ಮಹಾ ಮಳೆ: ಮಲೆನಾಡಿನ ಅಂಗನವಾಡಿಗಳಿಗೆ ರಜೆ

KannadaprabhaNewsNetwork |  
Published : May 27, 2025, 12:26 AM IST
ಮೂಡಿಗೆರೆ ತಾಲೂಕಿನ ತರುವೆ ಗ್ರಾಮದ ಲಕ್ಷ್ಮೀ ಅವರಿಗೆ ಸೇರಿರುವ ಮನೆ ಮಳೆಯಿಂದಾಗಿ ಬಿದ್ದಿರುವುದು. | Kannada Prabha

ಸಾರಾಂಶ

ಚಿಕ್ಕಮಗಳೂರು, ಕಾಫಿಯ ನಾಡಿನಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದೆ. ಬಿಡುವಿಲ್ಲದೆ ಮಳೆ ಸುರಿಯುತ್ತಿರುವುದರಿಂದ ಮುಂಜಾಗ್ರತೆಯಾಗಿ ಜಿಲ್ಲೆಯ ಮಲೆನಾಡಿನ 6 ತಾಲೂಕುಗಳಲ್ಲಿನ ಅಂಗನವಾಡಿಗಳಿಗೆ ಮೇ 28ರವರೆಗೆ ಅನ್ವಯ ವಾಗುವಂತೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಮೇ 28 ರವರೆಗೆ ರಜೆ ಘೋಷಣೆ, ಹಲವೆಡೆ ಮುಂದುವರಿದ ವರುಣನ ಆರ್ಭಟ,

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಕಾಫಿಯ ನಾಡಿನಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದೆ. ಬಿಡುವಿಲ್ಲದೆ ಮಳೆ ಸುರಿಯುತ್ತಿರುವುದರಿಂದ ಮುಂಜಾಗ್ರತೆಯಾಗಿ ಜಿಲ್ಲೆಯ ಮಲೆನಾಡಿನ 6 ತಾಲೂಕುಗಳಲ್ಲಿನ ಅಂಗನವಾಡಿಗಳಿಗೆ ಮೇ 28ರವರೆಗೆ ಅನ್ವಯ ವಾಗುವಂತೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ ಹಾಗೂ ಎನ್‌.ಆರ್‌.ಪುರ ತಾಲೂಕುಗಳಲ್ಲಿ ಬಿಡುವಿಲ್ಲದೆ ಮಳೆ ಸುರಿಯುತ್ತಿದೆ. ಭಾರೀ ಗಾಳಿಗೆ ಹಲವೆಡೆ ಮರಗಳು ಬಿದ್ದು ಕೆಲವು ಮನೆಗಳಿಗೆ ಹಾನಿ ಸಂಭವಿಸಿದೆ. ವಿದ್ಯುತ್‌ ಕಂಬಗಳು ಬಿದ್ದಿದ್ದರಿಂದ ಹಲವು ಗ್ರಾಮಗಳು ವಿದ್ಯುತ್‌ ಸಂಪರ್ಕ ಕಳೆದುಕೊಂಡಿವೆ.

ಮಲೆನಾಡಿನಲ್ಲಿ ಹುಟ್ಟಿ ಹರಿಯುವ ತುಂಗಾ, ಭದ್ರಾ ಹಾಗಾ ಹೇಮಾವತಿ ನದಿಗಳ ನೀರಿನ ಮಟ್ಟ ದಿನೇ ದಿನೇ ಏರಿಕೆ ಯಾಗುತ್ತಿದೆ. ಹಳ್ಳಗಳು, ಉಪ ನದಿಗಳು ಸಹ ಭರ್ತಿಯಾಗಿ ಹರಿಯುತ್ತಿವೆ. ದಟ್ಟವಾದ ಮೋಡ, ಮಂಜು ಕವಿದ ವಾತಾವರಣ, ನಿರಂತರವಾಗಿ ಒಂದೇ ಸಮನೆ ಮಳೆ ಬರುತ್ತಿರುವುದರಿಂದ ರಸ್ತೆಗಳಲ್ಲಿ ಸಂಚರಿಸುವ ವಾಹನಗಳು ಅಪಘಾತಕ್ಕೆ ಈಡಾಗುತ್ತಿವೆ.

ಸತತ ಮಳೆಯಿಂದಾಗಿ ತೇವಾಂಶ ಹೆಚ್ಚಾಗಿದೆ. ಸೋಮವಾರ ದತ್ತಪೀಠದ ರಸ್ತೆಯಲ್ಲಿ ಧರೆ ಕುಸಿತ ಉಂಟಾಗಿತ್ತು. ಮೂಡಿಗೆರೆ ಹಾಗೂ ಕಳಸ ತಾಲೂಕಿನ ಹಲವೆಡೆ ಸಣ್ಣ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿದೆ. ಕಳಸದ ಕುದುರೆಮುಖ ಸರ್ಕಲ್ ಬಳಿ ರಾತ್ರಿ ಕಾರ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಜಖಂ ಆಗಿದೆ. ಕಾರಿನಲ್ಲಿದ್ದ ಪ್ರವಾಸಿಗರು ಅದೃಷ್ಟವಶಾತ್‌ ಪಾರಾಗಿದ್ದಾರೆ.

ಚಿಕ್ಕಮಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಬಿಡುವಿಲ್ಲದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿ ಮನೆಯಿಂದ ಹೊರಗೆ ಹೋಗಲು ಜನರು ಹಿಂದೇಟು ಹಾಕುತ್ತಿದ್ದಾರೆ. ಮಳೆಯಿಂದಾಗಿ ತೆರೆದ ಚರಂಡಿ ಗಳು ಭರ್ತಿಯಾಗಿ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ಒಳ ಚರಂಡಿಯ ಮ್ಯಾನ್ ಹೋಲ್‌ಗಳು ತುಂಬಿ ನೀರು ರಸ್ತೆಯ ಮೇಲೆ ಹರಿಯುತ್ತಿದೆ.

ಕಾಫಿ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಮಳೆಯಿಂದಾಗಿ ತುಂಬಾ ತೊಂದರೆಯಾಗುತ್ತಿದೆ. ಬಲವಾಗಿ ಬೀಸುತ್ತಿ ರುವ ಗಾಳಿಯಿಂದ ಯಾವುದೇ ಕ್ಷಣದಲ್ಲಿ ಏನಾದರೂ ಆಗಬಹುದೆಂಬ ಭಯ ಕಾಡುತ್ತಿದೆ. ಕಾಫಿ ತೋಟಗಳ ಮಧ್ಯದಲ್ಲಿ ನಿರ್ಮಾಣ ಮಾಡಲಾಗಿರುವ ಲೈನ್‌ಗಳಲ್ಲಿ ವಾಸವಾಗಿರುವ ಕಾರ್ಮಿಕರು ಜೀವ ಭಯದಲ್ಲಿ ಇದ್ದಾರೆ. ಮನೆಗಳ ಮೇಲೆ ಮರ ಬೀಳುವ ಹಾಗೂ ತೇವಾಂಶ ಹೆಚ್ಚಾಗಿ ಹಾಳಾಗಿರುವ ಮಳೆಯಿಂದ ಅಪಾಯ ಆಗಬಹುದು ಎಂಬ ಆತಂಕದಲ್ಲಿ ಇದ್ದಾರೆ.

ಮಲೆನಾಡಿನಲ್ಲಿ ವರುಣನ ಆರ್ಭಟ ಜೋರಾಗಿದ್ದರೆ, ಅತ್ತ ಬಯಲುಸೀಮೆಯ ತರೀಕೆರೆ, ಕಡೂರು ಹಾಗೂ ಅಜ್ಜಂಪುರದಲ್ಲೂ ಸಾಧಾರಾಣ ಮಳೆಯಾಗುತ್ತಿದೆ. ಇದರಿಂದಾಗಿ ಪೂರ್ವ ಮುಂಗಾರಿನಲ್ಲಿ ಬಿತ್ತನೆ ಮಾಡಲಾಗಿರುವ ಬೆಳೆಗೆ ಅನುಕೂಲ ವಾಗಿದೆ.ಕೊಟ್ಟಿಗೆಹಾರ: ಮಲೆನಾಡಿನಲ್ಲಿ ಗಾಳಿ ಮಳೆಯ ಅಬ್ಬರ ಮುಂದುವರಿದಿದ್ದು, ಮೂಡಿಗೆರೆ ತಾಲೂಕಿನಲ್ಲಿ ತೀವ್ರ ಪರಿಣಾಮ ಬೀರಿದೆ. ತರುವೆ ಗ್ರಾಮದಲ್ಲಿ ಸಂಭವಿಸಿದ ಭಾರೀ ಗಾಳಿ-ಮಳೆಗೆ ಲಕ್ಷ್ಮಿ ಎಂಬುವರಿಗೆ ಸೇರಿದ ಮನೆ ಗೋಡೆ ಭಾಗಶಃ ಕುಸಿದಿದೆ.

ಮನೆಯೊಳಗಿದ್ದವರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಘಟನೆ ಬಳಿಕ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.--- ಬಾಕ್ಸ್‌ ---23 ಮನೆಗಳಿಗೆ ಹಾನಿ

ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯಲ್ಲಿ ಈವರೆಗೆ 23 ಮನೆಗಳಿಗೆ ಹಾನಿ ಸಂಭವಿಸಿದ್ದರೆ, ಮಳೆಯಿಂದ ಓರ್ವ ಮೃತಪಟ್ಟಿದ್ದಾರೆ.

5 ಮನೆಗಳಿಗೆ ಹೆಚ್ಚಿನ ಹಾನಿ ಸಂಭವಿಸಿದ್ದರೆ, 18 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಮೂಡಿಗೆರೆ ತಾಲೂಕಿನಲ್ಲಿ 11, ಚಿಕ್ಕಮಗಳೂರು, ಎನ್‌.ಆರ್‌.ಪುರ ತಾಲೂಕುಗಳಲ್ಲಿ ತಲಾ 2, ಕಡೂರು, ತರೀಕೆರೆ ಹಾಗೂ ಕಳಸ ತಾಲೂಕುಗಳಲ್ಲಿ ತಲಾ ಒಂದೊಂದು ಮನೆಗಳಿಗೆ ಭಾಗಶಃ ಹಾನಿ ಸಂಭವಿಸಿದೆ. ಮಳೆ ನಿರಂತರವಾಗಿ ಮುಂದುವರಿದಿದ್ದರಿಂದ ಹಾನಿಯ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆ ಇದೆ.

--- 26 ಕೆಸಿಕೆಎಂ 4ಮೂಡಿಗೆರೆ ತಾಲೂಕಿನ ತರುವೆ ಗ್ರಾಮದ ಲಕ್ಷ್ಮೀ ಅವರಿಗೆ ಸೇರಿರುವ ಮನೆ ಮಳೆಯಿಂದ ಬಿದ್ದಿರುವುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!