ಕನ್ನಡಪ್ರಭ ವಾರ್ತೆ ಹಾಸನ
ಬೆಳಗ್ಗೆಯೇ ಆರಂಭವಾದ ಕಾರ್ಯಾಚರಣೆಯಲ್ಲಿ ರೈಲ್ವೆ ರಸ್ತೆ ಮತ್ತು ಜಿಲ್ಲಾ ಆಸ್ಪತ್ರೆ ಎದುರಿನ ಪಾದಚಾರಿ ಮಾರ್ಗವನ್ನು ಅತಿಕ್ರಮಿಸಿಕೊಂಡಿದ್ದ ತಾತ್ಕಾಲಿಕ ಗೂಡಂಗಡಿಗಳನ್ನು ತೆರವುಗೊಳಿಸಲಾಯಿತು. ಜೆಸಿಬಿ ಯಂತ್ರದ ಮೂಲಕ ಅಂಗಡಿಗಳನ್ನು ತೆರವುಗೊಳಿಸುತ್ತಿದ್ದಂತೆ ಕೆಲ ವ್ಯಾಪಾರಿಗಳು ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿ, ಜೀವನೋಪಾಯ ಕಸಿದುಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವ್ಯಾಪಾರಿಗಳು ಮಾತನಾಡಿ, ನಗರದ ಅನೇಕ ಕಡೆಗಳಲ್ಲಿ ಇದೇ ರೀತಿ ಬೀದಿಬದಿ ಅಂಗಡಿಗಳು ಕಾರ್ಯನಿರ್ವಹಿಸುತ್ತಿವೆ. ಆಯ್ದ ಕೆಲವರ ಅಂಗಡಿಗಳನ್ನು ಮಾತ್ರ ತೆರವುಗೊಳಿಸುವುದು ನ್ಯಾಯಸಮ್ಮತವಲ್ಲ. ಪಾಲಿಕೆಗೆ ಪ್ರತಿದಿನ ಶುಲ್ಕ ಪಾವತಿಸುತ್ತಿದ್ದರೂ ಯಾವುದೇ ಲಿಖಿತ ನೋಟಿಸ್ ನೀಡದೆ ಏಕಾಏಕಿ ತೆರವು ಕಾರ್ಯಾಚರಣೆ ನಡೆಸಿರುವುದು ಸರಿಯಾದ ಕ್ರಮವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಬಡ ಕುಟುಂಬಗಳ ಜೀವನೋಪಾಯಕ್ಕೆ ಈ ಅಂಗಡಿಗಳೇ ಆಧಾರವಾಗಿದ್ದು, ಪರ್ಯಾಯ ವ್ಯವಸ್ಥೆ ಕಲ್ಪಿಸದೆ ತೆರವುಗೊಳಿಸಿರುವುದು ಸಂಕಷ್ಟಕ್ಕೆ ದೂಡಿದೆ ಎಂದು ಆರೋಪಿಸಿದರು.
ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಗೂಡಂಗಡಿ ನಿರ್ಮಿಸಿ ವ್ಯಾಪಾರ ನಡೆಸುವುದು ನಿಯಮಬಾಹಿರ. ಬೆಳಗ್ಗೆ ೬ ಗಂಟೆಯಲ್ಲೇ ಸ್ಥಳ ಖಾಲಿ ಮಾಡುವಂತೆ ಎಚ್ಚರಿಕೆ ನೀಡಲಾಗಿತ್ತು. ಅದರಂತೆ ಬೆಳಗ್ಗೆ ೧೦ ಗಂಟೆಯಿಂದ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಜಿಲ್ಲಾ ಆಸ್ಪತ್ರೆ ಎದುರು ಆಹಾರ ಪದಾರ್ಥಗಳ ಮಾರಾಟ ನಡೆಯುತ್ತಿದ್ದು, ಸ್ವಚ್ಛತಾ ನಿಯಮಗಳನ್ನು ಪಾಲಿಸದಿರುವ ಬಗ್ಗೆ ನಿರಂತರ ದೂರುಗಳು ಬಂದಿದ್ದವು. ಪಾದಚಾರಿ ಮಾರ್ಗಗಳಲ್ಲಿ ಕಸ, ಬಳಸಿದ ಕಾಫಿ ಲೋಟಗಳು, ಎಣ್ಣೆ ಬಾಟಲಿಗಳು ಹಾಗೂ ಇತರ ತ್ಯಾಜ್ಯಗಳು ಬಿದ್ದಿರುವುದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿತ್ತು. ಆಸ್ಪತ್ರೆ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡುವುದು ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದರು.
ಸಾರ್ವಜನಿಕರ ಸುರಕ್ಷತೆ, ಪಾದಚಾರಿಗಳ ಅನುಕೂಲ ಹಾಗೂ ನಗರ ಸ್ವಚ್ಛತೆಯನ್ನು ಕಾಪಾಡುವುದು ಪಾಲಿಕೆಯ ಪ್ರಮುಖ ಹೊಣೆಗಾರಿಕೆಯಾಗಿದೆ. ಆದ್ದರಿಂದ ತಳ್ಳುಗಾಡಿ ಹಾಗೂ ಗೂಡಂಗಡಿಗಳನ್ನು ಎಲ್ಲೆಂದರಲ್ಲಿ ಸ್ಥಾಪಿಸಲು ಅವಕಾಶ ನೀಡಲಾಗುವುದಿಲ್ಲ ಎಂದು ಅವರು ಹೇಳಿದರು.