ಕನ್ನಡಪ್ರಭ ವಾರ್ತೆ ಬೇಲೂರು
ರಸ್ತೆ ಎರಡೂ ಬದಿಗಳಲ್ಲಿ ನಿಯಮ ಉಲ್ಲಂಘಿಸಿ ವಾಹನಗಳನ್ನು ಪಾರ್ಕ್ ಮಾಡುತ್ತಿರುವ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದ್ದು, ಅಪಘಾತದ ಭೀತಿಯೂ ಹೆಚ್ಚಾಗಿದೆ. ವಿಶೇಷ ರಜಾದಿನ ಹಾಗೂ ವಾರದ ಕೊನೆಯಲಲ್ಲಿ ಅತಿ ಹೆಚ್ಚು ಪ್ರವಾಸಿಗರು ಆಗಮಿಸುತ್ತಿದ್ದು ವಾಹನ ದಟ್ಟಣೆ ಹೆಚ್ಚಾಗಿ ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡಿ ಹೋಗುತ್ತಾರೆ. ವಾಹನ ನಿಲುಗಡೆಗೆ ದೇಗುಲದ ಹಿಂಭಾಗ ವಿಶಾಲ ಜಾಗವಿದ್ದರೂ ಅಲ್ಲಿ ವಾಹನ ನಿಲ್ಲಿಸಲು ಹಿಂದೇಟು ಹಾಕುತ್ತಿದ್ದಾರೆ. ಈ ಹಿಂದೆ ಜಿಲ್ಲಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ದೇವಾಲಯಕ್ಕೆ ಭೇಟಿ ನೀಡಿದ ವೇಳೆ ದೇವಾಲಯದ ಸುತ್ತಮುತ್ತ ಹಾಗೂ ಮುಂಭಾಗದಲ್ಲಿ ವಾಹನ ಪಾರ್ಕಿಂಗ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ವಾಹನ ನಿಲುಗಡೆ ನಿಷೇಧದ ನಾಮಫಲಕಗಳನ್ನೂ ಅಳವಡಿಸಲಾಗಿತ್ತು. ಆದರೆ ಅಧಿಕಾರಿಗಳ ಸೂಚನೆಗಳು ಸಮರ್ಪಕವಾಗಿ ಜಾರಿಯಾಗದ ಕಾರಣ ಪರಿಸ್ಥಿತಿ ಮತ್ತೆ ಯಥಾಸ್ಥಿತಿಗೆ ಮರಳಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.ನಿಷೇಧದ ಫಲಕಗಳಿದ್ದರೂ ಕೆಲವರು ಯಾವುದೇ ಮುಲಾಜಿಲ್ಲದೆ ಅದರ ಪಕ್ಕದಲ್ಲೇ ವಾಹನಗಳನ್ನು ನಿಲ್ಲಿಸುತ್ತಿದ್ದಾರೆ. ಇದರಿಂದ ಮನೆಗಳಿಗೆ ತೆರಳುವ ಸ್ಥಳೀಯ ನಿವಾಸಿಗಳು ಹಾಗೂ ದೇವಾಲಯಕ್ಕೆ ಆಗಮಿಸುವ ಪ್ರವಾಸಿಗರ ನಡುವೆ ಮಾತಿನ ಚಕಮಕಿ ನಡೆಯುವುದು ಸಾಮಾನ್ಯವಾಗಿದೆ. ಅಲ್ಲದೆ, ತುರ್ತು ಸೇವೆಗಳ ವಾಹನಗಳ ಸಂಚಾರಕ್ಕೂ ಅಡಚಣೆ ಉಂಟಾಗುತ್ತಿದೆ.
ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತರು ಹಾಗೂ ದೇಶ-ವಿದೇಶಗಳಿಂದ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವುದು ಅತ್ಯಗತ್ಯವಾಗಿದೆ. ಆದರೆ ಸಂಬಂಧಪಟ್ಟ ಇಲಾಖೆಗಳಿಂದ ಸಮರ್ಪಕ ಮೇಲ್ವಿಚಾರಣೆ ಹಾಗೂ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಇಲ್ಲದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.ದೇವಾಲಯ ಆಡಳಿತ, ಪೊಲೀಸ್ ಇಲಾಖೆ ಹಾಗೂ ಪುರಸಭೆ ಅಧಿಕಾರಿಗಳು ಕೂಡಲೇ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಅನಧಿಕೃತ ವಾಹನ ಪಾರ್ಕಿಂಗ್ಗೆ ಕಡಿವಾಣ ಹಾಕಬೇಕು. ನಿಯಮ ಉಲ್ಲಂಘಿಸುವ ವಾಹನಗಳ ವಿರುದ್ಧ ದಂಡ ವಿಧಿಸುವ ಕ್ರಮ ಕೈಗೊಂಡು ಸುಗಮ ಸಂಚಾರಕ್ಕೆ ಶಾಶ್ವತ ವ್ಯವಸ್ಥೆ ಕಲ್ಪಿಸಬೇಕು ಎಂದು ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.