ಕನ್ನಡಪ್ರಭ ವಾರ್ತೆ ಬೆಂಗಳೂರು
ಕ್ಯಾಟರಿಂಗ್ ಸೇವೆ ಕುರಿತು 2023ರ ನ.14ರಂದು ಹೊರಡಿಸಿದ್ದ ಸುತ್ತೋಲೆ ಪ್ರಶ್ನಿಸಿ ನೈಋತ್ಯ ಕ್ಯಾಟರಿಂಗ್ ಗುತ್ತಿಗೆದಾರರ ಸಂಘ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.
ಆಹಾರ ಸಿದ್ಧಪಡಿಸುವ, ಪೂರೈಸುವ ವೇಳೆ ಗುಣಮಟ್ಟ ಮತ್ತು ಸ್ವಚ್ಛತೆ ಖಾತರಿಪಡಿಸುವುದು ಸೇರಿದಂತೆ ಮತ್ತಿತರ ವಿಚಾರಗಳಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ರೈಲ್ವೆ ಸಚಿವಾಲಯ ನಿರ್ಧಾರ ಕೈಗೊಂಡಿದೆ. ಈ ವಿಚಾರಗಳಲ್ಲಿ ತನ್ನ ವ್ಯವಸ್ಥೆ ಸರಿಯಾಗಿಟ್ಟುಕೊಳ್ಳುವ ಹೊಣೆಗಾರಿಕೆ ಸಚಿವಾಲಯದ ಮೇಲಿದೆ. ಆಹಾರ ಪೂರೈಕೆಯಲ್ಲಿ ಗುಣಮಟ್ಟ ಮತ್ತು ಹೊಣೆಗಾರಿಕೆ ತರಲು ನೀತಿಯಲ್ಲಿ ತಿದ್ದುಪಡಿ ಮಾಡಿರುವುದು, ಕಾನೂನುಬಾಹಿರ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಹೇಳಲಾಗದು. ಈ ವಿಚಾರದಲ್ಲಿ ಗುತ್ತಿಗೆದಾರರ ಹಿತಕ್ಕಿಂತ ಸಾರ್ವಜನಿಕ ಹಿತವೇ ಮುಖ್ಯವಾಗುತ್ತದೆ. ಹಾಗಾಗಿ, ಸಚಿವಾಲಯದ ನಿರ್ಧಾರದಲ್ಲಿ ನ್ಯಾಯಾಲಯ ಹಸ್ತಕ್ಷೇಪ ಸಲ್ಲ ಎಂದು ಆದೇಶದಲ್ಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.ಅರ್ಜಿದಾರರ ಪರ ವಕೀಲರು, 2017ರ ರೈಲ್ವೆ ಕ್ಯಾಟರಿಂಗ್ ನೀತಿಯನ್ನು ಬಜೆಟ್ ನಲ್ಲಿ ಘೋಷಿಸಿದ ನಂತರ ಜಾರಿಗೊಳಿಸಲಾಗಿದೆ. ಆದರೆ, ತಿದ್ದುಪಡಿಯನ್ನು ಸಂಪುಟದ ಮುಂದೆ ತರದೇ ರೈಲ್ವೆ ಸಚಿವಾಲಯ ಹಾಗೂ ರೈಲ್ವೆ ಮಂಡಳಿಯೇ ನಿರ್ಧಾರ ಕೈಗೊಂಡಿದೆ. ಹಾಗಾಗಿ, ಆ ತೀರ್ಮಾನ ಊರ್ಜಿತವಲ್ಲ. ನೀತಿಯ ಪ್ರಕಾರ ಐಆರ್ಟಿಸಿ ಹೊರತುಪಡಿಸಿ ಇತರೆ ಗುತ್ತಿಗೆದಾರರಿಗೆ ಅವಕಾಶವಿರುವುದಿಲ್ಲ. ಆದರೆ ಇದೀಗ ಇತರೆ ಗುತ್ತಿಗೆದಾರರಿಗೂ ಮುಕ್ತ ಅವಕಾಶ ನೀಡಲಾಗುತ್ತಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.