ಹಾವೇರಿ: ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಘೋಷಿಸಿ ಹಾಗೂ ಖರೀದಿ ಕೇಂದ್ರ ತೆರೆಯಲು ಒತ್ತಾಯಿಸಿ ನ. 24ರಂದು ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಗೂ ಅಹೋರಾತ್ರಿ ಧರಣಿ ಸತ್ಯಾಗ್ರಹ ಪ್ರಾರಂಭಿಸಲಾಗುವುದು ಎಂದು ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಹೇಳಿದರು.
ದುಬಾರಿ ಬೀಜ ಗೊಬ್ಬರ, ಅಸಮರ್ಪಕ ವಿದ್ಯುತ್ ಪೂರೈಕೆ ನೀತಿ, ಬೆಲೆ ನೀತಿ, ಸಾಲ ನೀತಿಗಳಿಂದ ರೈತ ಸಂಕಷ್ಟದಿಂದ ಹೊರಬರಲು ಸಾಧ್ಯವಾಗಿಲ್ಲ. ಬಂಡವಾಳಶಾಹಿಗಳ ಸಾಲ ಮನ್ನಾ ಮಾಡಿ ಸಹಾಯ ಮಾಡುವ ಕೇಂದ್ರ ಸರ್ಕಾರ ರೈತರ ಬಗ್ಗೆ ನಿರ್ಲಕ್ಷ್ಯ ಮಾಡುವುದು ರೈತ ವಿರೋಧಿ ನೀತಿಯಾಗಿದೆ. ಇಂತಹ ಭಂಡ ಸರ್ಕಾರಗಳ ವಿರುದ್ಧ ಹೋರಾಟ ಮಾಡುವುದು ಅನಿವಾರ್ಯವಾಗಿದ್ದು, ನ. 24ರಂದು ಡಿಸಿ ಕಚೇರಿಗೆ ಮುತ್ತಿಗೆ ಹಾಕಿ, ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ನಡೆಸಲಾಗುವುದು. ರೈತರು, ಪ್ರಗತಿಪರ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು, ಮಠಾಧೀಶರು ಚಳವಳಿಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಬೇಕು. ಅಗತ್ಯ ಬಿದ್ದರೆ ಜೈಲ್ ಭರೋ, ಹೆದ್ದಾರಿ ತಡೆ ನಡೆಸಿ ಉಗ್ರ ರೀತಿಯಲ್ಲಿ ಹೋರಾಟ ನಡೆಸಲಾಗುವುದು. ನಮ್ಮ ಬೇಡಿಕೆ ಈಡೇರದೇ ನಿರ್ಧಾರದಿಂದ ಹಿಂದಕ್ಕೆ ಸರಿಯುವುದಿಲ್ಲ ಎಂದು ಎಚ್ಚರಿಸಿದರು.
ರಾಜ್ಯ ಸಮಿತಿ ಸದಸ್ಯ ಮಾಲತೇಶ ಪೂಜಾರ ಮಾತನಾಡಿ, ಎಸ್ಡಿಆರ್ಎಫ್, ಎನ್ಡಿಆರ್ಎಫ್ ಮಾರ್ಗಸೂಚಿಯನ್ವಯ ಸರ್ಕಾರ ಬೆಳೆ ನಷ್ಟ ಪರಿಹಾರ ನೀಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆರೋಪ, ಪ್ರತ್ಯಾರೋಪ ಮಾಡುವುದನ್ನು ಬಿಟ್ಟು ಕನಿಷ್ಠ ಬೆಂಬಲ ಬೆಲೆ ನೀಡುವ ಮೂಲಕ ರೈತರ ನೆರವಿಗೆ ಧಾವಿಸಬೇಕು. ರೈತರ ಬೇಡಿಕೆ ಈಡೇರಿಸದಿದ್ದರೆ ದಿಲ್ಲಿ ಮಾದರಿಯಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದರು.ಜಿಲ್ಲಾ ಉಪಾಧ್ಯಕ್ಷ ಎಚ್.ಎಚ್. ಮುಲ್ಲಾ, ಮರಿಗೌಡ್ರ ಪಾಟೀಲ, ಪ್ರಭುಗೌಡ ಪ್ಯಾಟಿ, ಚನ್ನಪ್ಪ ಮರಡೂರ, ಶಿವಯೋಗಿ ಹೊಸಗೌಡ್ರ, ರಾಜು ತರ್ಲಗಟ್ಟ, ಶಂಕ್ರಣ್ಣ ಶಿರಗಂಬಿ, ಸುರೇಶ ಹೊನ್ನಪ್ಪನವರ, ಗಂಗನಗೌಡ ಮುದಿಗೌಡ್ರ, ಬಸನಗೌಡ ಗಂಗಪ್ಪನವರ, ಅಬ್ದುಲ್ಖಾದರ್ ಬುಡಂದಿ, ನವೀನ ಹುಲ್ಲತ್ತಿ, ಅಖೀಲಗೌಡ ಪಾಟೀಲ ಇತರರು ಇದ್ದರು.
ಹುಸಿಯಾದ ಭರವಸೆ: ಬೆಳೆ ಹಾನಿ ಪರಿಹಾರ ನೀಡಲು ₹38 ಕೋಟಿ ಇದೆ. ರೈತರಿಗೆ ದೀಪಾವಳಿಗೆ ಉಡುಗೊರೆ ಕೊಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿ ಭರವಸೆ ನೀಡಿದ್ದರು. ಆದರೆ ನವೆಂಬರ್ ತಿಂಗಳು ಕಳೆಯುತ್ತಾ ಬಂದರೂ ಯಾವುದೇ ಪರಿಹಾರ ನೀಡಿಲ್ಲ. ಸಚಿವರು ನೀಡಿದ ಭರವಸೆ ಹುಸಿಯಾಗಿದೆ. ಕೇಂದ್ರ ಸರ್ಕಾರ ಕೂಡ ಮಾರ್ಗಸೂಚಿಯನ್ವಯ ರೈತರ ನೆರವಿಗೆ ಬರಬೇಕು. ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ಅಮೆರಿಕಾದೊಂದಿಗೆ ಮುಕ್ತ ವ್ಯಾಪಾರ ವಹಿವಾಟಿಗೆ ಒಪ್ಪಬಾರದು. ಹೀಗಾದಲ್ಲಿ ರೈತರು ಇನ್ನು ಮುಂದೆ ಮೆಕ್ಕೆಜೋಳ ಬೆಳೆಯುವುದನ್ನೆ ನಿಲ್ಲಿಸಬೇಕಾದ ಸಂದರ್ಭ ಬರಬಹುದು ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಹೇಳಿದರು.