ಕನ್ನಡಪ್ರಭ ವಾರ್ತೆ ವಿಜಯಪುರ
ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಸಹಯೋಗದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದಾಖಲೆಗಳಿಲ್ಲದೆ ಜಾನುವಾರುಗಳ ಸಾಗಣೆ ಮಾಡುವುದು ಕಾನೂನಿನ ವಿರುದ್ಧವಾಗಿದೆ. ಹಾಗಾಗಿ ಅಕ್ರಮವಾಗಿ ಜಾನುವಾರುಗಳ ಸಾಗಣೆಯಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು. ಜಾನುವಾರು ಖರೀದಿ ಹಾಗೂ ಮಾರಾಟ ಮಾಡುವ ವೇಳೆ ಜಾನುವಾರುಗಳಿಗೆ ಕಿವಿಯೋಲೆ ಇರುವುದು ಕಡ್ಡಾಯ. ಸಾಗಾಣಿಕೆ ವಿಚಾರವಾಗಿ ಸಂಬಂಧಪಟ್ಟ ಅಧಿಕಾರಿಗಳಿಂದ ಧೃಡೀಕರಣ ಪತ್ರ ಕಡ್ಡಾಯವಾಗಿದೆ. ಎಲ್ಲ ಜಾನುವಾರುಗಳ ಮಾಲೀಕರಿಗೆ ಮನವೊಲಿಸಿ ಕಿವಿಯೋಲೆ ಹಾಕುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದರು.
ಬಕ್ರೀದ್ ಹಬ್ಬದ ಮುನ್ನಾ ದಿನವಾದ ಮೇ 27 ಹಾಗೂ ಮೇ 28ರಂದು ಜಾನುವಾರುಗಳ ಅಕ್ರಮ ವಧೆ ಹಾಗೂ ಸಾಗಣೆ ತಡೆಗಟ್ಟಲು ನಗರಪಾಲಿಕೆ, ಪಶುಪಾಲನಾ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳ ತಂಡ ರಚಿಸಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಕೈಕೊಳ್ಳಬೇಕು. ಈ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಆಯುಕ್ತರು ತಂಡಗಳನ್ನು ರಚಿಸಿ ಅದರ ಮೇಲುಸ್ತುವಾರಿ ವಹಿಸಿಕೊಳ್ಳಬೇಕು ಎಂದು ಅವರು ಸಭೆಗೆ ತಿಳಿಸಿದರು.ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಮಾತನಾಡಿ, ಜಿಲ್ಲೆಯ ತಾಲೂಕು ವ್ಯಾಪ್ತಿಯಲ್ಲಿರುವ ತಹಸೀಲ್ದಾರ್ ನೇತೃತ್ವದಲ್ಲಿ ನಗರ, ಪುರಸಭೆ, ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸಂಬಂಧಪಟ್ಟ ಆಯುಕ್ತರು ಹಾಗೂ ಮುಖ್ಯ ಅಧಿಕಾರಿಗಳ ನೇತೃತ್ವದಲ್ಲಿ, ಪಶು ಸಂಗೋಪನಾ ಇಲಾಖೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ಒಳಗೊಂಡಂತೆ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸಬೇಕು. ತಿಡಗುಂದಿ ಟೋಲ್ ಗೇಟ್, ಧೂಳಖೇಡ, ಸೊಲಾಪುರ ನಾಕಾ, ಹಾಗೂ ಜಮಖಂಡಿ ನಾಕಾಗಳಲ್ಲಿ ಹೆಚ್ಚುವರಿ ತಂಡಗಳನ್ನು ರಚಿಸಬೇಕು ಎಂದು ಸೂಚಿಸಿದರು. ಒಂದು ವೇಳೆ ವಶಪಡಿಸಿಕೊಂಡ ಗೋವುಗಳನ್ನು ತಕ್ಷಣ ಹತ್ತಿರದ ಗೋಶಾಲೆಗಳಿಗೆ ಹಸ್ತಾಂತರಿಲು ಕ್ರಮ ವಹಿಸಬೇಕು. ಪಶುಸಂಗೋಪನಾ ಇಲಾಖೆಯಲ್ಲಿ ವಾಹನಗಳ ಕೊರತೆ ಇದ್ದು, ಈ ಸಂದರ್ಭದಲ್ಲಿ ಪ್ರತಿ ತಂಡಕ್ಕೆ ಒಂದರಂತೆ ವಾಹನಗಳನ್ನು ಒದಗಿಸಲು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
ಇದೇ ಸಂದರ್ಭದಲ್ಲಿ ಪ್ರಾಣಿ ಕಲ್ಯಾಣ ಮಂಡಳಿಯು ಭಾರತದ ಪ್ರಾಣಿ ಕಲ್ಯಾಣ ಮತ್ತು ಸಂರಕ್ಷಣಾ ಕಾನೂನು, ಪ್ರಾಣಿಗಳ ಜನನ ನಿಯಂತ್ರಣ ನಿಯಮ -2023 ಹಾಗೂ ಭಾರತದಲ್ಲಿ ನೀವು ತಿಳಿದಿರಲೇಬೇಕಾದಂತಹ ಪ್ರಾಣಿಗಳ ಕಾನೂನು ಕುರಿತು ಕರ ಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.
-ರಾಮಗೌಡ ಹಟ್ಟಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