ಕೊಪ್ಪಳ: ಬೇಸಿಗೆ ಸಮಯದಲ್ಲಿ ಆರೋಗ್ಯ ರಕ್ಷಣೆಯ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಕೊಪ್ಪಳ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ.ಪೂಜಾರ ಹೇಳಿದರು.
ಪ್ರತಿ ವರ್ಷ ಮಾರ್ಚ್ ತಿಂಗಳಿಂದ ಬೇಸಿಗೆ ಕಾಲ ಪ್ರಾರಂಭವಾಗುತ್ತದೆ. ಈ ಸಮಯದಲ್ಲಿ ಸಾರ್ವಜನಿಕರು ಆರೋಗ್ಯದ ಕುರಿತು ಹೆಚ್ಚಿನ ಗಮನ ಹರಿಸುವುದು ಅತ್ಯವಶ್ಯಕವಾಗಿದೆ. ಆಶಾ ಕಾರ್ಯಕರ್ತೆಯರು ಮನೆ-ಮನೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಸಿಲಿನಿಂದ ವೃದ್ಧರು, ಮಕ್ಕಳು, ಗರ್ಭಿಣಿಯರು ಹಾಗೂ ಸಹವ್ಯಾದಿ ಆರೋಗ್ಯದ ರಕ್ಷಣೆ ಪಡೆದುಕೊಳ್ಳಲು ಸಲಹೆ ನೀಡಬೇಕು. ಬೇಸಿಗೆ ಅವಧಿಯಲ್ಲಿ ಎಲ್ಲರೂ ಹೆಚ್ಚು ನೀರನ್ನು ಕುಡಿಯಬೇಕು. ಮಜ್ಜಿಗೆ ಅಥವಾ ಎಳನೀರು, ಹಣ್ಣಿನ ರಸ ಹೆಚ್ಚಾಗಿ ಸೇವಿಸಬಹುದು. ನೀರಿನ ಅಂಶ ಹೆಚ್ಚಾಗಿರುವ ತರಕಾರಿ ಅಥವಾ ಹಣ್ಣು ಸೇವಿಸುವುದು ಉತ್ತಮವಾಗಿದೆ.ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ವಿಶೇಷ ಅರಿವು ಮೂಡಿಸಬೇಕು ಎಂದರು.
ಬೇಸಿಗೆ ಸಂದರ್ಭದಲ್ಲಿ ಸಾರ್ವಜನಿಕರು ಸಡಿಲವಾದ ತೆಳು ಬಣ್ಣದ ಹತ್ತಿಯ ಬಟ್ಟೆ ಧರಿಸುವುದು ಸೂಕ್ತವಾಗಿದೆ.ಇದಲ್ಲದೇ ಗಾಳಿಯಾಡುವ ಪಾದರಕ್ಷೆ ಧರಿಸಿರಿ, ಹೊರಗಡೆ ತೆರಳುವ ವೇಳೆ ತಂಪು ಕನ್ನಡಕ, ಛತ್ರಿ, ಟವೆಲ್ ಅಥವಾ ಬಿಸಿಲಿನಿಂದ ಕಾಪಾಡಿಕೊಳ್ಳುವ ಸಾಮಾನ್ಯ ಕ್ರಮ ಪಾಲಿಸುವುದು ಅತ್ಯವಶ್ಯಕವಾಗಿದೆ. ರೇಡಿಯೊ-ದೂರದರ್ಶನ ಹಾಗೂ ದಿನಪತ್ರಿಕೆಗಳಲ್ಲಿ ಬಿಸಿಯಾದ ಗಾಳಿ ಅಥವಾ ಶಾಖ ತರಂಗ (ಹೀಟ್ ವೇವ್)ದ ಬಗ್ಗೆ ನೀಡುವ ಮಾಹಿತಿ ಅನುಸಾರ ದೈನಂದಿನ ಚಟುವಟಿಕೆ ಯೋಜಿಸಿಕೊಳ್ಳುವಂತೆ ಜನರಿಗೆ ತಿಳಿ ಹೇಳಿ.ಜಮೀನ ಕೆಲಸ, ರಸ್ತೆ ಕಾಮಗಾರಿ ಮತ್ತು ಮುಂತಾದ ಕೆಲಸಗಳು ಸೇರಿ ಬಿಸಿಲಿನಲ್ಲಿ ಹೊರಗಡೆ ಕಾರ್ಯ ನಿರ್ವಹಿಸುವವರು ಆದಷ್ಟು ಬೆಳಗ್ಗೆ 11 ಗಂಟೆಯೊಳಗೆ ಮತ್ತು ಸಂಜೆ 4 ಗಂಟೆ ನಂತರ ಕೆಲಸ ಕೈಗೊಳ್ಳುವುದು ಉತ್ತಮ. ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯೊಳಗಿನ ಅವಧಿಯಲ್ಲಿ ಶ್ರಮದಾಯಕ ಕೆಲಸಗಳಿಂದ ವಿಶ್ರಾಂತಿ ಪಡೆಯುವುದು ಸೂಕ್ತ. ಹಾಗಾಗಿ ಈ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.ಬಿಸಿಲಿನಲ್ಲಿ ನಡೆಯುವಾಗ ಕಡ್ಡಾಯವಾಗಿ ಚಪ್ಪಲಿ ಧರಿಸಬೇಕು. ಟೀ, ಕಾಫಿ, ಹೆಚ್ಚು ಸಕ್ಕರೆ ಅಂಶ ಹೊಂದಿರುವ ಕಾರ್ಬೋನೇಟೆಡ್ ಪಾನೀಯ ಹಾಗೂ ಮದ್ಯಪಾನದಿಂದ ದೂರವಿರುವುದು ಸೂಕ್ತ. ಯಾವುದೇ ವ್ಯಕ್ತಿ ತೊದಲು ಮಾತು ಅಥವಾ ಅರ್ಥ ರಹಿತವಾಗಿ ಬಡಬಡಿಸಿದಲ್ಲಿ ಅವರನ್ನು ಕೂಡಲೇ ನೆರಳಿನ ಸ್ಥಳಕ್ಕೆ ಸ್ಥಳಾಂತರಿಸಬೇಕು. ಬಿಸಿಗಾಳಿ ಮತ್ತು ಅತಿಯಾದ ತಾಪಮಾನದಿಂದ ಆರೋಗ್ಯ ಸಮಸ್ಯೆ ಉಂಟಾದಲ್ಲಿ ಸಮೀಪದ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಿ ಅಥವಾ 108ಕ್ಕೆ ಕರೆ ಮಾಡುವ ಬಗ್ಗೆ ತಮ್ಮ ವ್ಯಾಪ್ತಿಯ ಸಾರ್ವಜನಿಕರಿಗೆ ವಿಶೇಷ ಜಾಗೃತಿ ಮೂಡಿಸಬೇಕು ಎಂದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಹನುಮಂತವ್ವ, ಸುಮಿತ್ರಾ, ಎಸ್.ಟಿ.ಎಸ್ ಹುಸೇನಬಾಷಾ, ಲಿಂಕ್ವರ್ಕರ್ ಶಿವಪ್ರಸಾದ ಸೇರಿದಂತೆ ಆಶಾ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.