ಹಾವೇರಿ ವಿವಿ ಬಂದ್ ಆಗಲ್ಲ, ಆತಂಕ ಬೇಡ

KannadaprabhaNewsNetwork |  
Published : Apr 13, 2025, 02:14 AM IST
12ಎಚ್‌ವಿಆರ್3- | Kannada Prabha

ಸಾರಾಂಶ

ಹಾವೇರಿ ವಿವಿ ಉಳಿವಿಗೆ ಕುಲಪತಿಗಳು ಶ್ರಮಿಸುತ್ತಿದ್ದಾರೆ, ಹಾಗಾಗಿ ಜಿಲ್ಲೆಯ ಉಸ್ತುವಾರಿ ಸಚಿವರು ಸೇರಿದಂತೆ ಎಲ್ಲ ಶಾಸಕರು ವಿಶ್ವವಿದ್ಯಾಲಯ ಉಳಿಸಿ ಬೆಳೆಸಲು ಸದಾ ನಿಮ್ಮೊಂದಿಗೆ ಕೈಜೋಡಿಸುತ್ತೇವೆ

ಹಾವೇರಿ: ವಿಶ್ವವಿದ್ಯಾಲಯ ಉಳಿಸಿ, ಬೆಳೆಸುವ ಮೂಲಕ ರಾಜ್ಯದಲ್ಲಿಯೇ ಮಾದರಿ ರೀತಿಯಲ್ಲಿ ಅಭಿವೃದ್ಧಿಪಡಿಸುವುದು ನಮ್ಮ ಸಂಕಲ್ಪವಾಗಿದೆ. ಹಾವೇರಿ ವಿಶ್ವವಿದ್ಯಾಲಯ ಬಂದ್ ಆಗಲ್ಲ, ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಆತಂಕಪಡುವ ಅಗತ್ಯವಿಲ್ಲ ಎಂದು ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಇಲ್ಲಿಯ ಕೆರಿಮತ್ತಿಹಳ್ಳಿಯ ಹಾವೇರಿ ವಿಶ್ವವಿದ್ಯಾಲಯದ ಸಭಾಭವನದಲ್ಲಿ ಶನಿವಾರ ಏರ್ಪಡಿಸಿದ್ದ ಹಾವೇರಿ ವಿಶ್ವವಿದ್ಯಾಲಯದ ದ್ವಿತೀಯ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಹಾವೇರಿ ವಿವಿ ಉಳಿವಿಗೆ ಕುಲಪತಿಗಳು ಶ್ರಮಿಸುತ್ತಿದ್ದಾರೆ, ಹಾಗಾಗಿ ಜಿಲ್ಲೆಯ ಉಸ್ತುವಾರಿ ಸಚಿವರು ಸೇರಿದಂತೆ ಎಲ್ಲ ಶಾಸಕರು ವಿಶ್ವವಿದ್ಯಾಲಯ ಉಳಿಸಿ ಬೆಳೆಸಲು ಸದಾ ನಿಮ್ಮೊಂದಿಗೆ ಕೈಜೋಡಿಸುತ್ತೇವೆ. ಹಾವೇರಿ ವಿಶ್ವವಿದ್ಯಾಲಯಕ್ಕೆ ವರ್ಷಕ್ಕೆ ಬೇಕಾಗುವ ಅನುದಾನ ಮಂಜೂರಾತಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಹಾವೇರಿ ವಿಶ್ವವಿದ್ಯಾಲಯ, ತೋಟಗಾರಿಕೆ ಅಭಿಯಾಂತ್ರಿಕ ಮತ್ತು ಆಹಾರ ತಂತ್ರಜ್ಞಾನ ಮಹಾವಿದ್ಯಾಲಯ, ಎಂಜನೀಯರಿಂಗ್ ಕಾಲೇಜ್ ಹಾಗೂ ಕೃಷಿ ವಿಜ್ಞಾನ ಕೇಂದ್ರ ನನ್ನ ಮತಕ್ಷೇತ್ರ ವ್ಯಾಪ್ತಿಗೆ ಬಂದಿರುವುದು ಸೌಭಾಗ್ಯ.ಈ ಶಿಕ್ಷಣ ಕೇಂದ್ರಗಳ ಬೆಳವಣಿಗೆಗೆ ನಿರಂತರ ಶ್ರಮಿಸಲಾಗುವುದು ಎಂದರು.

