ಸಿರುಗುಪ್ಪ: ಮುಂಜಾಗ್ರತಾ ಕ್ರಮಗಳ ಮೂಲಕ ಮಲೇರಿಯಾ ತಡೆಯಬಹುದು. ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಂಡರೆ ಸೊಳ್ಳೆಗಳ ಉತ್ಪತ್ತಿಯನ್ನು ನಿಯಂತ್ರಿಸಿ, ರೋಗ ಬರದಂತೆ ನಿಗಾ ವಹಿಸಬಹುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ದಮ್ಮೂರು ಬಸವರಾಜ ಹೇಳಿದರು.
ಮಲೇರಿಯಾ ಜ್ವರ ಅನಾಫಿಲಿಸ್ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಚಳಿ, ನಡುಕ, ಬಿಟ್ಟು ಬಿಟ್ಟು ಜ್ವರ ಬರುವುದು, ವಾಕರಿಕೆ, ಮೈ ಬೆವರುವುದು ಲಕ್ಷಣಗಳು ಕಂಡು ಬಂದಲ್ಲಿ ಮಲೇರಿಯಾ ಜ್ವರ ಇರಬಹುದು ಎಂದು ಭಾವಿಸಿ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತಪರೀಕ್ಷೆಗೆ ಒಳಪಟ್ಟು ಸೂಕ್ತ ಉಚಿತ ಚಿಕಿತ್ಸೆ ಪಡೆಯಬೇಕು. ಮನೆಯ ಸುತ್ತಮುತ್ತಲು ಆರೋಗ್ಯ ಇಲಾಖೆಯಿಂದ ಕೈಗೊಳ್ಳುವ ಕೀಟನಾಶಕ ಸಿಂಪರಣೆಗೆ ಸಾರ್ವಜನಿಕರು ಸಹಕರಿಸಬೇಕು. ಸ್ವಯಂ ರಕ್ಷಣಾ ಕ್ರಮಗಳಾದ ಮಲಗುವಾಗ ಸೊಳ್ಳೆ ಪರದೆ ಬಳಕೆ ಮಾಡಬೇಕು. ಕಿಟಕಿಗಳಿಗೆ ಸೊಳ್ಳೆಗಳು ನುಸುಳದಂತೆ ಜಾಲರಿ ಅಳವಡಿಸಬೇಕು ಎಂದು ತಿಳಿಸಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮಹ್ಮದ್ ಖಾಸಿಂ, ಕ್ಷೇತ್ರ ಕಾರ್ಯಕ್ರಮ ವ್ಯವಸ್ಥಾಪಕ ಪ್ರಹ್ಲಾದ್, ತಾಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ಭೀಮ್ ರೆಡ್ಡಿ, ಮಲೇರಿಯಾ ಮೇಲ್ವಿಚಾರಕ ಶ್ರೀನಿವಾಸ,ಆಶಾ ಮೇಲ್ವಿಚಾರಕಿ ಸುಜಾತಾ, ನಗರ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಚಂದ್ರಶೇಖರ, ಆಪ್ತ ಸಮಾಲೋಚಕ ಮಲ್ಲೇಶಪ್ಪ, ಪ್ರಯೋಗಶಾಲಾ ತಂತ್ರಜ್ಞ ನರೇಶ ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಜಾಥಾದಲ್ಲಿ ಭಾಗವಹಿಸಿದ್ದರು.
ತಾಲೂಕು ಆರೋಗ್ಯ ಇಲಾಖೆಯ ಆವರಣದಲ್ಲಿ ಶುರುಗೊಂಡ ಜಾಗೃತಿ ಜಾಥಾವು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಜನರಲ್ಲಿ ಮಲೇರಿಯಾ ರೋಗ ಹರಡುವಿಕೆ ಕುರಿತು ಅರಿವು ಮೂಡಿಸಿತು.