ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು: ಭೋಜೇಗೌಡತಾಲೂಕು ಮಟ್ಟದ ಪ್ರೌಢಶಾಲಾ ಪ್ರತಿಭಾ ಕಾರಂಜಿ- ಕಲೋತ್ಸವ
ನರಿಗುಡ್ಡೇನಹಳ್ಳಿಯಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ- ಕಲೋತ್ಸವ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಮಕ್ಕಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ಕೆಲಸವನ್ನು ಪ್ರತಿಭಾ ಕಾರಂಜಿ ಕಾರ್ಯಕ್ರಮ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಭೋಜೇಗೌಡ ಸಲಹೆ ಮಾಡಿದರು. ನಗರದ ಹೊರವಲಯದ ನರಿಗುಡ್ಡೆನಹಳ್ಳಿಯ ಡಾ.ಎಚ್. ನರಸಿಂಹಯ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ ಬುಧವಾರ ನಡೆದ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಉದ್ಘಾಟಿಸಿ ಮಾತನಾಡಿದರು. ಯಾವ ಮಕ್ಕಳಲ್ಲಿ ಯಾವ ಕಲೆ ಸುಪ್ತವಾಗಿ ಅಡಗಿದೆ ಎಂಬುದನ್ನು ಯಾರಿಂದಲೂ ಊಹಿಸಲು ಸಾಧ್ಯ ವಾಗುವುದಿಲ್ಲ. ಪ್ರತಿಯೊಬ್ಬ ಮಕ್ಕಳಲ್ಲೂ ಯಾವುದಾದರೂ ಒಂದು ಕಲೆ ಅಥವಾ ವಿಶೇಷತೆ ಅಡಗಿರುತ್ತದೆ. ಕೆಲವರಿಗೆ ಕಲೆ ಹೊರ ಹಾಕುವ ವೇದಿಕೆ ದೊರೆತ ಮೇಲೆ ಬರುತ್ತಾರೆ. ಆದರೆ, ಬಹಳಷ್ಟು ಮಕ್ಕಳು ಅವಕಾಶದಿಂದ ವಂಚಿತರಾಗಿ ಹಾಗೇ ಉಳಿಯುತ್ತಾರೆ ಎಂದು ವಿಷಾಧಿಸಿದರು. ಅಂತಹ ಪ್ರತಿಭೆಗಳನ್ನು ಸಮಾಜದ ಮುಂದೆ ತರುವ ಕೆಲಸವನ್ನು ಪ್ರತಿಭಾ ಕಾರಂಜಿಗಳು ಮಾಡಬೇಕು ತಮ್ಮ ಮಕ್ಕಳಲ್ಲಿ ಅಡಗಿರುವ ಕಲೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಪೋಷಕರು. ಶಿಕ್ಷಕರು ಮಾಡಬೇಕು, ಹಾಗಾದಾಗ ಮಾತ್ರ ಸಮಾಜದಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿ ಬೆಳೆಯುತ್ತದೆ ಎಂದು ಕಿವಿ ಮಾತು ಹೇಳಿದರು.ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಪ್ರತಿಭೆ ಗುರುತಿಸಿದ ನಂತರ ಶಿಕ್ಷಕರು ಅದಕ್ಕೆ ನೀರೆರೆದು ಪೋಷಿಸುವ ಕೆಲಸ ಮಾಡಬೇಕು. ಪೋಷಕರು ಸಹ ತಮ್ಮ ಮಕ್ಕಳ ಆಸಕ್ತಿ ಗುರುತಿಸಿ ಅದೇ ದಾರಿಯಲ್ಲಿ ಸಾಗಲು ಅವರಿಗೆ ಅವಕಾಶ ಕಲ್ಪಿಸಿಕೊಡಬೇಕು. ಹಾಗಾದಾಗ ಮಾತ್ರ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಅರ್ಥಪೂರ್ಣ ವಾಗುತ್ತವೆ ಎಂದು ತಿಳಿಸಿದರು. ನಗರಸಭೆ ಸದಸ್ಯೆ ಸಿ.ಎ. ಇಂದಿರಾ ಶಂಕರ್ ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿ ಸಹಕಾರಿ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪೋಷಕರು ತಮ್ಮ ಮಕ್ಕಳನ್ನು ಮೊಬೈಲ್ ನಿಂದ ದೂರವಿಡಬೇಕು ಎಂದು ಸಲಹೆ ಮಾಡಿದರು.ಪ್ರತಿಭಾ ಕಾರಂಜಿಯಲ್ಲಿನ ತೀರ್ಪುಗಾರರು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ಯಾವುದೇ ಪಕ್ಷಪಾತವಿಲ್ಲದೆ ಅಂಕ ನೀಡುವ ಮೂಲಕ ಅರ್ಹರನ್ನು ಆರಿಸಬೇಕು ಎಂದು ಸಲಹೆ ಮಾಡಿದರು. ಪ್ರಬಾರ ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ ಮಾತನಾಡಿ ಪ್ರತಿಭಾ ಕಾರಂಜಿ ಕಾರ್ಯಕ್ರಮ ರಾಜ್ಯಕ್ಕೆ ಚಿಕ್ಕಮಗಳೂರು ಜಿಲ್ಲೆಯ ಕೊಡುಗೆಯಾಗಿದೆ. ಮಕ್ಕಳ ಹಬ್ಬವಾಗಿ ಜಿಲ್ಲೆಯಲ್ಲಿ ಆರಂಭಗೊಂಡ ಕಾರ್ಯಕ್ರಮ ಶಿಕ್ಷಣ ಇಲಾಖೆ ಪ್ರತಿಭಾ ಕಾರಂಜಿ ಎಂದು ಕರೆದು ಮುಂದುವರೆಸಿತು ಎಂದು ತಿಳಿಸಿದರು.ಮಕ್ಕಳಲ್ಲಿರುವ ಸುಪ್ತ ಪ್ರತಿಭೆ ಗುರುತಿಸಿ ಅದನ್ನು ಸಮಾಜಕ್ಕೆ ಪರಿಚಯಿಸುವ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಅತಿಥೇಯ ಶಾಲೆಯ ಮುಖ್ಯ ಶಿಕ್ಷಕ ಟಿ.ಜಿ. ಚಂದ್ರಾನಾಯಕ್ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು. ತಾಲೂಕಿನ 6 ವಲಯಗಳ 85 ಪ್ರೌಢಶಾಲೆಗಳ 200 ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆ ಪ್ರದರ್ಶಿಸಿದರು. ಡಾ. ಎಚ್. ನರಸಿಂಹಯ್ಯ ಸ್ಮಾರಕ ಪ್ರೌಢಶಾಲೆಯ ಕಾರ್ಯದರ್ಶಿ ಗಂಗಾಧರ ನಾಯಕ್ ನೋಡಲ್, ಅಧಿಕಾರಿ ಎಂ.ಇ. ವಿನೋದ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಕೆ.ಆರ್. ಉದಯಕುಮಾರ್, ಪ್ರೌಢಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಪರಮೇಶ್ವರಪ್ಪ, ಸಹ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ್, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಗಂಗಾಧರ್, ಶಿಕ್ಷಣ ಸಂಯೋಜಕ ವೀರೇಶ್ ಕೌಲಗಿ, ರೂಪಾ ನಾಯಕ್, ಟಿ.ಜಿ.ಕೆ. ಅರಸ್ ಉಪಸ್ಥಿತರಿದ್ದರು
22 ಕೆಸಿಕೆಎಂ 1ಚಿಕ್ಕಮಗಳೂರಿನ ನರಿಗುಡ್ಢೇನಹಳ್ಳಿಯ ಡಾ.ಎಚ್. ನರಸಿಂಹಯ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಬುಧವಾರ ನಡೆದ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಉದ್ಘಾಟಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.