ಮಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದ ಪ್ರಥಮ ಹಂತದ ಸಂಪುಟದಲ್ಲಿ ಸ್ಥಾನ ಪಡೆದಿರುವ ಮಾಜಿ ಸ್ಪೀಕರ್ ಯು.ಟಿ.ಖಾದರ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ನೀಡಲಾಗಿದೆ. ಹಿಂದೆ ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಖಾದರ್ ಇದೇ ಖಾತೆಯನ್ನು ಹೊಂದಿದ್ದರು.
ಉಡುಪಿ ಉಸ್ತುವಾರಿಗೆ ಆಸಕ್ತಿ:
ಸಚಿವರಾದ ಯು.ಟಿ.ಖಾದರ್ಗೆ ದ.ಕ. ಜಿಲ್ಲೆಗಿಂತ ಉಡುಪಿ ಜಿಲ್ಲೆಯ ಉಸ್ತುವಾರಿಗೆ ಆಸಕ್ತಿ ಹೊಂದಿದ್ದಾರೆ. ಈ ಬಗ್ಗೆ ಸಿಎಂ ಡಿಕೆಶಿ ಬಳಿ ಖಾದರ್ ಹೇಳಿಕೊಂಡಿದ್ದಾರೆ ಎಂದು ಅವರ ಆಪ್ತ ವಲಯ ಹೇಳುತ್ತಿದೆ. ಖಾದರ್ ದ.ಕ. ಜಿಲ್ಲೆಯವರೇ ಆಗಿರುವುದರಿಂದ ಅವರಿಗೆ ಹೇಗೂ ದ.ಕ. ಜಿಲ್ಲೆಯ ಉಸ್ತುವಾರಿ ನೀಡುವುದು ಸಹಜ. ಆದರೂ ಸಚಿವರೇ ಇಲ್ಲದ ಉಡುಪಿ ಜಿಲ್ಲೆಯ ಉಸ್ತುವಾರಿಗೂ ಖಾದರ್ ಆಸಕ್ತಿ ಹೊಂದಿದ್ದು, ಸದ್ಯ ಎರಡೂ ಜಿಲ್ಲೆಯ ಉಸ್ತುವಾರಿ ಲಭಿಸಿದರೂ ಅಚ್ಚರಿ ಇಲ್ಲ ಎನ್ನುತ್ತವೆ ಮೂಲ. ಈ ಹಿಂದೆ ಖಾದರ್ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಸಿಎಂ ಸಿದ್ದರಾಮಯ್ಯರ ಸರ್ಕಾರದ ಮೊದಲ ಅವಧಿಯಲ್ಲಿ ದ.ಕ. ಹಾಗೂ ಉಡುಪಿ ಜಿಲ್ಲೆಗೆ ಸಚಿವ ಸ್ಥಾನ ಸಿಗದ ಕಾರಣ ದಿನೇಶ್ ಗುಂಡೂರಾವ್ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಉಸ್ತುವಾರಿ ಸಚಿವರಾಗಿದ್ದರು.ದ.ಕ. ಜಿಲ್ಲೆಯಲ್ಲಿ ಇಲ್ಲಿವರೆಗೆ ರಮಾನಾಥ ರೈ, ನಾಗರಾಜ ಶೆಟ್ಟಿ, ಜಬ್ಬಾರ್ಖಾನ್ ಹೊನ್ನಾಳಿ, ಸಿ.ಟಿ.ರವಿ, ಕೃಷ್ಣ ಪಾಲೇಮಾರ್, ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ ಉಸ್ತುವಾರಿ ಸಚಿವರಾಗಿದ್ದರು.