ಹಾವೇರಿ ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆ, 4 ಮನೆಗಳಿಗೆ ಹಾನಿ

KannadaprabhaNewsNetwork |  
Published : Jun 13, 2025, 03:23 AM IST
12ಎಚ್‌ವಿಆರ್4 | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮರೆಯಾಗಿದ್ದ ಮಳೆ ಬುಧವಾರದಿಂದ ಆರಂಭವಾಗಿದ್ದು, ರೈತರಲ್ಲಿ ಮೂಡಿದ್ದ ಆತಂಕ ದೂರ ಮಾಡಿದೆ.

ಹಾವೇರಿ: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗುರುವಾರ ಮಳೆಯಾಗಿದ್ದು, ಬಿತ್ತನೆ ಮಾಡಿ ಮಳೆಗಾಗಿ ಕಾಯುತ್ತಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮರೆಯಾಗಿದ್ದ ಮಳೆ ಬುಧವಾರದಿಂದ ಆರಂಭವಾಗಿದ್ದು, ರೈತರಲ್ಲಿ ಮೂಡಿದ್ದ ಆತಂಕ ದೂರ ಮಾಡಿದೆ. ಹಾವೇರಿ ನಗರದಲ್ಲಿ ಗುರುವಾರ ಬೆಳಗ್ಗೆ ಮಳೆಯಾಗಿ ನಂತರ ಬಿಡುವು ನೀಡಿ ಮತ್ತೆ ಮಧ್ಯಾಹ್ನ ಮಳೆ ಸುರಿಯಿತು. ದಿನವಿಡಿ ಮೋಡ ಕವಿದ ವಾತಾವಣದೊಂದಿಗೆ ತಂಪು ಗಾಳಿ ಬೀಸಿತು. ಹಾನಗಲ್ಲ, ಬ್ಯಾಡಗಿ, ರಾಣಿಬೆನ್ನೂರು, ಹಿರೇಕೆರೂರು, ರಟ್ಟಿಹಳ್ಳಿ, ಶಿಗ್ಗಾಂವಿ, ಸವಣೂರು ಭಾಗದಲ್ಲೂ ಮಳೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲಾದ್ಯಂತ 26.10 ಮಿಮೀ ಮಳೆಯಾಗಿದೆ. ಮಳೆಯಿಂದಾಗಿ ಶಿಗ್ಗಾಂವಿ ತಾಲೂಕಿನಲ್ಲಿ 2, ಸವಣೂರು ತಾಲೂಕಿನಲ್ಲಿ 2 ಮನೆಗಳಿಗೆ ಹಾನಿಯಾಗಿದೆ. ಬ್ಯಾಡಗಿ ತಾಲೂಕಿನ ಕೆರವಡಿ ಗ್ರಾಮದ ವಿಜಯಕುಮಾರ ಗಡಗಿ ಹಾಗೂ ವೀರಪ್ಪ ಉಳ್ಳಾಗಡ್ಡಿ ಅವರ ಜಮೀನಿನಲ್ಲಿ ಬೆಳೆದಿದ್ದ ಕ್ಯಾಬೇಜ್ ಬೆಳೆ ಹಾನಿಯಾಗಿದೆ. ಶಿಗ್ಗಾಂವಿ ತಾಲೂಕಿನ ಹಿರೇಮಲ್ಲೂರ ಗ್ರಾಮದಲ್ಲಿ ಸುಮಾರು 1 ಹೆಕ್ಟೇರ್ ಜಮೀನಿನಲ್ಲಿ ನೀರು ನಿಂತಿದೆ.15ರ ವರೆಗೆ ಮಳೆ: ಮುಂಜಾಗ್ರತಾ ಕ್ರಮಕ್ಕೆ ಡಿಸಿ ಸೂಚನೆ

ಹಾವೇರಿ: ಮುಂದಿನ 4 ದಿನಗಳಲ್ಲಿ ಅಂದರೆ ಜೂ. 15ರ ವರೆಗೆ ಜಿಲ್ಲೆಯಲ್ಲಿ ಗುಡಗು ಸಿಡಿಲಿನೊಂದಿಗೆ ಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಸಾರ್ವಜನಿಕರು ಮುಂಜಾಗ್ರತಾ ಸೂಚನೆಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.ಸಾರ್ವಜನಿಕರು, ಮಕ್ಕಳು, ಕೂಲಿ ಕಾರ್ಮಿಕರು, ವ್ಯಾಪಾರಿಗಳು ಮಳೆ ಗಾಳಿ, ಸಿಡಿಲು ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೇ ಸೂಕ್ತ ಕಟ್ಟಡದಲ್ಲಿ ಸ್ಥಳ ಹಾಗೂ ಪ್ರದೇಶಗಳಲ್ಲಿ ಆಶ್ರಯ ಪಡೆಯಬೇಕು. ಕೃಷಿ ಚಟುವಟಿಕೆಗಳಿಂದ ದೂರವಿರಬೇಕು. ಸಾರ್ವಜನಿಕರು, ಪ್ರವಾಸಿಗರು, ಮೀನುಗಾರರು ನದಿ, ನೀರಿರುವ ಪ್ರದೇಶಗಳಲ್ಲಿ ಇಳಿಯದಂತೆ ಕಟ್ಟೆಚ್ಚರ ವಹಿಸುವುದು ಸೂಕ್ತವಾಗಿರುತ್ತದೆ.ಈ ಸಂದರ್ಭದಲ್ಲಿ ಮಕ್ಕಳು, ಸಾರ್ವಜನಿಕರು ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳ ಹತ್ತಿರ ಹೋಗಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರ ಇರಬೇಕು.

ದುರ್ಬಲವಾದ, ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ, ಮರಗಳ ಕೆಳಗೆ ನಿಲ್ಲಬಾರದು. ಕಟ್ಟಡಗಳ ಮೇಲೆ ಅಪಾಯಕಾರಿ ಹಾಗೂ ದುರ್ಬಲವಾದ ರೆಂಬೆ- ಕೊಂಬೆಗಳಿದ್ದಲ್ಲಿ ಮೊದಲೇ ಕತ್ತರಿಸಿ ವಾಸಿಸುವ ಕಟ್ಟಡಗಳನ್ನು ರಕ್ಷಿಸಿಕೊಳ್ಳಬೇಕು.

ಹೆಚ್ಚು ಮಳೆಯಾಗುವುದರಿಂದ ಕೆಲವು ಪ್ರದೇಶಗಳು ಜಲಾವೃತಗೊಳ್ಳುವ ಸಂಭವ ಹೆಚ್ಚಾಗಿರುತ್ತದೆ. ಹಾಗಾಗಿ ಇಂತಹ ಪ್ರದೇಶಗಳಲ್ಲಿ ವಾಸಿಸುವ ಸಾರ್ವಜನಿಕರು ತಹಸೀಲ್ದಾರರ ಕಚೇರಿ ಅಥವಾ ಗ್ರಾಮ ಪಂಚಾಯಿತಿ ಸಿಬ್ಬಂದಿಯನ್ನು ಸಂಪರ್ಕಿಸಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಸಾಕಷ್ಟು ಮುಂಚಿತವಾಗಿಯೇ ಉಳಿಯಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂಗೆ ಕರೆ ಮಾಡಬಹುದು. ತುರ್ತು ಸೇವೆಗೆ ಶುಲ್ಕರಹಿತ 1077 ಹಾಗೂ ದೂ. 08375- 249102 ಸಂಪರ್ಕಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''