ಕನ್ನಡಪ್ರಭ ವಾರ್ತೆ ಬೆಂಗಳೂರು
ಇದು ಪೊಲೀಸ್ ತನಿಖಾ ವೈಖರಿ ಬಗ್ಗೆ ಹೈಕೋರ್ಟ್ ಮೌಖಿಕವಾಗಿ ವ್ಯಕ್ತಪಡಿಸಿರುವ ಬೇಸರದ ಪರಿ.
ಕ್ರಿಮಿನಲ್ ಪ್ರಕರಣವೊಂದರ ವಿಚಾರಣೆ ಸಂದರ್ಭದಲ್ಲಿ ಪೊಲೀಸ್ ತನಿಖಾ ವರದಿಯ ಲೋಪಗಳ ಬಗ್ಗೆ ನ್ಯಾಯಮೂರ್ತಿ ವಿ.ಶ್ರಿಷಾನಂದ ಅವರು ಪ್ರತಿಕ್ರಿಯಿಸಿ, ಸರ್ಕಾರಿ ವಕೀಲರು, ನ್ಯಾಯಾಧೀಶರು ಹಾಗೂ ಕಾನೂನು ತಜ್ಞರು ನಿಯಮಿತವಾಗಿ ಕಾರ್ಯಕ್ರಮಗಳನ್ನು ನಡೆಸಿ ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಕಾನೂನುಗಳ ಅರಿವು ಮೂಡಿಸಬೇಕು. ನ್ಯಾಯಾಲಯಗಳ ತೀರ್ಪುಗಳ ಬಗ್ಗೆ ಮಾಹಿತಿ ನೀಡಬೇಕು. ತನಿಖೆ ವೇಳೆ ಅನುಸರಿಸಬೇಕಾದ ವಿಧಾನಗಳನ್ನು ತಿಳಿಸಿಕೊಡುವುದು ಸೂಕ್ತ ಎಂದು ಸಲಹೆ ನೀಡಿದರು.ವಿಚಾರಣೆ ಸಂದರ್ಭದಲ್ಲಿ ಪೊಲೀಸರು ತನಿಖೆ ವೇಳೆ ಎಸಗುವ ಲೋಪಗಳನ್ನು ಸರ್ಕಾರಿ ಅಭಿಯೋಜಕರಿಗೆ ವಿವರಿಸಿದ ನ್ಯಾಯಮೂರ್ತಿಗಳು, ಪೊಲೀಸರು ತನಿಖೆ ವೇಳೆ ಅನುಸರಿಸಬೇಕಾದ ವಿಧಾನಗಳನ್ನು ಪಾಲಿಸುತ್ತಿಲ್ಲ. ಈ ಪರಿಸ್ಥಿತಿಗೂ ಮತ್ತೊಂದು ಕಾರಣವಿದೆ. ಪ್ರತಿ ದಿನ ವಿಐಪಿಯೊಬ್ಬರು ನಗರಕ್ಕೆ ಬರುತ್ತಾರೆ. ಅವರ ಸುಗಮ ಸಂಚಾರ ವ್ಯವಸ್ಥೆ ಹಾಗೂ ಬಂದೋಬಸ್ತ್ಗೆ ಎಲ್ಲ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಬೆಳಗ್ಗೆ ಎದ್ದರೆ ಪೊಲೀಸರು ಬಂದೋಬಸ್ತ್ ಕೆಲಸದಲ್ಲಿ ಇರುತ್ತಾರೆ. ಇನ್ನು ಯಾವಾಗ ಪೊಲೀಸರು ತನಿಖೆ ನಡೆಸುತ್ತಾರೆ ಎಂದು ಪ್ರಶ್ನಿಸಿದರು.
ವಾಸನೆ ಬರುತ್ತದೆ ಎಂಬ ಕಾರಣಕ್ಕೆ ಯಾವೊಬ್ಬ ತನಿಖಾಧಿಕಾರಿಯೂ ಪೋಸ್ಟ್ ಮಾರ್ಟಂ ನಡೆಯುವಾಗ ಹಾಜರು ಇರುವುದಿಲ್ಲ. ಮಹತ್ವದ ಪ್ರಕರಣದಲ್ಲಿ ಅಪರೂಪಕ್ಕೆ ಹೋದರೂ ವೈದ್ಯರೊಂದಿಗೆ ಮಾತನಾಡುತ್ತಾ ಕೂರುತ್ತಾರಷ್ಟೆ. ಘಟನಾ ಸ್ಥಳದ ಪಂಚನಾಮೆ/ಮಹಜರು ಸರಿಯಾಗಿ ಮಾಡುವುದಿಲ್ಲ. ಡಿವೈಎಸ್ಪಿ ಶ್ರೇಣಿಯ ಅಧಿಕಾರಿಯಾಗಿದ್ದರೂ ಸರಿಯಾಗಿ ನಾಲ್ಕು ವಾಕ್ಯ ಪಂಚನಾಮೆ ಬಗ್ಗೆ ಬರೆಯಲು ಗೊತ್ತಿರುವುದಿಲ್ಲ. ತನಿಖೆಯಲ್ಲಿ ಘಟನಾ ಸ್ಥಳದ ಮಹಜರು/ಸ್ಕೆಚ್ ಮಹತ್ವದಾಯಕ ಎಂಬುದು ತನಿಖಾಧಿಕಾರಿ ತಿಳಿದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಹೇಳಿದರು.
ಆರೋಪಿ ಘಟನೆ ಸ್ಥಳಕ್ಕೆ ಹೇಗೆ ಬಂದ, ಹೇಗೆ ಹೋದ, ಹೇಗೆ ಕೃತ್ಯ ಎಸಗಿದ, ಆರೋಪಿಯನ್ನು ಯಾರಾದರೂ ನೋಡಿರುವ ಸಾಧ್ಯತೆ ಇದೆಯೇ? ಘಟನಾ ಸ್ಥಳದ ಸುತ್ತ ಏನೇನಿದೆ ಎಂಬುದನ್ನು ಮಹಜರು ವರದಿ ತಿಳಿಸುತ್ತದೆ. ಈ ಎಲ್ಲ ವಿವರಗಳು ತಿಳಿಯದೆ ಹೋದರೆ ಹೇಗೆ ತನಿಖೆ ಸರಿ ದಾರಿಯಲ್ಲಿ ನಡೆಯುತ್ತದೆ. ಈ ತಪ್ಪುಗಳನ್ನು ಪೊಲೀಸರು/ತನಿಖಾಧಿಕಾರಿಗಳು ಸರಿಪಡಿಸಿಕೊಳ್ಳಬೇಕು. ತನಿಖಾಧಿಕಾರಿ ಸೂಕ್ತವಾಗಿ ಮಹಜರು ಮಾಡಬೇಕು. ಮಾಸ್ಕ್ ಧರಿಸಿ ಶವ ಪರೀಕ್ಷೆ ನಡೆಯುವ ಸ್ಥಳಕ್ಕೆ ಹೋಗಬೇಕು. ಕ್ರಿಮಿನಲ್ ಕಾನೂನುಗಳನ್ನು ತಿಳಿದಿರಬೇಕು ಎಂದು ನ್ಯಾಯಮೂರ್ತಿಗಳು ನುಡಿದರು.