ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಕೊಪ್ಪ ಹೋಬಳಿ ಕೌಡ್ಲೆ ಗ್ರಾಮದಲ್ಲಿ ನೂತನ ಪಶು ಆಸ್ಪತ್ರೆ ಕಾಮಗಾರಿಗೆ ಚಾಲನೆ ನೀಡಿದ ನಂತರ ಸುದ್ಧಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಶಾಸಕರಲ್ಲಿ ಯಾವುದೇ ಬಣಗಳಿಲ್ಲ, ಗೊಂದಲವಿಲ್ಲ. ಸಿಎಂ ಬದಲಾವಣೆ, ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಪಕ್ಷದ ಎಲ್ಲಾ ವಿಚಾರವನ್ನು ಪಕ್ಷದ ಹೈಕಮಾಂಡ್ ಗೆ ಬಿಟ್ಟಿದ್ದೇವೆ ಎಂದು ಸ್ಪಷ್ಟನೆ ನೀಡಿದರು.
ರಾಷ್ಟ್ರಮಟ್ಟದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರೀಯ ನಾಯಕರಾದ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಸುರ್ಜೇವಾಲ, ವೇಣುಗೋಪಾಲ್, ರಾಜ್ಯ ಮಟ್ಟದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇವರೇ ಹೈಕಮಾಂಡ್. ಇವರೇ ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಕಾಂಗ್ರೆಸ್ ಪಕ್ಷದಲ್ಲಿ ಸಿಎಂ, ಡಿಸಿಎಂಗಿಂತ ನಾನು ದೊಡ್ಡವನಲ್ಲ. ವಿಪಕ್ಷಗಳು ಏನೇ ಆರೋಪ ಮಾಡಿದರೂ ಅದು ಹುಸಿಯಾಗುತ್ತದೆ. ಇನ್ನೂ 15 ದಿನಗಳಲ್ಲಿ ಎಲ್ಲಾ ಗೊಂದಲಗಳು ನಿವಾರಣೆಯಾಗುತ್ತದೆ. ಸರ್ಕಾರಕ್ಕೆ ಇದರಿಂದ ಯಾವುದೇ ತೊಂದರೆಯಾಗುವುದಿಲ್ಲ. ಸುಸೂತ್ರವಾಗಿ ಮುಂದುವರಿಯಲಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರ ರಾಜ್ಯವನ್ನು ನಿರ್ಲಕ್ಷ್ಯ ಮಾಡುತ್ತಲೇ ಬಂದಿದೆ. 2023ರಲ್ಲಿ ಬರಗಾಲದಿಂದ ರಾಜ್ಯದಲ್ಲಿ ನಷ್ಟ ಉಂಟಾದಾಗ ಸುಪ್ರೀಂಕೋರ್ಟ್ ಮೂಲಕ ಕೇಳಿ ಪರಿಹಾರ ಪಡೆಯುವಂತಾಯಿತು. ಕೇಂದ್ರ ಸಚಿವರು, ಸಂಸದರು ಈ ಬಗ್ಗೆ ಮಾತನಾಡುತ್ತಿಲ್ಲ. ಇದರಿಂದ ರಾಜ್ಯವೇ ಸಾಧ್ಯವಾದಷ್ಟು ಕೆಲಸ ಮಾಡಬೇಕಾಗುತ್ತದೆ ಎಂದರು.
ಮುಂದಿನವಾರ ಮೈಷುಗರ್ , ಬಿಜೆಪಿಯವರ ಹೋರಾಟ ಕುರಿತು ಉತ್ತರಿಸಿದ ಸಚಿವರು, ದೇವರು ಅವರಿಗೆ ಒಳ್ಳೆಯದು ಮಾಡಲಿ. ರೈತಸಂಘ, ಕಾರ್ಮಿಕರು ಸೇರಿದಂತೆ ಎಲ್ಲರಿಗೂ ಹೋರಾಟ ಮಾಡುವ ಹಕ್ಕು ಇದೆ. ಯಾವ ಸಮಸ್ಯೆಗೆ ಹೋರಾಟ ಎಂಬುದು ಸೂಕ್ತ ಕಾರಣ ನನಗೆ ಗೊತ್ತಾದರೆ ಅದಕ್ಕೆ ಸ್ಪಂದಿಸಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.