ರಾಮನಗರ: ಲೋಕಸಭಾ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ನಿರೀಕ್ಷೆಯಂತೆ ಕಾಂಗ್ರೆಸ್ ಪಕ್ಷ ಹ್ಯಾಟ್ರಿಕ್ ಸಂಸದ ಡಿ.ಕೆ.ಸುರೇಶ್ ಹೆಸರನ್ನು ಘೋಷಿಸಿದೆ. ಆದರೆ, ಎನ್ ಡಿಎ ಮೈತ್ರಿಕೂಟದಲ್ಲಿ ಅಭ್ಯರ್ಥಿ ಆಯ್ಕೆ ಗೊಂದಲ ಮುಂದುವರೆದಿದೆ.
ಆದರೆ, ಡಿ.ಕೆ.ಸುರೇಶ್ ಅವರು ಕೆಲ ತಿಂಗಳ ಹಿಂದೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ತೀರ್ಮಾನ ಮಾಡಿಲ್ಲ. ಗೊಂದಲದಲ್ಲಿಯೇ ಇದ್ದೇನೆ. ರಾಜಕಾರಣ ಬೇಕೋ ಬೇಡವೋ ಎನ್ನುವ ಹಂತಕ್ಕೆ ಬಂದಿದ್ದೇನೆ ಎಂದು ವೈರಾಗ್ಯದ ಮಾತುಗಳನ್ನು ಆಡಿದ್ದರು. ಅಲ್ಲದೆ, ಬೆಂಗಳೂರು ಉತ್ತರ ಕ್ಷೇತ್ರಕ್ಕೆ ವಲಸೆ ಹೋಗುತ್ತಾರೆ ಎಂಬ ವದಂತಿಗಳು ಹರಿದಾಡುತ್ತಿದ್ದವು. ಈಗ ಟಿಕೆಟ್ ಘೋಷಣೆಯಾಗುವ ಮೂಲಕ ವದಂತಿಗಳಿಗೆಲ್ಲ ತೆರೆ ಬಿದ್ದಿದೆ.
ಕೈಗೆ ಕ್ಷೇತ್ರ ಉಳಿಸಿಕೊಳ್ಳುವ ಸವಾಲು :2019ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಪೈಕಿ ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಗೆಲವು ಸಾಧಿಸಿದ ಏಕೈಕ ಕ್ಷೇತ್ರವಾಗಿತ್ತು. ದೇಶ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ನಿರಾಶಾದಾಯಕ ಪ್ರದರ್ಶನ ನೀಡಿದ್ದರೂ ಕ್ಷೇತ್ರದ ಮತದಾರರು ಡಿ.ಕೆ.ಸುರೇಶ್ ಕೈ ಹಿಡಿದಿದ್ದರು. ಅಂದು ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಸುರೇಶ್ ಬಿಜೆಪಿ ಅಭ್ಯರ್ಥಿ ಅಶ್ವತ್ಥ ನಾರಾಯಣಗೌಡ ವಿರುದ್ಧ ನಿರೀಕ್ಷಿತ ಅಂತರದ ಗೆಲುವು ಸಾಧಿಸಲಿಲ್ಲ. ಆದರೂ ಅವರಿಗೆ ಸಿಕ್ಕ ಗೆಲವು ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್ ಪಾಲಿಗೆ ಅಮೂಲ್ಯದಾಗಿತ್ತು.
