ಬುಗುಡನಹಳ್ಳಿ ಕೆರೆಗೆ ಹೇಮಾವತಿ ನೀರು: ಡಿಸಿಎಂ ಪರಮೇಶ್ವರ್ ಭೇಟಿ

KannadaprabhaNewsNetwork |  
Published : Aug 23, 2026, 01:15 AM IST
 | Kannada Prabha

ಸಾರಾಂಶ

ಈ ಬಾರಿ ಬರಗಾಲದ ಪರಿಸ್ಥಿತಿ ಇರುವುದರಿಂದ ಬುಗುಡನಹಳ್ಳಿ ಕೆರೆಗೆ ಹರಿದುಬರುವ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ಬಳಸಬೇಕು. ಯಾವುದೇ ಕಾರಣಕ್ಕೂ ಕೃಷಿ ಚಟುವಟಿಕೆಗಳಿಗೆ ನೀರನ್ನು ಬಳಸಬಾರದು ಎಂದು ಸಾರ್ವಜನಿಕರಲ್ಲಿ ಡಿಸಿಎಂ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ, ತುಮಕೂರು

ಮಳೆಯ ಕೊರತೆಯಿಂದ ಡೆಡ್ ಸ್ಟೋರೇಜ್ ತಲುಪಿದ್ದ ತುಮಕೂರು ನಗರದ ಪ್ರಮುಖ ಕುಡಿಯುವ ನೀರಿನ ಮೂಲವಾದ ಬುಗುಡನಹಳ್ಳಿ ಕೆರೆಗೆ ಹೇಮಾವತಿ ಜಲಾಶಯದಿಂದ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಶನಿವಾರ ಸಂಜೆ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಾಸನ ಜಿಲ್ಲೆಯ ಗೊರೂರು ಹೇಮಾವತಿ ಜಲಾಶಯದಿಂದ ಕಳೆದ ಎರಡು ದಿನಗಳಿಂದ ಬುಗುಡನಹಳ್ಳಿ ಕೆರೆಗೆ ನೀರು ಹರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆರೆಯ ನೀರಿನ ಮಟ್ಟ ಹಾಗೂ ನೀರು ಹರಿವಿನ ಕುರಿತು ಅಧಿಕಾರಿಗಳಿಂದ ಡಿಸಿಎಂ ಮಾಹಿತಿ ಪಡೆದರು.

ಬಳಿಕ ಮಾತನಾಡಿದ ಡಾ. ಜಿ. ಪರಮೇಶ್ವರ್, ಬುಗುಡನಹಳ್ಳಿ ಕೆರೆಯಲ್ಲಿ ನೀರಿನ ಮಟ್ಟ ಕಡಿಮೆಯಾಗಿತ್ತು. ಹೇಮಾವತಿ ಜಲಾಶಯದಲ್ಲಿ ನೀರು ಲಭ್ಯವಿರುವ ಹಿನ್ನೆಲೆಯಲ್ಲಿ ತುಮಕೂರು ನಗರಕ್ಕೆ ಮುಂದಿನ ಮೂರೂವರೆ ತಿಂಗಳ ಕುಡಿಯುವ ನೀರಿನ ಅಗತ್ಯವಿದೆ ಎಂದು ಮನವಿ ಮಾಡಿದ್ದರಿಂದ ನೀರು ಬಿಡಲಾಗಿದೆ ಎಂದು ತಿಳಿಸಿದರು.

ಮತ್ತೆ ಡಿಸೆಂಬರ್ ವೇಳೆಗೆ ನೀರು ಅಗತ್ಯವಾಗಲಿದ್ದು, ಕೆರೆಯನ್ನು ತುಂಬಿಸಿಕೊಂಡರೆ ಮುಂದಿನ ಮೇ–ಜೂನ್‌ವರೆಗೆ ನಗರದ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದಿಲ್ಲ. ಹೇಮಾವತಿ ನೀರು ಬಂದಿರುವುದು ಸಂತಸದ ಸಂಗತಿ ಎಂದರು.

ಈ ಬಾರಿ ಬರಗಾಲದ ಪರಿಸ್ಥಿತಿ ಇರುವುದರಿಂದ ಬುಗುಡನಹಳ್ಳಿ ಕೆರೆಗೆ ಹರಿದುಬರುವ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ಬಳಸಬೇಕು. ಯಾವುದೇ ಕಾರಣಕ್ಕೂ ಕೃಷಿ ಚಟುವಟಿಕೆಗಳಿಗೆ ನೀರನ್ನು ಬಳಸಬಾರದು ಎಂದು ಸಾರ್ವಜನಿಕರಲ್ಲಿ ಡಿಸಿಎಂ ಮನವಿ ಮಾಡಿದರು.

ತುಮಕೂರು ಮಹಾನಗರ ಪಾಲಿಕೆ ಆಯುಕ್ತೆ ಬಿ. ಶುಭ ಮಾತನಾಡಿ, ಹೇಮಾವತಿ ಜಲಾಶಯದಿಂದ ನೀರು ಬಿಡಲಾಗಿದ್ದು, ಆಗಸ್ಟ್ 27ರವರೆಗೆ ನೀರು ಹರಿಸುವ ಸಾಧ್ಯತೆಯಿದೆ. ಸುಮಾರು 100 ಎಂಸಿಎಫ್‌ಟಿ ನೀರು ಬಂದರೂ ತುಮಕೂರು ನಗರದ ಜನರಿಗೆ ಜನವರಿವರೆಗೆ ಯಾವುದೇ ಆತಂಕವಿಲ್ಲದೆ ಕುಡಿಯುವ ನೀರು ಪೂರೈಸಲು ಸಾಧ್ಯವಾಗಲಿದೆ ಎಂದು ಹೇಳಿದರು.

ಹೇಮಾವತಿ ನೀರನ್ನು ಪಂಪ್ ಅಥವಾ ಮೋಟರ್‌ಗಳ ಮೂಲಕ ಕೃಷಿಗೆ ಬಳಸಬಾರದು. ಕುಡಿಯುವ ನೀರಿಗೆ ಮಾತ್ರ ಬಳಕೆ ಮಾಡಬೇಕು ಎಂದು ಅವರು ಸರ‍್ವಜನಿಕರಲ್ಲಿ ಮನವಿ ಮಾಡಿದರು.

ಡಿಸಿಎಂ ಡಾ. ಜಿ. ಪರಮೇಶ್ವರ್ ಅವರೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಮಹಾನಗರ ಪಾಲಿಕೆ ಆಯುಕ್ತೆ ಬಿ. ಶುಭ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು..

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಎಲ್ಲರೂ ಪಾಲ್ಗೊಳ್ಳಿ: ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಸಲಹೆ
ಹೈನುಗಾರಿಕೆ ಗ್ರಾಮೀಣರಿಗೆ ಆಸರೆ : ನಂಜೇಗೌಡ