ಗಬ್ಬು ನಾರುತ್ತಿರುವ ಹರಪನಹಳ್ಳಿ ಬಸ್‌ ನಿಲ್ದಾಣ

KannadaprabhaNewsNetwork |  
Published : Dec 30, 2024, 01:04 AM IST
1)-29ಎಚ್‌ ಆರ್‌ ಪಿ 1 -ಹರಪನಹಳ್ಳಿ ಪಟ್ಟಣದ ಕೆಕೆಆರ್‌ಟಿಸಿ ಬಸ್ ನಿಲ್ದಾಣದ ನೋಟ.2)-29ಎಚ್‌ ಆರ್‌ ಪಿ 2 -ಹರಪನಹಳ್ಳಿ: ಬಸ್ ನಿಲ್ದಾಣದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ನಿಂತಿರುವುದು. | Kannada Prabha

ಸಾರಾಂಶ

ರಾಯಚೂರು, ಗದಗ, ದಾವಣಗೆರೆ, ಬಳ್ಳಾರಿ, ಕಲುಬುರಗಿ, ಧರ್ಮಸ್ಥಳ, ಬೆಂಗಳೂರು ಸೇರಿದಂತೆ ವಿವಿಧ ಕಡೆಯಿಂದ ನಿತ್ಯ 425ಕ್ಕೂ ಹೆಚ್ಚು ಬಸ್‌ಗಳ ಸಂಚರಿಸುತ್ತವೆ.

ಬಿ. ರಾಮಪ್ರಸಾದ್‌ ಗಾಂಧಿ

ಹರಪನಹಳ್ಳಿ: ಪಟ್ಟಣದ ಕೆಕೆಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮರ್ಪಕ ಕುಡಿಯುವ ನೀರು, ಆಸನದ ವ್ಯವಸ್ಥೆ, ವಿಶ್ರಾಂತಿ ಕೊಠಡಿ ಇಲ್ಲದೇ ಸಾರ್ವಜನಿಕರು, ಪ್ರಯಾಣಿಕರು ನಿತ್ಯ ಪರದಾಡುವಂತಾಗಿದೆ.

ಹೌದು, ಪಟ್ಟಣದ ಹರಿಹರ-ಹೊಸಪೇಟೆ ರಸ್ತೆಗೆ ಹೊಂದಿಕೊಂಡಿರುವ ಕಲ್ಯಾಣ ಕನಾಟಕ ಸಾರಿಗೆ ನಿಗಮ ಹೊಸಪೇಟೆ ವಿಭಾಗಕ್ಕೆ ಒಳಪಟ್ಟಿರುವ ಹರಪನಹಳ್ಳಿ ಬಸ್ ನಿಲ್ದಾಣವು ಮೂಲಸೌಲಭ್ಯದ ಕೊರತೆಯಿಂದ ಬಳಲುತ್ತಿದೆ.

40 ವರ್ಷಗಳ ಹಿಂದೆ ಆರಂಭವಾದ ಈ ಬಸ್ ನಿಲ್ದಾಣವು ಹಲವು ವರ್ಷಗಳಿಂದ ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸುತ್ತ ಬಂದಿದೆಯಾದರೂ ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ಇದುವರೆಗೂ ಸಾಧ್ಯವಾಗುತ್ತಿಲ್ಲ.

ರಾಯಚೂರು, ಗದಗ, ದಾವಣಗೆರೆ, ಬಳ್ಳಾರಿ, ಕಲುಬುರಗಿ, ಧರ್ಮಸ್ಥಳ, ಬೆಂಗಳೂರು ಸೇರಿದಂತೆ ವಿವಿಧ ಕಡೆಯಿಂದ ನಿತ್ಯ 425ಕ್ಕೂ ಹೆಚ್ಚು ಬಸ್‌ಗಳ ಸಂಚರಿಸುತ್ತವೆ. 5 ಸಾವಿರಕ್ಕೂ ಹೆಚ್ಚು ಪ್ರಯಾಣಿಕರಿಗೆ ಬಂದು ಹೋಗುತ್ತಾರೆ. ಆದರೆ ಇಲ್ಲಿ ಪ್ರಯಾಣಿಕರಿಗೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ನಿಲ್ದಾಣದಲ್ಲಿ ಎರಡು ಕುಡಿಯುವ ನೀರಿನ ಘಟಕಗಳಿದ್ದರೂ ಬಂದ್ ಆಗಿವೆ. ಇದರಿಂದ ಪ್ರಯಾಣಿಕರು ಹಣ ಕೊಟ್ಟು ನೀರು ಖರೀದಿಸಬೇಕಾದ ಅನಿವಾರ್ಯತೆ ಬಂದೊದಗಿದೆ.

ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಸೂಕ್ತ ಆಸನದ ವ್ಯವಸ್ಥೆ ಇಲ್ಲ. ನಿಂತುಕೊಳ್ಳಬೇಕಾದ ಪರಿಸ್ಥಿತಿ ಇದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರಿಗೆ ಇಲಾಖೆಯ ಚಾಲಕ ನಿರ್ವಾಹಕರು ಹಾಗೂ ಪ್ರಯಾಣಿಕರಿಗೆ ವಿಶ್ರಾಂತಿಗಾಗಿ ಪ್ರತ್ಯೇಕ ಕೊಠಡಿ ಇಲ್ಲ. ವಿಶ್ರಾಂತಿ ಪಡೆಯಲು ಪರದಾಡುವಂತಾಗಿದೆ. ಬಸ್ ನಿಲ್ದಾಣದಲ್ಲಿ ಕನಿಷ್ಠ ಸೌಲಭ್ಯಗಳೂ ಇಲ್ಲದಿದ್ದರಿಂದ ನಿತ್ಯ ಸಿಬ್ಬಂದಿ ಪ್ರಯಾಣಿಕರು ಕಷ್ಟ ಅನುಭವಿಸುತ್ತಿದ್ದಾರೆ.

ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಮಾಯವಾಗಿದೆ. ಸೊಳ್ಳೆಗಳ ಕಾಟ ವಿಪರೀತವಾಗಿದೆ. ಬಸ್ ನಿಲ್ದಾಣದಲ್ಲಿ ರಾತ್ರಿ ವಸತಿ ಮಾಡುವ ಸಾರಿಗೆ ಸಿಬ್ಬಂದಿ ಬಸ್‌ನಲ್ಲೇ ಮಲಗುವುದು ಅನಿವಾರ್ಯವಾಗಿದೆ.

ಗಬ್ಬು ನಾರುವ ಶೌಚಾಲಯ:

ನಿಲ್ದಾಣದಲ್ಲಿ ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ಶೌಚಾಲಯ ಇದ್ದರೂ ಸ್ವಚ್ಛತೆ ಇಲ್ಲದೇ ದುರ್ವಾಸನೆಯಿಂದ ಕೂಡಿವೆ. ಇದರಿಂದ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಹೋಗುವಂತಾಗಿದೆ. ಸರಿಯಾದ ನಿರ್ವಹಣೆ ಇಲ್ಲದೇ ಕೆಲ ಶೌಚಾಲಯದ ಬಾಗಿಲುಗಳು ಸಹ ಮುರಿದು ಹೋಗಿವೆ.

ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಎನ್ನುವುದು ಮರೀಚಿಕೆಯಾಗಿದೆ. ಎಲ್ಲೆಂದರಲ್ಲಿ ಗುಟ್ಕಾ, ಪಾನ್ ಬೀಡಾ ತಿಂದು ಉಗುಳುತ್ತಿದ್ದಾರೆ. ಇಷ್ಟೆಲ್ಲ ಸಮಸ್ಯೆಗಳಿದ್ದರೂ ಇಲಾಖೆ ಅಧಿಕಾರಿಗಳು ಮಾತ್ರ ಸರಿಯಾಗಿ ನಿರ್ವಹಣೆ ಮಾಡದೇ ಮೌನವಾಗಿದ್ದಾರೆ.

ಶಿವಮೊಗ್ಗದಿಂದ ಪ್ರಯಾಣ ಮಾಡಿ ಬಂದಿದ್ದೆ. ಬಾಯಾರಿಕೆಯಿಂದ ಹರಪನಹಳ್ಳಿ ಬಸ್ ನಿಲ್ದಾಣದಲ್ಲಿ ಇಳಿದು ನೀರು ಕುಡಿಯಲು ಹೋದರೆ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇರಲಿಲ್ಲ. ಅನಿವಾರ್ಯವಾಗಿ ಹಣ ಕೊಟ್ಟು ನೀರು ಖರೀದಿಸಿದೆ. ಸಾರಿಗೆ ಇಲಾಖೆ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎನ್ನುತ್ತಾರೆ ಮರಿಯಮ್ಮನಹಳ್ಳಿ ಪ್ರಯಾಣಿಕ ಬಸವರಾಜ.

ಬಸ್ ನಿಲ್ದಾಣದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ನಿರ್ಮಿಸುವಂತೆ ಕಳೆದ ಮೂರು ವರ್ಷದಿಂದ ಹೋರಾಟ ಮಾಡುತ್ತಾ ಬಂದಿದ್ದೇವೆ. ಆದರೂ ಸಾರಿಗೆ ಇಲಾಖೆಯವರು ಈ ಬಗ್ಗೆ ನಿರ್ಲಕ್ಷ್ಯ ಮಾಡುತ್ತ ಬಂದಿದ್ದಾರೆ ಎನ್ನುತ್ತಾರೆ ಎಸ್‌ಎಫ್‌ಐ ಜಿಲ್ಲಾ ಸಹ ಕಾರ್ಯದರ್ಶಿ ಸಂಜುನಾಯ್ಕ್ ಎಲ್.ಜಿ.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