ಕನ್ನಡಪ್ರಭ ವಾರ್ತೆ ಮಡಿಕೇರಿ
21 ವರ್ಷದೊಳಗಿನ ವ್ಯಕ್ತಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಶಾಲಾ-ಕಾಲೇಜು ವ್ಯಾಪ್ತಿಯ 100 ಮೀ. ಅಂತರದಲ್ಲಿ ಸಿಗರೇಟ್ ಅಥವಾ ಇತರೆ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ. ಉಲ್ಲಂಘನೆ ಮಾಡಿದ್ದಲ್ಲಿ ಒಂದು ಸಾವಿರ ರೂ. ದಂಡ ವಿಧಿಸಲಾಗುತ್ತದೆ ಎಂದರು. ಕೋಟ್ಪಾ ಕಾಯ್ದೆಯಡಿ ಜಿಲ್ಲೆಯ ಹಲವು ಕಡೆಗಳಲ್ಲಿ ಏಪ್ರಿಲ್ –ಮೇ ತಿಂಗಳಲ್ಲಿ 25 ಕಡೆಗಳಲ್ಲಿ ದಾಳಿ ಮಾಡಲಾಗಿದ್ದು, ಸೆಕ್ಷನ್ 4 ರ ಪ್ರಕಾರ 272 ಪ್ರಕರಣ ದಾಖಲಾಗಿದ್ದು, 45,700 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಹೇಳಿದರು. ಅತಿಸಾರ ಭೇದಿ ನಿಯಂತ್ರಣ ಕ್ರಮ: ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಅತಿಸಾರ ಭೇದಿ ತಡೆಯುವಲ್ಲಿ ಈಗಾಗಲೇ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಜುಲೈ, 31 ರವರೆಗೂ ಈ ಬಗ್ಗೆ ಜಾಗೃತಿ ನಡೆಯಲಿದೆ ಎಂದರು. ಶಿಶು ಮರಣ ತಡೆಯುವುದು ಅತೀ ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ 5 ವರ್ಷದೊಳಗಿನ ಮಕ್ಕಳು ಅತೀಸಾರ ರೋಗದಿಂದ ಮರಣ ತಡೆಯಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಹೀಗೆ ವಿವಿಧ ಇಲಾಖೆಗಳು ಹೆಚ್ಚಿನ ಮಾಹಿತಿ ನೀಡುವಲ್ಲಿ ಶ್ರಮಿಸಲಾಗಿದೆ ಎಂದರು. ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಲ್ಲಿ ಓಆರ್ಎಸ್ ಮತ್ತು ಜಿಂಕ್ ಹೆಚ್ಚು ಬಳಕೆಯನ್ನು ಖಚಿತಪಡಿಸಿಕೊಳ್ಳಲಾಗುತ್ತದೆ ಎಂದರು. ಮಾಹಿತಿ ಶಿಕ್ಷಣ ಮತ್ತು ಸಂವಹನ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಗ್ರಾಮೀಣಾಭಿವೃದ್ಧಿ, ಜಲಜೀವನ್ ಮಿಷನ್, ಪಂಚಾಯತ್ ರಾಜ್, ಆಹಾರ, ಶಿಕ್ಷಣ, ಹೀಗೆ ವಿವಿಧ ಇಲಾಖೆಗಳ ಜೊತೆ ಸಮನ್ವಯತೆ ಸಾಧಿಸಿ ಹೆಚ್ಚಿನ ಅರಿವು ಮೂಡಿಸಲಾಗುತ್ತಿದೆ ಎಂದರು. ಸ್ವಚ್ಛತೆ ಮತ್ತು ಆರೋಗ್ಯ ಶಿಕ್ಷಣ ನೀಡುವುದು, ನಗರದ ಪ್ರದೇಶದಲ್ಲಿ ಸಂಚಾರಿ ಆರೋಗ್ಯ ತಂಡ ರಚಿಸುವುದು ಮತ್ತಿತರ ಕಾರ್ಯ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಹೇಳಿದರು.ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಡೆಂಗ್ಯೂ, ಮಲೇರಿಯಾ, ಮತ್ತಿತರ ರೋಗಗಳು ಹರಡದಂತೆ ಸ್ವಚ್ಚತೆ ಬಗ್ಗೆ ಅರಿವು ಮೂಡಿಸಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಅವರು ತಿಳಿಸಿದರು. ಜಿಲ್ಲೆಯಲ್ಲಿ ಜನವರಿಯಿಂದ ಮೇ ವರೆಗೆ ಟೈಪಾಯಿಡ್ ಜ್ವರದಿಂದ 101 ಪ್ರಕರಣ, ನಾಯಿ ಕಡಿತದಿಂದ 2,961, ಹಾವು ಕಡಿತದಿಂದ 101, ಭೇದಿಯಿಂದ 942, ಡೆಂಗ್ಯೂವಿನಿಂದ 16, ಇಲಿ ಜ್ವರದಿಂದ 23, ತೀವ್ರ ಉಸಿರಾಟ 8, ಶ್ವಾಸಕೋಶ ಸಂಬಂಧಿಸಿದ ಕಾಯಿಲೆಗೆ 2513 ಪ್ರಕರಣಗಳು ವರದಿಯಾಗಿದ್ದು, ಎಲ್ಲರೂ ಆರೋಗ್ಯಯುತರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಮಾಹಿತಿ ನೀಡಿದರು. ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಕಾರ್ಯಕ್ರಮ ಅಧಿಕಾರಿಗಳಾದ ಡಾ.ಮಧುಸೂದನ್, ಡಾ.ಶ್ರೀನಿವಾಸ್, ಡಾ.ಸನತ್ ಕುಮಾರ್, ಡಾ.ಆನಂದ್, ಡಾ.ಯತಿರಾಜು, ಡಾ.ಇಂದುದರ, ಡಾ.ಅನಿಲ್ ದವನ್ ಅವರು ಕಾರ್ಯಕ್ರಮ ಸಂಬಂಧಿಸಿದಂತೆ ಮಾಹಿತಿ ನೀಡಿದರು.