ಕನ್ನಡಪ್ರಭ ವಾರ್ತೆ ಕೋಲಾರಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಣಿಕೆ, ಮಾರಾಟ ಹಾಗೂ ಅವುಗಳ ಬಳಕೆಯಾಗುವುದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎನ್.ಸಿ.ಓ.ಆರ್.ಡಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಾದಕ ವಸ್ತುಗಳಿಗೆ ಯುವ ಸಮುದಾಯ ಹೆಚ್ಚು ಆಕರ್ಷಿತವಾಗುತ್ತಿದೆ. ಇವುಗಳ ಬಳಕೆಯಿಂದ ದೇಹದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ, ಇವುಗಳಿಂದ ದೂರ ಉಳಿಯುವಂತೆ ನೋಡಿಕೊಳ್ಳಲು ಕಾರ್ಯಕ್ರಮಗಳನ್ನು ಏರ್ಪಡಿಸಿಬೇಕು ಎಂದರು.
ಜನಜಾಗೃತಿಗೆ ಕಾರ್ಯಕ್ರಮ: ವಿದ್ಯಾಸಂಸ್ಥೆಗಳಲ್ಲಿ ಜಾಗೃತಿ ಕಾರ್ಯಕ್ರಮ ಹಾಗೂ ವಿವಿಧ ಸ್ಪರ್ಧೆಗಳನ್ನು ನಡೆಸಬೇಕು. ಈಗಾಗಲೇ ಕೆಲವು ವಿದ್ಯಾಸಂಸ್ಥೆಗಳಲ್ಲಿ ಈ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ, ಇವುಗಳು ಎಷ್ಟು ಪ್ರಮಾಣದಲ್ಲಿ ಉಪಯುಕ್ತವಾಗುತ್ತಿವೆ ಎಂಬ ಬಗ್ಗೆಯೂ ಮಾಹಿತಿ ಕಲೆ ಹಾಕಬೇಕು. ತಂಬಾಕು ಉತ್ಪನ್ನಗಳು ಸೇರಿದಂತೆ ಮಾದಕ ವಸ್ತುಗಳ ದುಶ್ಚಟಗಳಿಗೆ ಕಾರ್ಮಿಕರು ವ್ಯಸನಿಗಳಾಗುತ್ತಿದ್ದಾರೆ. ಇವರಿಗೂ ಸಹ ಅರಿವು ಮೂಡಿಸಬೇಕು ಎಂದರು.ಮದಕವಸ್ತು ವ್ಯಸನಕ್ಕೆ ಗುರಿಯಾಗಿರುವ ಕಾರ್ಮಿಕರ ಮನಪರಿವರ್ತಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮಾದಕ ವಸ್ತಗಳಿಂದ ದೂರ ಉಳಿಯುವ ಹಾಗೆ ನೋಡಿಕೊಳ್ಳಬೇಕು ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.ಗಾಂಜಾ ಬೆಳೆ ಪತ್ತೆ ಮಾಡಬೇಕು: ಕೃಷಿ, ತೋಟಗಾರಿಕೆ, ಅರಣ್ಯ ಇಲಾಖೆಯ ಸಿಬ್ಬಂದಿ ಆಗಿಂದಾಗ್ಗೆ ಕೃಷಿ ಜಮೀನುಗಳು, ತೋಟಗಳಿಗೆ ಭೇಟಿ ನೀಡಿ, ಗಾಂಜಾ ಬೆಳೆಗಳನ್ನು ಬೆಳೆಯುತ್ತಿದ್ದಾರಾ ಎಂಬ ಬಗ್ಗೆ ಪರಿಶೀಲಿಸಬೇಕು. ಅಂಚೆ ಇಲಾಖೆಯ ಪಾರ್ಸೆಲ್ಗಳಲ್ಲಿ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿರುವ ಬಗ್ಗೆ ಯಾವುದೇ ದೂರುಗಳು ಕಂಡುಬರುತ್ತಿಲ್ಲ. ಅದೇ ರೀತಿ ಖಾಸಗಿ ಪಾರ್ಸೆಲ್ ಸರ್ವೀಸ್ಗಳ ಕಚೇರಿಗಳನ್ನು ಹಾಗೂ ಆನ್ಲೈನ್ ಮಾರುಕಟ್ಟಯೆ ಗೋದಾಮುಗಳನ್ನು ಪರಿಶೀಲಿಸಬೇಕು. ರೈಲ್ವೆ ಇಲಾಖೆಯ ಸಿಬ್ಬಂದಿ ಸಹ ನಿಲ್ದಾಣದಲ್ಲಿ ಮಾದಕ ವಸ್ತುಗಳ ಸರಬರಾಜು ಬಗ್ಗೆ ನಿಗಾ ವಹಿಸಬೇಕು. ಅನುಮಾನಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಅವರ ಬಗ್ಗೆ ತನಿಖೆ ಮಾಡಬೇಕು ಎಂದು ಸೂಚನೆ ನೀಡಿದರು.ಜಿಲ್ಲಾ ರಕ್ಷಣಾಧಿಕಾರಿ ಡಾ.ನಿಖಿಲ್.ಬಿ ಮಾತನಾಡಿ, ನಿಬಂಧಿತ ಮತ್ತುಬರಿಸುವ ಔಷಧಿಗಳು ಜನ ಸಾಮಾನ್ಯರೆಲ್ಲರಿಗೂ ಮಾರಾಟ ಮಾಡುವಂತಿಲ್ಲ. ಈ ಬಗ್ಗೆ ಜಿಲ್ಲೆಯ ಔಷಧ ನಿಯಂತ್ರಣ ಅಧಿಕಾರಿಗಳು ಔಷಧಿ ಅಂಗಡಿಗಳ ಬಗ್ಗೆ ಎಚ್ಚರವಹಿಸಬೇಕು, ಜಿಲ್ಲೆಯನ್ನು ಮಾದಕ ವ್ಯಸನ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಕೈಜೋಡಿಸಬೇಕು ಎಂದರು.ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯ ನಿಯಂತ್ರಣ ತಂಡಗಳನ್ನು ರಚಿಸಿ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋ?ಕರಿಗೆ ಅರಿವು ಮೂಡಿಸುವ ಕೆಲಸವನ್ನು ಮಾಡಬೇಕು. ಕಾಲೇಜು ವಿದ್ಯಾರ್ಥಿ ನಿಲಯಗಳಲ್ಲಿ ರಜೆಯ ದಿನಗಳಲ್ಲಿ ಮನೆಗಳಿಗೆ ಹೋಗಿ ನಂತರ ಹಾಸ್ಟೆಲ್ಗಳಿಗೆ ಮರಳಿ ಬರುವ ಸಂದರ್ಭದಲ್ಲಿ ಅವರು ಯಾವುದಾದರೂ ಮಾದಕ ವಸ್ತುಗಳನ್ನು ಏನಾದರೂ ತೆಗೆದುಕೊಂಡು ಬರುತ್ತಾರಾ ಎಂಬುದನ್ನು ಪರಿಶೀಲನೆ ಮಾಡಬೇಕಾಗುತ್ತದೆ ಎಂದು ತಿಳಿಸಿದರು.ಜಿಪಂ ಸಿಇಓ ಪ್ರವೀಣ್ ಪಿ.ಬಾಗೇವಾಡಿ, ಕೆಜಿಎಫ್ ಎಸ್ಪಿ ಶಾಂತರಾಜು, ಉಪ ವಿಭಾಗಾಧಿಕಾರಿ ಡಾ.ಮೈತ್ರಿ, ಜಿಲ್ಲಾ ಆರೋಗ್ಯ ಅಧಿಕಾರಿ ಶ್ರೀನಿವಾಸ, ಸಮಾಜ ಕಲ್ಯಾಣ ಅಧಿಕಾರಿ ಶ್ರೀನಿವಾಸನ್ ಇದ್ದರು.