ಇಂದಿನಿಂದ ಹಾಸನಾಂಬೆ ಜಾತ್ರೆ ಆರಂಭ

KannadaprabhaNewsNetwork |  
Published : Oct 09, 2025, 02:00 AM IST
8ಎಚ್ಎಸ್ಎನ್13ಎ : ದೇವಾಲಯದ ಮುಂಭಾಗ ಅಲಂಕಾರ ಮಾಡಿರುವುದು. | Kannada Prabha

ಸಾರಾಂಶ

ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ಭಾಗ್ಯ ಕಲ್ಪಿಸುವ ಇತಿಹಾಸ ಪ್ರಸಿದ್ಧ ಹಾಸನದ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಗುರುವಾರದಿಂದ ಪ್ರಾರಂಭವಾಗಲಿದೆ.

ಕನ್ನಡಪ್ರಭವಾರ್ತೆ, ಹಾಸನ

ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ಭಾಗ್ಯ ಕಲ್ಪಿಸುವ ಇತಿಹಾಸ ಪ್ರಸಿದ್ಧ ಹಾಸನದ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಗುರುವಾರದಿಂದ ಪ್ರಾರಂಭವಾಗಲಿದೆ.

ಮಧ್ಯಾಹ್ನ 12 ಗಂಟೆ ನಂತರ ಅರಸು ವಂಶಸ್ಥರು ಬನ್ನಿ ಕಡಿದ ಬಳಿಕ ಶಾಸ್ತ್ರೋಕ್ತವಾಗಿ ಹಾಸನಾಂಬ ದೇವಾಲಯದ ಗರ್ಭಗುಡಿಯ ಬಾಗಿಲು ತೆರೆಯಲಿದೆ. ಅ.23ರಂದು ದೇವಾಲಯದ ಬಾಗಿಲನ್ನು ಮುಚ್ಚಲಾಗುತ್ತದೆ. ಮೊದಲ ದಿನ ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಬಾಗಿಲು ತೆರೆದ ನಂತರ ಗರ್ಭಗುಡಿಯ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುವುದು.

ಸಾರ್ವಜನಿಕರಿಗೆ ಅ.10 ರಂದು ಬೆಳಗ್ಗೆ 5 ಗಂಟೆಯಿಂದ ಅ.22 ರವರೆಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಅ.10 ರಿಂದ ಅ.17ರವರೆಗೆ ಬೆ.10 ರಿಂದ ಮ.1 ಗಂಟೆಯವರೆಗೆ ಮಾತ್ರ ಶಿಷ್ಟಾಚಾರ ದರ್ಶನಕ್ಕೆ ಅವಕಾಶವಿರುತ್ತದೆ. ಅ.18 ರಿಂದ ಅ.22 ರವರೆಗೆ ಯಾವುದೇ ರೀತಿಯ ಶಿಷ್ಟಾಚಾರ ದರ್ಶನಕ್ಕೆ ಅವಕಾಶ ಇರುವುದಿಲ್ಲ.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ತುಮಕೂರು ಸಿದ್ಧಗಂಗಾ ಮಠದ ಸಿದ್ಧಲಿಂಗ ಮಹಾಸ್ವಾಮೀಜಿಯವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಿಎಂ ಸಿದ್ಧರಾಮಯ್ಯ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಡಿಸಿಎಂ ಡಿ.ಕೆ.ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಸಾರಿಗೆ ಸಚಿವ ರಾಮಲಿಂಗರೆಡ್ಡಿ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಹಾಸನಾಂಬ ಮತ್ತು ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವಗಳನ್ನು ಹಿಂದಿಗಿಂತಲೂ ಈ ಬಾರಿ ಅದ್ಧೂರಿಯಾಗಿ ಆಚರಿಸಲು ಸಿದ್ಧತೆಗಳು ಭರದಿಂದ ಸಾಗಿವೆ. ಈ ಬಾರಿ ದೇವಿ ದರ್ಶನದ ಜೊತೆಗೆ ಟೂರ್ ಪ್ಯಾಕೇಜ್, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಯೋಜನೆ ಹಮ್ಮಿಕೊಳ್ಳಲಾಗಿದೆ. ಕಳೆದ ಬಾರಿ 20 ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದಿದ್ದರು. ಈ ಬಾರಿ ಭಕ್ತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ, ನೂಕುನುಗ್ಗಲು ಉಂಟಾಗುವುದನ್ನು ತಡೆಯಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ.

ವಿಶೇಷ ದರ್ಶನಕ್ಕೆ ಬರುವಂತಹ ಭಕ್ತರಿಗೆ ₹300 ಹಾಗೂ ₹1,000ದ ಪಾಸ್ ವ್ಯವಸ್ಥೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ವಿಐಪಿ, ವಿವಿಐಪಿ ಪಾಸ್‌ಗಳನ್ನು ರದ್ದು ಮಾಡಿದ್ದು, ಗೋಲ್ಡ್ ಪಾಸ್ ಜಾರಿಗೆ ತರಲಾಗಿದೆ.

ಒಂದು ಪಾಸ್‌ಗೆ ಒಬ್ಬರಿಗೆ ಮಾತ್ರ ಅವಕಾಶವಿದ್ದು, ದಿನದಲ್ಲಿ ಎರಡು ಗಂಟೆ ಮಾತ್ರ ದೇವಿ ದರ್ಶನಕ್ಕೆ ಅವಕಾಶ ನೀಡಲಾಗಿದೆ. ದರ್ಶನಕ್ಕೆ ಬರುವ ವೃದ್ಧರು ಮತ್ತು ಅಂಗವಿಕಲರನ್ನು ದೇವರ ದರ್ಶನಕ್ಕೆ ಕರೆದುಕೊಂಡು ಹೋಗಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ.

PREV

Recommended Stories

ದಲಿತರಿಗೆ ದಿಲ್ಲಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ : ಜಾರಕಿಹೊಳಿ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