ಚಳ್ಳಕೆರೆ: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಗೋವಿಂದ ಎಂ.ಕಾರಜೋಳ ಸ್ಪರ್ಧಿಸಿದ್ದು, ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ವಿಧಾನಸಭಾಕ್ಷೇತ್ರ ವ್ಯಾಪ್ತಿಯಲ್ಲಿ ಮೋದಿ ಅವರ ಬಲವಾದ ಅಲೆ ಎದಿದ್ದು, ಚುನಾವಣೆಯಲ್ಲಿ ಗೋವಿಂದ ಎಂ.ಕಾರಜೋಳ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ನಡೆಸುವರು ಎಂದು ಅಭ್ಯರ್ಥಿ ಗೋವಿಂದ ಎಂ.ಕಾರಜೋಳ ಅವರ ಪುತ್ರ ಉಮೇಶ್ ಕಾರಜೋಳ ತಿಳಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು ಭೇಟಿ ಮಾಡಿದ ಅವರು, ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಎರಡು ಲೋಕಸಭಾ ಚುನಾವಣೆಗಳಲ್ಲಿ ಹೊರಗಡೆಯಿಂದ ಬಂದ ವ್ಯಕ್ತಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಬಿಜೆಪಿ ಪಕ್ಷದಿಂದಲೂ ಸಹ ಗೋವಿಂದ ಎಂ.ಕಾರಜೋಳ ಸಮರ್ಥ ವ್ಯಕ್ತಿಯಾಗಿದ್ದು, ಅವರ ಸ್ಪರ್ಧೆಯಿಂದ ಗೆಲುವು ಸುಲಭವಾಗಲಿದೆ ಎಂದು ಟಿಕೆಟ್ ನೀಡಿದ್ದಾರೆ. ನಮ್ಮ ತಂದೆ ಈ ಹಿಂದೆ ಸರ್ಕಾರದಲ್ಲಿ ಸಚಿವರಾದಾಗ ಜಿಲ್ಲೆಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ ಎಂದರು.
ವಿಶ್ವ ಹಿಂದೂ ಪರಿಷತ್ ತಾಲೂಕು ಅಧ್ಯಕ್ಷ ಡಾ.ಡಿ.ಎನ್.ಮಂಜುನಾಥ ಮಾತನಾಡಿ, ಇಂದು ರಾಷ್ಟ್ರದೆಲ್ಲೆಡೆ ಮೋದಿ ಅವರ ಆಡಳಿತವನ್ನು ಜನ ಬಯಸುತ್ತಿದ್ದಾರೆ. ಇಂದಿನ ಪ್ರಸ್ತುತ ಸ್ಥಿತಿಯಲ್ಲಿ ದೇಶಕ್ಕೆ ಉತ್ತಮ ಆಡಳಿತ ನೀಡುವ ಶಕ್ತಿ, ಸಾಮರ್ಥ್ಯವಿರುವುದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮಾತ್ರ ಸಾಧ್ಯ. ಆದ್ದರಿಂದ ನಾವೆಲ್ಲರೂ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವಿಗೆ ಹೋರಾಟ ನಡೆಸಬೇಕು ಎಂದರು. ನಗರದ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಉಮೇಶ್ ಕಾರಜೋಳ ಜೊತೆ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದರು.