ಏಡ್ಸ್‌ ಪೀಡಿತನ ವಿಚ್ಛೇದನ ಹೈಕೋರ್ಟಲ್ಲಿ ರದ್ದು !

KannadaprabhaNewsNetwork |  
Published : May 07, 2026, 02:15 AM IST
ಹೈಕೋರ್ಟ್‌ | Kannada Prabha

ಸಾರಾಂಶ

ಎಚ್‌ಐವಿ/ಏಡ್ಸ್‌ನಿಂದ ನಾನು ಬಳಲುತ್ತಿದ್ದೇನೆ ಎಂದು ಪತ್ನಿ ಮತ್ತು ಆಕೆಯ ಕುಟುಂಬದವರು ನಿಂದಿಸಿದ್ದಾರೆ ಎಂಬ ಆಧಾರದಲ್ಲಿ ಪತಿಗೆ ವಿಚ್ಛೇದನ ಮಂಜೂರು ಮಾಡಿ ಕೌಟುಂಬಿಕ ನ್ಯಾಯಾಲಯ ಹೊರಡಿಸಿದ್ದ‌ ಆದೇಶವನ್ನು ‌ಹೈಕೋರ್ಟ್‌ ರದ್ದುಪಡಿಸಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಎಚ್‌ಐವಿ/ಏಡ್ಸ್‌ನಿಂದ ನಾನು ಬಳಲುತ್ತಿದ್ದೇನೆ ಎಂದು ಪತ್ನಿ ಮತ್ತು ಆಕೆಯ ಕುಟುಂಬದವರು ನಿಂದಿಸಿದ್ದಾರೆ ಎಂಬ ಆಧಾರದಲ್ಲಿ ಪತಿಗೆ ವಿಚ್ಛೇದನ ಮಂಜೂರು ಮಾಡಿ ಕೌಟುಂಬಿಕ ನ್ಯಾಯಾಲಯ ಹೊರಡಿಸಿದ್ದ‌ ಆದೇಶವನ್ನು ‌ಹೈಕೋರ್ಟ್‌ ರದ್ದುಪಡಿಸಿದೆ.

ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಪತ್ನಿ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿಗಳಾದ ಸೂರಜ್‌ ಗೋವಿಂದರಾಜ್‌ ಮತ್ತು ಡಾ. ಚಿಲ್ಲಕೂರ್‌ ಸುಮಲತಾ ಅವರಿದ್ದ ವಿಭಾಗೀಯ ಪೀಠ, ದಾಖಲೆಯಿಲ್ಲದೇ ಪತಿ ಮಾಡಿರುವ ಇಂತಹ ಗಂಭೀರ ಆರೋಪವನ್ನು ಒಪ್ಪಲಾಗದು. ಹಾಗಾಗಿ, ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದುಪಡಿಸಲಾಗಿದೆ. ಆ ನ್ಯಾಯಾಲಯ ಹೊಸದಾಗಿ ಪ್ರಕರಣವನ್ನು ಪರಿಗಣಿಸಿ ಕಾನೂನು ಪ್ರಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು‌ ಆದೇಶಿಸಿದೆ.

ಪತ್ನಿ ಮತ್ತು ಆಕೆಯ ಕುಟುಂಬದವರು ವಿನಾ ಕಾರಣ ತಾನು ಎಚ್‌ಐವಿ/ ಏಡ್ಸ್‌ನಿಂದ ಬಳಲುತ್ತಿದ್ದೇನೆ ಎಂದು ಕೆಟ್ಟದಾಗಿ ನಿಂದಿಸಿದ್ದಾರೆ. ಹೀಗಾಗಿ, ಹಿಂದೂ ವಿವಾಹ ಕಾಯ್ದೆ- 1955ರ ಅಡಿ ತಮ್ಮ ವಿವಾಹ ಅಸಿಂಧುಗೊಳಿಸಿ ವಿಚ್ಛೇದನ ಮಂಜೂರು ಮಾಡುವಂತೆ ಕೋರಿ ಪತಿ ಬೀದರ್‌ನ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು‌ ವಿಚ್ಛೇದನ ಮಂಜೂರು ಮಾಡಿ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಪತ್ನಿ ಹೈಕೋರ್ಟ್‌ಗೆ ಮೇಲ್ಮನವಿ‌‌ ಸಲ್ಲಿಸಿದ್ದರು.

