ಕನ್ನಡಪ್ರಭ ವಾರ್ತೆ ಮದ್ದೂರು
ಶ್ರೀರಾಮ ಭಕ್ತರು ದೇಗುಲಗಳಿಗೆ ತೆರಳಿ ದೇವರ ದರ್ಶನ ಪಡೆದು ಧನ್ಯತಾ ಭಾವ ಮೆರೆದರು. ಹೊಳೇ ಆಂಜನೇಯ ಸ್ವಾಮಿ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ಮುಂಜಾನೆ ದೇಗುಲದ ಪ್ರಧಾನ ಅರ್ಚಕ ಪ್ರದೀಪಚಾರ್ಯ, ಸಹ ಅರ್ಚಕ ಸುರೇಶ ಆಚಾರ್ಯ ನೇತೃತ್ವದಲ್ಲಿ ಶ್ರೀ ಆಂಜನೇಯ ಸ್ವಾಮಿ ಮೂಲ ವಿಗ್ರಹಕ್ಕೆ ಮಧು, ಪಂಚಾಮೃತ ಅಭಿಷೇಕದೊಂದಿಗೆ ಅರಿಶಿಣ ಮತ್ತು ಪುಷ್ಪಾಲಂಕಾರ ಸೇವೆ ನೆರವೇರಿಸಲಾಯಿತು.
ನಂತರ ಸೀತಾರಾಮ ಲಕ್ಷ್ಮಣ ಸಮೇತ ಹನುಮ ಉತ್ಸವ ಮೂರ್ತಿಗಳನ್ನು ಸಮೀರ ರಥದಲ್ಲಿ ಪ್ರತಿಷ್ಠಾಪನೆ ಮಾಡಿ ದೇಗುಲದ ಪ್ರಾಂಗಣದಲ್ಲಿ ರಥೋತ್ಸವ ನೆರೆವೇರಿಸಲಾಯಿತು. ಮುಜರಾಯಿ ಇಲಾಖೆ ಪರವಾಗಿ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ರಥೋತ್ಸವಕ್ಕೆ ಚಾಲನೆ ನೀಡಿದರು.ಶಾಸಕ ಕೆ.ಎಂ.ಉದಯ್, ಚಲನಚಿತ್ರ ನಟ ನಾಣಿ, ಮನ್ಮುಲ್ ಮಾಜಿ ನಿರ್ದೇಶಕಿ ರೂಪ, ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ದೇವಾಲಯಕ್ಕೆ ಆಗಮಿಸಿ ದರ್ಶನ ಪಡೆದು ತೀರ್ಥಪ್ರಸಾದ ಸ್ವೀಕರಿಸಿದರು. ದೇಗುಲದ ವತಿಯಿಂದ ಭಕ್ತಾದಿಗಳಿಗೆ ಮಜ್ಜಿಗೆ ಪಾನಕದೊಂದಿಗೆ ಪ್ರಸಾದ ರೂಪದಲ್ಲಿ ಅನ್ನ ಸಂತರ್ಪಣೆನಡೆಯಿತು. ಕೋಟೆ ಬೀದಿಯಶ್ರೀ ಪಟ್ಟಾಭಿರಾಮ ಚಂದ್ರ ದೇವಾಲಯದಲ್ಲಿ ಶ್ರೀ ರಾಮನವಮಿ ಅಂಗವಾಗಿ ಅಭಿಷೇಕ, ಪುಷ್ಪಾಲಂಕಾರ ತಂದೆಗೆ ವಿಶೇಷ ಪೂಜಾ ಕಾರ್ಯಗಳು ನೆರವೇರಿದವು.