ರಾಮನಗರ: ದಲಿತರಿಗೆ ದೇವಸ್ಥಾನ ಪ್ರವೇಶಕ್ಕೆ ಹೋರಾಟ ನಡೆಸುತ್ತಿದ್ದ ಕಾರಣಕ್ಕೆ ಕೊಲೆಗೀಡಾಗಿರುವ ಬಹುಜನ ಸಮಾಜ ಪಾರ್ಟಿ ಕಾರ್ಯಕರ್ತ ಭೂಮಾನಂದ ಕುಟುಂಬದವರಿಗೆ ಸೂಕ್ತ ಪರಿಹಾರ ನೀಡುವ ಜೊತೆಗೆ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಬೇಕು ಕೃತ್ಯ ಎಸಗಿದ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ನಾಗರಾಜ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಬಹುಜನ ಸಮಾಜದ ಧ್ವನಿಯನ್ನು ಹತ್ತಿಕ್ಕುವ ಉದ್ದೇಶದಿಂದ ಇಂತಹ ಕೃತ್ಯಗಳು ನಡೆಯುತ್ತಿದ್ದರೆ, ಅದು ಕಾನೂನು ಸುವ್ಯವಸ್ಥೆಗೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಗಂಭೀರ ಸವಾಲಾಗಿದೆ. ಈ ಪ್ರಕರಣದ ತನಿಖೆಯನ್ನು ಪೊಲೀಸರು ಅತ್ಯಂತ ಪಾರದರ್ಶಕವಾಗಿ ಹಾಗೂ ನಿಷ್ಪಕ್ಷಪಾತವಾಗಿ ನಡೆಸಬೇಕು ಎಂದು ಒತ್ತಾಯಿಸಿದರು.
ಪ್ರಕರಣದಲ್ಲಿರುವ ಭಾಗಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ, ಕಾನೂನಿನ ಅಡಿಯಲ್ಲಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಮೃತ ಭೂಮಾನಂದ ಅವರ ಕುಟುಂಬಕ್ಕೆ ಸರ್ಕಾರ ತಕ್ಷಣ ಸಮರ್ಪಕ ಪರಿಹಾರವನ್ನು ಘೋಷಿಸಬೇಕು ಹಾಗೂ ಅವರ ನಿರುದ್ಯೋಗಿ ವಿದ್ಯಾವಂತರಿಗೆ ಸರ್ಕಾರಿ ಉದ್ಯೋಗ ಕೊಡಬೇಕು ಎಂದು ಆಗ್ರಹಿಸಿದರು.ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತ್ವರಿತ ನ್ಯಾಯ ಒದಗಿಸಬೇಕು. ತಪ್ಪಿತಸ್ಥರಿಗೆ ಯಾವುದೇ ರೀತಿಯ ರಾಜಕೀಯ ಅಥವಾ ಆಡಳಿತಾತ್ಮಕ ರಕ್ಷಣೆ ನೀಡಬಾರದು. ಒಂದು ವೇಳೆ ತಪ್ಪಿತಸ್ಥರ ವಿರುದ್ಧ ಸರಿಯಾದ ಕಾನೂನು ಕ್ರಮ ಜರುಗಿಸದೆ ಅವರನ್ನು ರಕ್ಷಿಸುವ ಕೆಲಸ ನಡೆದರೆ ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಬಹುಜನ ಸಮಾಜ ಪಕ್ಷದ ವತಿಯಿಂದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಚ್ಚರಿಕೆ ನೀಡಿದರು.
ಇದಕ್ಕೆ ಪೊಲೀಸ್ ಇಲಾಖೆ ಭ್ರಷ್ಟಾಚಾರದಲ್ಲಿ ಮುಳುಗಿರುವುದು ಕಾರಣ. ಎನ್ ಸಿಆರ್ ಬಿ ವರದಿ ಪ್ರಕಾರ ಪ್ರತಿ ವರ್ಷ ಮಹಿಳೆಯರ ಮೇಲಿನ ದೌರ್ಜನ್ಯ ನಡೆಯುತ್ತಿರುವ ಕುರಿತು 1210 ಪ್ರಕರಣ ದಾಖಲಾಗುತ್ತಿದೆ. ಪ್ರತಿ 18 ನಿಮಿಷಕ್ಕೆ ಒಬ್ಬ ದಲಿತನ ಕೊಲೆ ನಡೆಯುತ್ತಿದೆ. ಜನರ ಜೀವಕ್ಕೆ ಬೆಲೆ ಇಲ್ಲದಂತಾಗಿದೆ ಎಂದು ಕೆ.ಜಿ.ನಾಗರಾಜ್ ದೂರಿದರು.
ಸುದ್ದಿಗೋಷ್ಠಿಯಲ್ಲಿ ಬಿಎಸ್ಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಗೌತಮ್, ಉಪಾಧ್ಯಕ್ಷ ಗಣೇಶ್, ಮುಖಂಡರಾದ ಶ್ರೀನಿವಾಸ್, ಅನು, ರಾಮಚಂದ್ರ, ರಮೇಶ್, ಕೆಂಪರಾಜು ಮತ್ತಿತರರು ಹಾಜರಿದ್ದರು.
ರಾಮನಗರದಲ್ಲಿ ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ನಾಗರಾಜ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.