ಮೇಲ್ಮನವಿಯ ವಿಚಾರಣೆ ನಡೆಸಿದ ಹೈಕೋರ್ಟ್,‌ ಪತಿ ಎಚ್‌ಐವಿ/ ಏಡ್ಸ್‌ನಿಂದ ಬಳಲುತ್ತಿರುವುದಾಗಿ ಪತ್ನಿ ಹಾಗೂ ಅವರ ಕುಟುಂಬದ ಸದಸ್ಯರು ನಿಂದಿಸಿದ ಆರೋಪ ಸಾಬೀತಾದರೆ ಅದು ನಿಸ್ಸಂಶಯವಾಗಿ ಮಾನಸಿಕ ಕ್ರೌರ್ಯವಾಗುತ್ತದೆ. ಆದರೆ, ಪ್ರಕರಣದಲ್ಲಿನ ಆರೋಪಕ್ಕೆ ಪೂರಕವಾಗಿ ಯಾವುದೇ ದಾಖಲೆಗಳು ಇಲ್ಲ. ಕ್ರೌರ್ಯ ಸಾಬೀತುಪಡಿಸಲು ಸೂಕ್ತ ಮತ್ತು ಆಸಕ್ತಿದಾಯಕ ದಾಖಲೆಗಳನ್ನು ಪತಿ ಒದಗಿಸಿಲ್ಲ‌‌. ಕೌಟುಂಬಿಕ ನ್ಯಾಯಾಲಯವು ಪತಿಯ ಹೇಳಿಕೆಗಳನ್ನು ಸ್ವೀಕರಿಸುವ ಮೂಲಕ ಪುರಾವೆಯಿಲ್ಲದೇ ಕೇವಲ ಆರೋಪವನ್ನು ಪರಿಣಾಮಕಾರಿಯಾಗಿ ಬದಲಾಯಿಸಿದೆ. ಕಾನೂನಿನಲ್ಲಿ ಅದಕ್ಕೆ ಅವಕಾಶವಿಲ್ಲ ಎಂದು ಹೇಳಿದೆ.

ಪ್ರಕರಣವೇನು?:

ದಂಪತಿ 2002ರ ಜೂ. 16ರಂದು ವಿವಾಹವಾಗಿದ್ದರು. ಪತ್ನಿಯು ಖಾಸಗಿ ಶಾಲೆಯಲ್ಲಿ ಪ್ರಿನ್ಸಿಪಾಲ್‌ ಆಗಿದ್ದು, ಪತಿ ಸಾಂಖ್ಯಿಕ ಇನ್‌ಸ್ಪೆಕ್ಟರ್‌ ಆಗಿದ್ದಾರೆ. ಇಬ್ಬರು ಮಕ್ಕಳು ದಂಪತಿಗೆ ಜನಿಸಿದ್ದರು. ಮದುವೆಯಾದ ಆರಂಭದಲ್ಲಿ ಜೀವನ ಚೆನ್ನಾಗಿ ನಡೆದಿತ್ತು. ನಂತರ ಇಬ್ಬರು ಪುತ್ರರೊಂದಿಗೆ ಪತ್ನಿ ತವರು ಮನೆಗೆ ಸೇರಿದ್ದರು. ಸಾಕಷ್ಟು ಬಾರಿ ಕರೆದರೂ ತನ್ನ ಜೊತೆ ಬಂದಿಲ್ಲ. ‌ಬಳಿಕ ತನ್ನನ್ನು ಕೆಟ್ಟದಾಗಿ ನಿಂದಿಸಿದ್ದಾರೆ ಎಂದು ಆರೋಪಿಸಿ ಪತಿ ವಿಚ್ಛೇದನ ಕೋರಿದ್ದರು.‌

ಇದಕ್ಕೆ ಪ್ರತಿಯಾಗಿ ಪತ್ನಿ,‌ ಅನೈತಿಕ ಸಂಬಂಧ ಹೊಂದಿರುವ ಪತಿಗೆ ಆ ಸಂಬಂಧಿಂದಲೂ ಎರಡು ಮಕ್ಕಳಾಗಿದ್ದು, ಈ ಕಾರಣಕ್ಕಾಗಿ ಅವರನ್ನು ತೊರೆದಿರುವುದಾಗಿ ವಾದಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಳೆ ವಿಮೆ ವಿತರಣೆಯಲ್ಲಿ ಅನ್ಯಾಯ ಖಂಡಿಸಿ ಬಿಜೆಪಿ ಪ್ರತಿಭಟನೆ
ಡೆಂಘೀ ತಡೆಗೆ ಮುಂಜಾಗ್ರತಾ ಕ್ರಮಗಳ ಕುರಿತು ಜಾಗೃತಿ ಮೂಡಿಸಿ