ದೇಶದ ಯಾವುದೇ ಭಾಗದಲ್ಲಿ ಇಲ್ಲದ ತೋಟಗಾರಿಕೆ ಅಭಿಯಾಂತ್ರಿಕ ಮತ್ತು ಆಹಾರ ತಂತ್ರಜ್ಞಾನ ಮಹಾವಿದ್ಯಾಲಯ ನಮ್ಮ ಜಿಲ್ಲೆಯಲ್ಲಿದೆ. ಕಳೆದ ಮೂರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದೆ. ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯ ಕಾಮಗಾರಿ ಪ್ರಗತಿಯಲ್ಲಿದೆ. ಮುಖ್ಯಮಂತ್ರಿಗಳು ಹಾಗೂ ತೋಟಗಾರಿಕೆ ಸಚಿವರಿಂದ ಶೀಘ್ರದಲ್ಲೆ ಉದ್ಘಾಟನೆ ಮಾಡಿಸಲಾಗುವುದು ಎಂದರು.

ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಆಲೂರ ಮಾತನಾಡಿ, ಪಜಾ.,ಪಪಂ, ಬುಡಕಟ್ಟು ಜನಾಂಗ, ಆರ್ಥಿಕವಾಗಿ ಹಿಂದುಳಿದ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ವಿಶ್ವವಿದ್ಯಾಲಯಕ್ಕೆ ಬರುತ್ತಾರೆ. ಅವರಿಗೆ ಹೊರೆಯಾಗದಂತೆ ಶಿಕ್ಷಣ ನೀಡಲಾಗುತ್ತಿದೆ. ವಿದ್ಯಾರ್ಥಿ ಜೀವನದಿಂದಲೇ ಸವಾಲು ಎದುರಿಸುವ ಗುಣ ಬೆಳೆಸಿಕೊಳ್ಳಬೇಕು. ಸಾಧಿಸುವ ಛಲ ಇರಬೇಕು. ನಿಮ್ಮ ಹಳೆಯ ಸಾಧನೆ ಯಶಸ್ಸಿನ ಮೆಟ್ಟಿಲುಗಳಾಗಬೇಕು ಎಂದು ಕರೆ ನೀಡಿದರು.

ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ, ವಿವಿಗಳು ದೇಶ ನಡೆಸುವ ನಾಯಕರು, ಸಂಶೋಧಕರು, ವಿವಿಧ ವೃತ್ತಿಪರರನ್ನು ತಯಾರಿಸುವ ಕಾರ್ಖಾನೆಗಳಾಗಿವೆ ಹಾಗೂ ಶಿಕ್ಷಣದ ಮಹತ್ವ ತಿಳಿಸುತ್ತವೆ. ಆದರೆ ಇಂದು ಭಯೋತ್ಪಾದನೆ, ದುಷ್ಟ ಶಕ್ತಿಗಳ ಅಟ್ಟಹಾಸ, ಸ್ವಾರ್ಥ ಜನರ ಬದುಕು ತಲ್ಲಣಗೊಳಿಸಿದೆ. ಯುವ ಜನಾಂಗ ಆಧುನೀಕರಣಕ್ಕೆ ಮಾರು ಹೋಗಿ ಪಾಶ್ಚಿಮಾತ್ಯರ ಅನುಕರಣೆ ಮಾಡುತ್ತಿರುವುದು ವಿಷಾದಕಾರ ಸಂಗತಿಯಾಗಿದೆ. ವಿದ್ಯಾರ್ಥಿಗಳು ಜೀವನದಲ್ಲಿ, ಶಿಸ್ತು, ಸಂಯಮ, ಮೌಲ್ಯ ಅಳವಡಿಸಿಕೊಳ್ಳಬೇಕು. ಮೂಲ ಸೌಕರ್ಯ ಇಲ್ಲವೆಂದು ಕಲಿಕೆಯಲ್ಲಿ ಹಿಂದೆ ಉಳಿಯಬಾರದು. ಇರುವ ಅವಕಾಶಗಳನ್ನು ಬಳಸಿಕೊಂಡು ಕಲಿಕೆಯಲ್ಲಿ ಸಾಧನೆ ತೋರಬೇಕು ಎಂದರು.

