ಪೌರಕಾರ್ಮಿಕರಿಗೆ ಆರೋಗ್ಯ ವಿಮೆ ಕಡ್ಡಾಯ: ಜಿಲ್ಲಾಧಿಕಾರಿ ಯಶವಂತ್

KannadaprabhaNewsNetwork | Published : Mar 1, 2025 1:02 AM

ಸಾರಾಂಶ

ಜಿಲ್ಲೆಯ ಪೌರಕಾರ್ಮಿಕರಿಗೆ ಕಡ್ಡಾಯವಾಗಿ ಬ್ಯಾಂಕ್ ಲಿಂಕ್ಡ್ ಆರೋಗ್ಯ ವಿಮೆ ಮಾಡಿಸಬೇಕು. ಈ ಕುರಿತು 3 ದಿನಗಳೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ರಾಮನಗರ

ಜಿಲ್ಲೆಯ ಪೌರಕಾರ್ಮಿಕರಿಗೆ ಕಡ್ಡಾಯವಾಗಿ ಬ್ಯಾಂಕ್ ಲಿಂಕ್ಡ್ ಆರೋಗ್ಯ ವಿಮೆ ಮಾಡಿಸಬೇಕು. ಈ ಕುರಿತು 3 ದಿನಗಳೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 2025ನೇ ಕ್ಯಾಲೆಂಡರ್ ವರ್ಷದಲ್ಲಿ 1ನೇ ತ್ರೈಮಾಸಿಕ ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿದಿನ ಮುಂಜಾನೆ ಪೌರಕಾರ್ಮಿಕರು ನಗರಗಳನ್ನು ಸ್ವಚ್ಛ ಮಾಡುತ್ತಾರೆ. ಅವರಿಗೆ ಸಮವಸ್ತ್ರ, ಸುರಕ್ಷಿತವಾದ ಮಾಸ್ಕ್, ಪಾದರಕ್ಷೆಗಳನ್ನು ವಿತರಿಸಬೇಕು. ಅವರು ವಿಶ್ರಾಂತಿ ಪಡೆಯಲು ವಿಶ್ರಾಂತಿ ಕೊಠಡಿಗಳನ್ನು ಮಾಡಿರಬೇಕು ಹಾಗೂ ಅವರಿಗೆ ಗುಣಮಟ್ಟದ ಉಪಾಹಾರದ ವ್ಯವಸ್ಥೆಯನ್ನು ಮಾಡಬೇಕು. ಈ ಕುರಿತು ಮೂರು ದಿನಗಳೊಳಗೆ ದಾಖಲಾತಿಗಳ ಸಮೇತ ವರದಿ ನೀಡುವಂತೆ ತಿಳಿಸಿದರು.

ಪೌರಕಾರ್ಮಿಕರ ಆರೋಗ್ಯದ ದೃಷ್ಠಿಯಿಂದ ಜಿಲ್ಲೆಯ ಎಲ್ಲಾ ಪೌರಕಾರ್ಮಿಕರಿಗೆ ಪ್ರತಿ 3 ತಿಂಗಳಿಗೊಮ್ಮೆ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಮಾಡಿಸಬೇಕು. ಪ್ರತೀ ತಿಂಗಳು ಪೌರಕಾರ್ಮಿಕರಿಗೆ ವೇತನ ವಿಳಂಬವಾಗಬಾರದು ಸಂಬಂಧಿಸಿದ ಅಧಿಕಾರಿಗಳು ಈ ಕುರಿತು ಕ್ರಮ ವಹಿಸಬೇಕು ಎಂದರು.

ಕೆಲ ತಾಲೂಕುಗಳಲ್ಲಿ ಪೌರಕಾರ್ಮಿಕರ ನೇಮಕಾತಿ ವಿಳಂಬವಾಗಿರುವುದು ಕಂಡುಬಂದಿದೆ. ಆದ್ದರಿಂದ ನೇಮಕಾತಿ ಕುರಿತು ಸಮಿತಿ ರಚನೆ ಮಾಡಿ ಕ್ರಮ ಕೈಗೊಳ್ಳಲಾಗುತ್ತಿದೆ. ಪೌರಕಾರ್ಮಿಕರು ಮರಣಹೊಂದಿದರೆ ಅವರ ಅವಲಂಭಿತರಿಗೆ ಅನುಕಂಪದ ಆಧಾರದ ಮೇಲೆ ಕೆಲಸ ನೀಡಬೇಕು ಎಂದು ಹೇಳಿದರು.

ರಾಮನಗರ ಜಿಲ್ಲೆ ಪ್ರವೇಶಿಸುವ ರಸ್ತೆಯಲ್ಲಿ ಸಾರ್ವಜನಿಕರು ತ್ಯಾಜ್ಯ ಸುರಿಯುವುದು ಕಂಡುಬಂದಿದೆ. ಇದರಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಹೆಚ್ಚಿದ್ದು, ಪರಿಸರಕ್ಕೆ ತೊಂದರೆಯಾಗುತ್ತದೆ ತ್ಯಾಜ್ಯ ಸುರಿಯುವ ಸ್ಥಳಗಳಲ್ಲಿ ತ್ಯಾಜ್ಯಗಳ ಕಂಟೈನರ್‌ಗಳನ್ನು ಇರಿಸಿದ್ದಲ್ಲೀ ಅನುಕೂಲವಾಗುತ್ತದೆ. 3 ದಿನಗಳಿಗೊಮ್ಮೆ ಅದರಲ್ಲಿರುವ ತ್ಯಾಜ್ಯ ತೆರವುಗೊಳಿಸಬೇಕು, ಇದನ್ನು ಪರಿಶೀಲಿಸಲು ಈ ಸ್ಥಳದಲ್ಲಿ ಜಿಪಿಎಸ್ ಅಳವಡಿಸಿದರೆ ತ್ಯಾಜ್ಯ ತೆರವುಗೊಂಡಿರುವ ಬಗ್ಗೆ ಸುಲಭವಾಗಿ ಪರಿಶೀಲಿಸಬಹುದು ಎಂದು ಯಶವಂತ್ ವಿ.ಗುರುಕರ್ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶಿವಕುಮಾರ್, ತಹಸೀಲ್ದಾರರು, ಪೌರಾಯುಕ್ತರು, ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Share this article