ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಎಚ್‌ಡಿಕೆ ಭೂಮಿ ಪೂಜೆ

KannadaprabhaNewsNetwork |  
Published : Oct 21, 2024, 12:31 AM ISTUpdated : Oct 21, 2024, 12:32 AM IST
೨೦ಕೆಎಂಎನ್‌ಡಿ-೪ಶ್ರೀರಂಗಪಟ್ಟಣ ತಾಲೂಕಿನ ಕಿರಂಗೂರು ಗ್ರಾಮದ ಬನ್ನಿ ಮಂಟಪದ ಬಳಿ ೧೧.೩ ಕಿ.ಮೀ ಉದ್ದದ ೪೨.೪ ಕೋಟಿ ರು. ವೆಚ್ಚದ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೂಮಿ ಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಜೇವರ್ಗಿ- ಚಾಮರಾಜನಗರ ಹೆದ್ದಾರಿಯ ಕಿರಂಗೂರು ಗ್ರಾಮದಿಂದ ಪಾಂಡವಪುರವರೆಗಿನ ಹೆದ್ದಾರಿ ರಸ್ತೆ ಅಗಲೀಕರಣ ಬಹು ದಿನಗಳ ಬೇಡಿಕೆಯಾಗಿದ್ದು, ಇದರ ಗುದ್ದಲಿ ಪೂಜೆಯನ್ನು ನೆರವೇರಿಸಲಾಗಿದೆ. ಗುಣಮಟ್ಟದ ಕಾಮಗಾರಿ ನಡೆಸುವಂತೆ ಸೂಚನೆ ನೀಡಿದ್ದೇನೆ.

ಕನ್ನಡಪ್ರಭವಾರ್ತೆ ಶ್ರೀರಂಗಪಟ್ಟಣ

ತಾಲೂಕಿನ ಕಿರಂಗೂರು ಗ್ರಾಮದ ಬನ್ನಿ ಮಂಟಪದ ಬಳಿ ೧೧.೩ ಕಿ.ಮೀ ಉದ್ದದ ೪೨.೪ ಕೋಟಿ ರು. ವೆಚ್ಚದ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಭೂಮಿ ಪೂಜೆ ನೆರವೇರಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೇವರ್ಗಿ- ಚಾಮರಾಜನಗರ ಹೆದ್ದಾರಿಯ ಕಿರಂಗೂರು ಗ್ರಾಮದಿಂದ ಪಾಂಡವಪುರವರೆಗಿನ ಹೆದ್ದಾರಿ ರಸ್ತೆ ಅಗಲೀಕರಣ ಬಹು ದಿನಗಳ ಬೇಡಿಕೆಯಾಗಿದ್ದು, ಇದರ ಗುದ್ದಲಿ ಪೂಜೆಯನ್ನು ನೆರವೇರಿಸಲಾಗಿದೆ. ಗುಣಮಟ್ಟದ ಕಾಮಗಾರಿ ನಡೆಸುವಂತೆ ಸೂಚನೆ ನೀಡಿದ್ದೇನೆ ಎಂದರು.

ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಈ ಹಿಂದೆ ಶಾಸಕರಾಗಿದ್ದ ವೇಳೆ ವಿಧಾನಸಭೆ ಕಲಾಪದಲ್ಲಿ ಭಾಗವಹಿಸಿ, ಕಿರಂಗೂರು, ದರಸಗುಪ್ಪೆ, ಕಪರನಕೊಪ್ಪಲು ಗ್ರಾಮಗಳ ಹಾದುಹೋಗುವ ಜೇವರ್ಗಿ- ಚಾಮರಾಜನಗರ ಹೆದ್ದಾರಿಯಲ್ಲಿ ದಿನಕ್ಕೊಂದು ಅಪಘಾತ ನಡೆದು ಸಾವು, ನೋವುಗಳು ಸಂಭವಿಸುತ್ತಿವೆ. ಹೆದ್ದಾರಿ ಅಗಲೀಕರಣ ಮಾಡುವಂತೆ ಒತ್ತಾಯಿಸಿದ್ದರು. ಅವರ ಶ್ರಮದಿಂದಾಗಿ ಇಂದು ಕಾರ್ಯಗತಗೊಂಡು, ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದೆ. ಅವರು ಬೇರೊಂದು ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದರಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ ಎಂದು ರವೀಂದ್ರ ಶ್ರೀಕಂಠಯ್ಯ ಅವರ ಗೈರುಹಾಜರಿ ಬಗ್ಗೆ ಎಚ್‌ಡಿಕೆ ಉತ್ತರಿಸಿದರು.

೧೦ ಲಕ್ಷ ರು. ಪರಿಹಾರಕ್ಕೆ ಮನವಿ:

ಹಲವು ವರ್ಷಗಳಿಂದ ಹೆದ್ದಾರಿ ಅಗಲೀಕರಣ ಮಾಡುವಂತೆ ಮನವಿ ಮಾಡುತ್ತಿದ್ದರೂ ಪ್ರಯೋಜವಾಗಿರಲಿಲ್ಲ. ಹೆದ್ದಾರಿಯಲ್ಲಿ ಸಾಕಷ್ಟು ಅಪಘಾತಗಳು ನಡೆದು, ಸಾವು- ನೋವುಗಳು ಸಂಭವಿಸಿವೆ. ಅಪಘಾತದಲ್ಲಿ ಮೃತಪಟ್ಟಿರುವ ಕುಟುಂಬಗಳಿಗೆ ತಲಾ ೧೦ ಲಕ್ಷ ರು. ಪರಿಹಾರ ನೀಡುವಂತೆ ಮಂಡ್ಯ ರಕ್ಷಣಾ ವೇದಿಕೆ ಸಂಸ್ಥಾಪಕ ಶಂಕರ್ ಬಾಬು ಇದೇ ಸಂದರ್ಭದಲ್ಲಿ ಒತ್ತಾಯಿಸಿ ಸಚಿವರಿಗೆ ಮನವಿ ಮಾಡಿದರು. ಮನವಿಗೆ ಪೂರಕವಾಗಿ ಸ್ಪಂದಿಸಿದ ಎಚ್‌ಡಿಕೆ ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ರಮೇಶ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಅಶೋಕ್, ಜೆಡಿಎಸ್ ಮುಖಂಡರಾದ ನಗುವನಹಳ್ಳಿ ಶಿವಸ್ವಾಮಿ, ಪಾಲಹಳ್ಳಿ ಚಂದ್ರಶೇಖರ್, ಪೈ.ಮುಕುಂದ, ನೆಲಮನೆ ಗುರುಪ್ರಸಾದ್, ಕಡತನಾಳು ಸಂಜಯ್, ತಿಲಕ್, ನಾರಾಯಣ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