ಬಿಜೆಪಿ - ಜೆಡಿಎಸ್ ಮಿತ್ರ ಪಕ್ಷಗಳ ತಂತ್ರ ಏನು? :
ಈಗಾಗಲೇ ಕ್ಷೇತ್ರದ ಸಿದ್ಧತೆ, ಅಭ್ಯರ್ಥಿ ಆಯ್ಕೆ ಇನ್ನಿತರೆ ಅಂಶಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ನಿವಾಸದಲ್ಲಿ ಎನ್ ಡಿಎ ಮೈತ್ರಿಕೂಟದ ನಾಯಕರ ಜತೆ ಮಹತ್ವದ ಸಮಾಲೋಚನೆ ನಡೆಸಿದ್ದಾರೆ. ಆ ಸಭೆಯಲ್ಲಿದ್ದ ನಾಯಕರೆಲ್ಲರು ಸಿ.ಪಿ.ಯೋಗೇಶ್ವರ್ ಅವರೇ ಅಭ್ಯರ್ಥಿ ಆಗಬೇಕೆಂದು ಹೇಳಿದರೆ, ಸಿ.ಪಿ.ಯೋಗೇಶ್ವರ್ ರವರು ನಾನು ರಾಜ್ಯ ರಾಜಕಾರಣದಲ್ಲಿ ಇರಲು ಇಷ್ಟ, ಡಾ.ಸಿ.ಎನ್.ಮಂಜುನಾಥ್ ಅವರನ್ನು ಎನ್ ಡಿಎ ಅಭ್ಯರ್ಥಿಯಾಗಲೆಂದು ಸಲಹೆ ನೀಡಿದ್ದಾರೆ. ಕೊನೆಗೆ ನಾಯಕರೆಲ್ಲರು ಅಭ್ಯರ್ಥಿ ಆಯ್ಕೆಯನ್ನು ವರಿಷ್ಠರ ತೀರ್ಮಾನಕ್ಕೆ ಬಿಡುವ ನಿರ್ಧಾರ ಕೈಗೊಂಡರು ಎಂದು ತಿಳಿದು ಬಂದಿದೆ.
ಕ್ಷೇತ್ರದಲ್ಲಿ ಬಲ ಹೆಚ್ಚಿಸಿಕೊಂಡ ಕೈ ಪಡೆ :
ಈ 8 ಕ್ಷೇತ್ರಗಳ ಪೈಕಿ 5 ರಲ್ಲಿ ಕಾಂಗ್ರೆಸ್ ಶಾಸಕರಿದ್ದರೆ, 2 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ 1 ಕ್ಷೇತ್ರದಲ್ಲಿ ಜೆಡಿಎಸ್ ಶಾಸಕರಿದ್ದಾರೆ. ಕಳೆದ ಲೋಕಸಭಾ ಚುನಾವಣೆಗೆ ಹೋಲಿಸಿದರೆ, ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ತನ್ನ ಬಲ ಹೆಚ್ಚಿಸಿಕೊಂಡಿದೆ.
ಡಿಕೆಸು ರಾಜಕೀಯ ಹಾದಿ :
013 ರಲ್ಲಿ ಕ್ಷೇತ್ರದ ಸಂಸದರಾಗಿದ್ದ ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್ ನ ಅನಿತಾ ಕುಮಾರಸ್ವಾಮಿ ಅವರನ್ನು ಡಿ.ಕೆ.ಸುರೇಶ್ ಮಣಿಸಿ ಮೊದಲ ಬಾರಿಗೆ ಲೋಕಸಭೆ ಪ್ರವೇಶಿಸಿದರು. 2014 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಪಿ.ಮುನಿರಾಜುಗೌಡ ಅವರನ್ನು ಸುರೇಶ್ ಸೋಲಿಸಿದರು. ಕಳೆದ (2019)ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿದ್ದ ಡಿ.ಕೆ.ಸುರೇಶ್ ರವರು ಬಿಜೆಪಿಯ ಅಶ್ವತ್ಥ ನಾರಾಯಣಗೌಡ ಅವರನ್ನು ಪರಾಭವಗೊಳಿಸಿದರು. ಈ ಮೂಲಕ ರಾಜ್ಯದಿಂದ ಆಯ್ಕೆಯಾದ ಕಾಂಗ್ರೆಸ್ ನ ಏಕೈಕ ಸಂಸದ ಎಂಬ ಹಿರಿಮೆಗೂ ಪಾತ್ರರಾದವರು.(ನಕ್ಷೆದು ಒಂದು ಪೋಟೋ ಮಾತ್ರ ಬಳಸಿ)
9ಕೆಆರ್ ಎಂಎನ್ 4,5,6.ಜೆಪಿಜಿ4.ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್
5,6ಬೆಂಗಳೂರು ಗ್ರಾಮಾಂತರ ಕ್ಷೇತ್ರ ನಕ್ಷೆ