ಯಗಳಲ್ಲಿ ಒಳಮೀಸಲಾತಿಯನ್ನು ಜಾರಿ ಮಾಡಿ ಸಾಮಾಜಿಕ ನ್ಯಾಯದ ವಿಷಯದಲ್ಲಿ ಮೇಲ್ಪಂಕ್ತಿ ಆಗಿದ್ದಾರೆ ಎಂದರು.

ಆಯೋಗಕ್ಕೆ ಸ್ಪಂದಿಸುತ್ತಿಲ್ಲ

ಆದರೆ ಕರ್ನಾಟಕ ಸರ್ಕಾರ ತೀವ್ರವಾದ ವಿಳಂಬ ನೀತಿ ಅನುಸರಿಸುತ್ತಿದ್ದು ಪರಿಶಿಷ್ಟ ಜಾತಿಗಳಲ್ಲಿ ಅದರಲ್ಲೂ ಮುಖ್ಯವಾಗಿ ಮಾದಿಗ ಮತ್ತು 29 ಉಪಜಾತಿಗಳಲ್ಲಿ ತೀವ್ರ ಜನಾಕ್ರೋಶಕ್ಕೆ ಕಾರಣವಾಗಿದೆ. ನಾಗಮೋಹನ್ ದಾಸ್ ಆಯೋಗಕ್ಕೆ ಸರ್ಕಾರ ಸರಿಯಾದ ರೀತಿಯಲ್ಲಿ ಸಹಕಾರ ನೀಡುತ್ತಿಲ್ಲ ಎಂದು ತಿಳಿಸಿದರು.

ಪರಿಶಿಷ್ಟ ಜಾತಿಗಳ ನಡುವೆ ಮೀಸಲಾತಿ ಹಂಚಿಕೆಗೆ ಆಯೋಗ ನಡೆಸಿದ ಸಮೀಕ್ಷೆ, ಸ್ಟಿಕ್ಕರ್ ಅಂಟಿಸುವ ಪ್ರಕ್ರಿಯೆಗಳು ಗೊಂದಲ ಹುಟ್ಟುಹಾಕಿ ನಗೆಪಾಟಲಿಗೆ ಈಡಾಯಿತು. ಮೂರುವಾರದಲ್ಲಿ ಸಮೀಕ್ಷೆ ಮುಗಿಸಿ ವರದಿ ಸಿದ್ಧಪಡಿಸಲಾಗುವುದು ಎಂಬ ಸರ್ಕಾರದ ಹೇಳಿಕೆ ಕಿಮ್ಮತ್ತು ಕಳೆದುಕೊಂಡಿದೆ. ಕಾಂತರಾಜ್ ಆಯೋಗದ ಜಾತಿಗಣತಿಯ ವರದಿ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳ ನಿರ್ಲಕ್ಷ್ಯದಿಂದ ಕೊನೆಗೆ ಕಸದ ಬುಟ್ಟಿ ಸೇರಿತು ಎಂದರು.

ರಾಜ್ಯಾದ್ಯಂತ ಹೋರಾಟ

ಆಗಸ್ಟ್ 11ರಿಂದ ಪ್ರಾರಂಭವಾಗುವ ವಿಧಾನ ಮಂಡಲಗಳ ಅಧಿವೇಶನದಲ್ಲಿ ಸರ್ಕಾರ ತಕ್ಷಣ ಒಳಮೀಸಲಾತಿ ಜಾರಿಮಾಡಬೇಕೆಂಬುದು ನಮ್ಮ ಅಗ್ರಹವಾಗಿದೆ. ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ಸಂಪೂರ್ಣವಾಗಿ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯನ್ನು ಅನುಷ್ಠನಗೊಳಿಸಬೇಕು. ಒಂದು ವೇಳೆ ಸರ್ಕಾರವು ಈ ಗಡುವಿನೊಳಗೆ ನಮ್ಮ ಬೇಡಿಕೆಯನ್ನು ಈಡೇರಿಸಲು ವಿಫಲವಾದರೆ, ನಮ್ಮ ಹಕ್ಕುಗಳಿಗಾಗಿ ಕರ್ನಾಟಕದಾದ್ಯಂತ ಇರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು, ಕಾರ್ಮಿಕರು, ವಕೀಲರು, ಮಹಿಳೆಯರು ಸೇರಿದಂತೆ ಪ್ರತಿಯೊಬ್ಬರೂ ಒಗ್ಗೂಡಿ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸುವುದು ಅನಿವಾರ್ಯವಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಸಿದರು.

ತಮ್ಮ ಮನವಿ ಸ್ವೀಕರಿಸಲು ವಿಳಂಬ ಮಾಡಿದ್ದರಿಂದ ಪ್ರತಿಭಟನಾಕಾರರು ಜಿಲ್ಲಾಡಳಿತ ಭವನಕ್ಕೆ ನುಗ್ಗಲು ಪ್ರಾರಂಭಿಸಿದಾಗ ಕೆಲಕಾಲ ಪ್ರತಿಭಟನಾಕಾರರು ಮತ್ತು ಪೋಲಿಸರ ನಡುವೆ ವಾಗ್ವಾದ ನಡೆಯಿತು.

ಪ್ರತಿಭಟನೆಯಲ್ಲಿ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ, ಯೋಜನಾ ಪ್ರಾಧಿಕಾರದ ಸದಸ್ಯೆ ನಾರಾಯಣಮ್ಮ, ಕರ್ನಾಟಕ ಮಾದಿಗ ಮಹಾಸಭಾ- ದಲಿತ ಸಂಘಟನೆಗಳ ಒಕ್ಕೂಟದ ಡಿ.ವಿ.ನಾರಾಯಣಸ್ವಾಮಿ, ಈಧರೆ ಪ್ರಕಾಶ್, ನಾಗರಾಜ್, ನಾಗೇಶ್, ವಿಜಯನಾರಸಿಂಹ,ಕಾಳಪ್ಪ,ಮಹದೇವ್ ಸೇರಿದಂತೆ ನೂರಾರು ಮಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''