ಅತಿವೃಷ್ಟಿ ಗೋವಿನಜೋಳ ಬೆಳೆ ಕುಂಠಿತ: ಸಂಕಷ್ಟಕ್ಕೊಳಗಾದ ರೈತ

KannadaprabhaNewsNetwork |  
Published : Jul 02, 2025, 11:48 PM IST
ಮುಂಡಗೋಡ: ಮಳೆ ಜಾಸ್ತಿಯಾದ ಪರಿಣಾಮ ಅತಿವೃಷ್ಟಿಯಿಂದಾಗಿ ಬಹುತೇಕ ಭಾಗದ ಗೋವಿನ ಜೋಳ ಬೆಳೆ ಕೊಳೆ ರೋಗಕ್ಕೆ ತುತ್ತಾಗಿದೆ | Kannada Prabha

ಸಾರಾಂಶ

ನಿರಂತರವಾಗಿ ಸುರಿದ ಪರಿಣಾಮ ಅತಿವೃಷ್ಟಿಯಿಂದಾಗಿ ಬಹುತೇಕ ಭಾಗದ ಗೋವಿನಜೋಳ ಬೆಳೆ ಕೊಳೆ ರೋಗಕ್ಕೆ ತುತ್ತಾಗಿದೆ.

ಮುಂಡಗೋಡ: ನಿರಂತರವಾಗಿ ಸುರಿದ ಪರಿಣಾಮ ಅತಿವೃಷ್ಟಿಯಿಂದಾಗಿ ಬಹುತೇಕ ಭಾಗದ ಗೋವಿನಜೋಳ ಬೆಳೆ ಕೊಳೆ ರೋಗಕ್ಕೆ ತುತ್ತಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಗೋವಿನಜೋಳ ಬೆಳೆದ ರೈತರು ಹಾನಿ ಅನುಭವಿಸಿದ್ದು, ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ.

ತಾಲೂಕಿನಲ್ಲಿ ಸುಮಾರು ೧೫೦೦೦ ಹೆಕ್ಟೇರ್‌ ಬಿತ್ತನೆ ಪ್ರದೇಶ ಹೊಂದಿರುವ ಇಲ್ಲಿ ಯಾವುದೇ ನೀರಾವರಿ ಯೋಜನೆ ಇಲ್ಲ. ಇಲ್ಲಿಯ ಬಹುತೇಕ ರೈತರು ಮಳೆ ಆಶ್ರಯಿಸಿಯೇ ವ್ಯವಸಾಯ ಮಾಡುತ್ತಾರೆ. ಭತ್ತ ಪ್ರಧಾನ ಪ್ರದೇಶವಾಗಿರುವ ತಾಲೂಕಿನಲ್ಲಿ ಮೊದಲೆಲ್ಲ ಶೇ.೮೦ ಭೂಮಿಯಲ್ಲಿ ಭತ್ತ ಬೆಳೆಯಲಾಗುತ್ತಿತ್ತು. ಇತ್ತೀಚಿನ ಕೆಲ ವರ್ಷಗಳಿಂದ ಮಳೆ ಕಡಿಮೆಯಾಗಿದ್ದರಿಂದ ಅನಾವೃಷ್ಟಿಯಿಂದ ಭತ್ತದ ಬೆಳೆ ಕುಂಠಿತವಾಗುತ್ತಾ ಬಂದಿದ್ದರಿಂದ ಸಾಕಷ್ಟು ರೈತರು ಗೋವಿನಜೋಳ ಬೆಳೆಯತ್ತ ಮುಖ ಮಾಡಿದ್ದರು. ಮೊದಲೆಲ್ಲ ತಾಲೂಕಿನಲ್ಲಿ ಒಂದು ಸಾವಿರ ಹೆಕ್ಟೇರ್ ಕೂಡ ಗೋವಿನಜೋಳ ಇರಲಿಲ್ಲ. ಮಳೆ ಕಡಿಮೆಯಾಗುತ್ತಾ ಬಂದಿದ್ದರಿಂದ ಬಹತೇಕ ರೈತರು ಭತ್ತದ ಬದಲು ಗೋವಿನಜೋಳ ಬೆಳೆಯಲು ಮುಂದಾದರು. ವರ್ಷದಿಂದ ವರ್ಷಕ್ಕೆ ಗೋವಿನಜೋಳದ ಬಿತ್ತನೆ ಜಾಸ್ತಿಯಾಗುತ್ತಲೇ ಹೋಯಿತು. ಕಡಿಮೆ ಕರ್ಚಿನಲ್ಲಿ ಉತ್ತಮ ಬೆಳೆ ಹಾಗೂ ಹೆಚ್ಚಿನ ಲಾಭ ಕೂಡ ಸಿಗಲಾರಂಬಿಸಿದ್ದರಿಂದ ಬಹುತೇಕ ರೈತರು ಭತ್ತವನ್ನು ಬಿಟ್ಟು ಗೋವಿನಜೋಳ ಬೆಳೆಯುವಲ್ಲಿ ಆಸಕ್ತಿ ವಹಿಸಿ ಹೆಚ್ಚಿನ ಪ್ರಮಾಣದಲ್ಲಿ ಗೋವಿನಜೋಳ ಬೆಳೆಯಲಾರಂಭಿಸಿದರು. ಈಗ ಬರೋಬ್ಬರಿ ೫೦೦೦ ಹೆಕ್ಟೇರ್‌ಗೂ ಅಧಿಕ ಪ್ರದೇಶದಲ್ಲಿ ಗೋವಿನಜೋಳ ಬೆಳೆಯಲಾಗಿದೆ. ತಾಲೂಕಿನ ಬಿತ್ತನೆ ಪ್ರದೇಶದ ಪೈಕಿ ಶೇ.೫೦ರಷ್ಟು ಗೋವಿನಜೋಳ ಬೆಳೆಯಲಾಗುತ್ತಿದೆ.

