ಹಾರೋಹಳ್ಳಿ: ಹೊಸ ತಾಲೂಕಾಗಿ ರಚನೆಯಾದ ಬಳಿಕವೂ ಹಾರೋಹಳ್ಳಿ ಅಭಿವೃದ್ಧಿಯಲ್ಲಿ ನಿರೀಕ್ಷಿತ ಪ್ರಗತಿ ಕಾಣದೆ ಹಿಂದುಳಿದಿದೆ. ಪ್ರಸ್ತುತ ಮಳೆ ಕೊರತೆಯಿಂದ ಬೆಳೆ ಹಾನಿಯಾಗಿದ್ದು, ಹಾರೋಹಳ್ಳಿಯನ್ನು ಬರಪೀಡಿತ ತಾಲೂಕು ಎಂದು ರಾಜ್ಯಸರ್ಕಾರ ಘೋಷಿಸಬೇಕು ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.
ತಾಲೂಕಿನಲ್ಲಿ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಕೆರೆ- ಕಟ್ಟೆಗಳು ಸಂಪೂರ್ಣ ಬತ್ತಿಹೋಗಿವೆ. ಗಾಣಾಳು ಕೆರೆ ಏತ ನೀರಾವರಿ ಯೋಜನೆಯ ಮೂಲಕ 24 ಕೆರೆಗಳನ್ನು ತುಂಬಿಸುವ ಕಾಮಗಾರಿ ನಡೆಯುತ್ತಿದ್ದು, ಎಲ್ಲಾ ಕೆರೆಗಳಿಗೂ ನೀರು ತುಂಬಿಸಿದರೆ ಹಾರೋಹಳ್ಳಿ ತಾಲೂಕು ಹಸಿರು ವಲಯವಾಗಿ ಪರಿವರ್ತನೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದರು.
ಕೆರೆಗೆ ನೀರು ತುಂಬಿಸುವ ಯೋಜನೆಗೆ ಖಾಸಗಿ ವ್ಯಕ್ತಿಯೊಬ್ಬರು ತಡೆಯಾಜ್ಞೆ ತಂದಿದ್ದರು. ಆದರೆ ನ್ಯಾಯಾಲಯವು ತಡೆಯಾಜ್ಞೆಯನ್ನು ತೆರವುಗೊಳಿಸಿದ್ದು, ಇದೀಗ ಯೋಜನೆಗೆ ಯಾವುದೇ ಅಡೆತಡೆ ಇಲ್ಲವಾಗಿದೆ. ಹೀಗಾಗಿ ಕಾಮಗಾರಿಯನ್ನು ಸಮರ್ಪಕವಾಗಿ ಮುಂದುವರಿಸಿ, 24 ಕೆರೆಗಳಿಗೂ ನೀರು ತುಂಬಿಸುವ ಮೂಲಕ ತಾಲೂಕಿನ ಕೃಷಿ ಹಾಗೂ ಜನಜೀವನಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದು ತಿಳಿಸಿದರು.ಕ್ಷೇತ್ರದ ಸಮಗ್ರ ಅಭಿವೃದ್ಧಿಯನ್ನು ಗುರಿಯಾಗಿರಿಸಿಕೊಂಡು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಸರ್ಕಾರದ ವಿವಿಧ ಅನುದಾಗಳಿಂದ ₹6.80 ಕೋಟಿ ಬಿಡುಗಡೆಯಾಗಿದೆ. ಇದರಿಂದ ಈ ಪ್ರದೇಶದ ವ್ಯಾಪ್ತಿಯ ಜನರಿಗೆ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಲು ಗುರಿ ಹೊಂದಲಾಗಿದೆ ಎಂದು ಇಕ್ಬಾಲ್ ಹುಸೇನ್ ಹೇಳಿದರು.
5ಕೆಆರ್ ಎಂಎನ್ 4.ಜೆಪಿಜಿ