ಹಾವೇರಿ ವಿವಿಯಲ್ಲಿ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪಿಸಿ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡುತ್ತಿರುವುದು ಸಂತಸದ ಸಂಗತಿಯಾಗಿದೆ.ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಉತ್ತಮ ನಾಗರಿಕರಾಗಿ ಬಾಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸುರೇಶ ಜಂಗಮಶೆಟ್ಟಿ ಅವರು ಹಾವೇರಿ ವಿಶ್ವವಿದ್ಯಾಲಯ ಬೆಳವಣಿಗೆ ಕುರಿತು ಮಾತನಾಡಿದರು.

ನಾವೀನ್ಯತೆ ಸಲಹೆಗಾರ ರಾಜಶೇಖರ ಹಿರೇಮಠ, ಅಂತಾರಾಷ್ಟ್ರೀಯ ಶೈಕ್ಷಣಿಕ ಸಲಹೆಗಾರ ಡಾ. ಶಿವಾನಂದ ಉತ್ಲಾಸರ ಹಾಗೂ ಕುಲಸಚಿವ ಪ್ರೊ.ರೇಣುಕಾ ಮೇಟಿ ಇತರರು ಇದ್ದರು. ಕುಲಸಚಿವ ಪ್ರೊ.ಎಸ್.ಬಿ. ಬಾಗಲಕೋಟಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಶಿಕ್ಷಕ ವೃತ್ತಿ ಶ್ರೇಷ್ಠ ವೃತ್ತಿಯಾಗಿದೆ. ಸಮೃದ್ಧ ನಾಡು ನಿರ್ಮಾಣ ಶಿಕ್ಷಕರಿಂದ ಮಾತ್ರ ಸಾಧ್ಯ.ಹಾಗಾಗಿ ವಿದ್ಯಾರ್ಥಿಗಳಲ್ಲಿ ದೊಡ್ಡ ಚಿಂತನೆ ಮನಸ್ಸು, ದೂರ ದೃಷ್ಟಿ ಮನೋಭಾವ ಬೆಳೆಸಬೇಕು. ವಿವಿಗಳು ಸುಭಿಕ್ಷ ಸಮಾಜ ನಿರ್ಮಾಣದ ಟಂಕಸಾಲಿಗಳು ಇದ್ದಂತೆ ಚಲಾವಣೆ ನಾಣ್ಯಗಳ ರೀತಿಯಲ್ಲಿ ವಿದ್ಯಾರ್ಥಿಗಳನ್ನು ತಯಾರಿಸಬೇಕು. ಈ ವಿಶ್ವವಿದ್ಯಾಲಯದಿಂದ 10 ವಿದ್ಯಾರ್ಥಿಗಳು ವಿದೇಶದಲ್ಲಿ ವ್ಯಾಸಂಗ ಮಾಡುವಂತೆ ತಯಾರು ಮಾಡಿ ಆ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನ ಛಾಪು ಮೂಡಿಸಬೇಕು ಎಂದು ಕೊಡಗು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಅಶೋಕ ಆಲೂರ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''