ಕನ್ನಡಪ್ರಭ ವಾರ್ತೆ ಬೆಳಗಾವಿ
ತಮ್ಮ ಮನೆಯೊಳಗೆ ನುಗ್ಗಿದ ನೀರನ್ನು ಹೊರ ತೆಗೆಯಲು ಜನರು ಹರಸಾಹಸ ಮಾಡಬೇಕಾಯಿತು. ಗಾಳಿ ಮಳೆಗೆ ಅಲ್ಲಲ್ಲಿ ಮರಗಳು, ವಿದ್ಯುತ್ ಕಂಬಗಳು ಧರೆಗುಳಿದಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ನಗರದ ಪಾಂಗೋಳ ಗಲ್ಲಿ, ಬೆಂಡಿ ಬಜಾರ್ ಪ್ರದೇಶಗಳಲ್ಲಿ ಚರಂಡಿಯಲ್ಲಿ ಮಳೆ ನೀರು ಸರಾಗವಾಗಿ ಹರಿಯದೇ ಇರುವುದರಿಂದ ನೀರು ಮನೆಗೊಳಗೆ ನುಗ್ಗಿತ್ತು. ರಸ್ತೆಯ ಮೇಲೆಯೇ ನೀರು ಹರಿದಿದ್ದರಿಂದ ಜನರು ಓಡಾಡಲು ತೀವ್ರ ತೊಂದರೆ ಎದುರಿಸಬೇಕಾಯಿತು. ಕೋಟೆ ಕೆರೆ ಬಳಿಯಿರುವ ಹಣ್ಣಿನ ಮಾರುಕಟ್ಟೆ ಪ್ರದೇಶದಲ್ಲಿಯೂ ನೀರು ತುಂಬಿ ಹರಿಯಿತು.
ಬೆಳಗಾವಿಯಲ್ಲಿ ಶಿವಾಜಿ ಜಯಂತಿ ಹಿನ್ನೆಲೆಯಲ್ಲಿ ಹೊರಡಿಸಲಾಗಿದ್ದ ಶಿವಾಜಿ ಮಹಾರಾಜರ ರೂಪಕ ವಾಹನಗಳ ಮೆರವಣಿಗೆಗೂ ಮಳೆ ಅಡ್ಡಿಯಾಯಿತು. ಮಾರ್ಚ್ ತಿಂಗಳಿಂದಲೇ ಬಿಸಿಲಿನ ಪ್ರಖರತೆ ಹೆಚ್ಚಾಗಿತ್ತು. ಜಿಲ್ಲೆಯ ತಾಪಮಾನ 40 ಡಿಗ್ರಿ ಸೆಲ್ಸಿಯಸ್ನಷ್ಟು ದಾಖಲಾಗಿತ್ತು. ಜನರು ಬಿಸಿಲಿನ ಬೇಗೆಯಿಂದ ಬಸವಳಿದಿದ್ದರು. ಶನಿವಾರ ಸುರಿದ ಅಬ್ಬರದ ಮಳೆಯಿಂದಾಗಿ ನಗರದಲ್ಲಿ ತಂಪಿನ ವಾತಾವರಣ ನಿರ್ಮಾಣವಾಗಿದೆ. ಮಳೆ ಸುರಿದಿದ್ದರಿಂದ ಕೃಷಿಕರಲ್ಲಿ ಮಂದ ಹಾಸ ಮೂಡಿದಂತಾಗಿದೆ.