ಭತ್ತದ ಕಣಜ ಎಂದೇ ಪ್ರಖ್ಯಾತಿ ಹೊಂದಿರುವ ಮುಂಡಗೋಡ ತಾಲೂಕಿನಲ್ಲಿ ಮೊದಲು ಸುಮಾರು ೧೦ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುತ್ತಿದ್ದ ಭತ್ತ ಈಗ ಕೇವಲ ೫-೬ ಸಾವಿರ ಹೆಕ್ಟೇರ್ ಗೆ ಇಳಿದಿದೆ. ಭತ್ತಕ್ಕೆ ಸರಿಸಮಾನವಾಗಿ ಗೋವಿನಜೋಳ ಕೂಡ ಬೆಳೆಯಲಾಗುತ್ತಿದೆ.

ಕಳೆದ ಕೆಲ ವರ್ಷಗಳಿಂದ ಒಳ್ಳೆಯ ಫಸಲು ಪಡೆದು ಲಾಭ ಗಳಿಸಿದ ರೈತರು ಅದನ್ನೇ ಗಮನದಲ್ಲಿಟ್ಟುಕೊಂಡು ಈ ಬಾರಿ ಕೂಡ ರೈತರು ಮತ್ತಷ್ಟು ಹೆಚ್ಚಿನ ಪ್ರಮಾಣದಲ್ಲಿ ಗೋವಿನಜೋಳ ಬೆಳೆದಿದ್ದರು. ಪ್ರಸಕ್ತ ಸಾಲಿನಲ್ಲಿ ನಿರಂತರ ಮಳೆಯಿಂದಾಗಿ ಗದ್ದೆಯಲ್ಲಿ ನೀರು ಸಂಗ್ರಹವಾಗಿ ತೇವಾಂಶ ಹೆಚ್ಚಿದ ಪರಿಣಾಮ ಗೋವಿನಜೋಳ ಬೆಳೆಗೆ ಕೊಳೆ ರೋಗ ಕಾಣಿಸಿಕೊಂಡು ಬೆಳೆಯಲ್ಲಿ ಕುಂಠಿತವಾಗಿದೆ. ಗೋವಿನಜೋಳ ಬೆಳೆಗಾರರು ನಷ್ಟ ಅನುಭವಿಸಿದ್ದು, ಕೈಸುಟ್ಟುಕೊಂಡಿದ್ದಾರೆ. ಇದರಿಂದ ಭಾರಿ ನಿರೀಕ್ಷೆಯಿಂದ ಹೆಚ್ಚಿನ ಪ್ರಮಾಣದಲ್ಲಿ ಗೋವಿನ ಜೋಳ ಬೆಳೆದ ರೈತರಿಗೆ ನಿರಾಸೆಯನ್ನುಂಟು ಮಾಡಿದೆ.

ಮಳೆ ಪ್ರಮಾಣ ಹೆಚ್ಚು:

ಪ್ರಸಕ್ತ ಸಾಲಿನಲ್ಲಿ ಜನವರಿ ೧ರಿಂದ ಜೂನ್ ೩೦ರವರೆಗೆ ತಾಲೂಕಿನಲ್ಲಿ ೫೪೬.೪ ಮಿ.ಮೀ. ಮಳೆಯಾಗಿದೆ. ವಾಡಿಕೆಯಂತೆ ೪೧೭.೯ ಮಿ.ಮೀ. ಮಳೆಯಾಗಬೇಕಿತ್ತು. ವಾಡಿಕೆಗಿಂತ ಸುಮಾರು ಶೇ.೩೧ರಷ್ಟು ಮಳೆ ಜಾಸ್ತಿಯಾಗಿದೆ. ಕಳೆದ ವರ್ಷ ಈ ವೇಳೆಗೆ ೩೭೨.೫ ಮಿ.ಮೀ. ಮಳೆಯಾಗಿತ್ತು.

ಬಿಡುವಿಲ್ಲದೇ ನಿರಂತರವಾಗಿ ಮಳೆಯಾಗಿದ್ದರಿಂದ ತಗ್ಗು ಹಾಗೂ ನೀರು ನಿಲ್ಲುವಂತಹ ಪ್ರದೇಶದಲ್ಲಿ ಬೆಳೆಯಲಾದ ಗೋವಿನಜೋಳ ಬೆಳೆಗೆ ತೇವಾಂಶ ಹೆಚ್ಚಿದ ಪರಿಣಾಮ ಕೊಳೆರೋಗ ಕಾಣಿಸಿಕೊಂಡಿದೆ. ತುಕ್ಕು ರೋಗ ಬರುವ ಸಾದ್ಯತೆ ಇದೆ. ರೈತರು ಸಂಗ್ರಹವಾದ ಹೆಚ್ಚಿನ ಪ್ರಮಾಣದ ನೀರನ್ನು ಬಸಿಗಾಲುವೆ ಮೂಲಕ ಹೊರಗೆ ಹಾಕಿ ಔಷಧೋಪಚಾರ ಮಾಡಬೇಕಿದೆ ಎನ್ನುತ್ತಾರೆ ಮುಂಡಗೋಡ ಸಹಾಯಕ ಕೃಷಿ ನಿರ್ದೇಶಕ ಕೆ.ಎನ್ ಮಹಾರೆಡ್ಡಿ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