- ತ್ಯಾವಣಗಿಯಲ್ಲಿ ಡಾ.ಅಂಬೇಡ್ಕರ್ ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ
- - -ಕನ್ನಡಪ್ರಭ ವಾರ್ತೆ ದಾವಣಗೆರೆ
ಮಾಯಕೊಂಡ ಕ್ಷೇತ್ರದಲ್ಲಿ ಹೆಚ್ಚು ಹೆಚ್ಚು ವಸತಿ ಶಾಲೆಗಳನ್ನು ತೆರೆಯಲು ಆದ್ಯತೆ ನೀಡಲಾಗುವುದು. ಆ ಮೂಲಕ ಸಮಾಜದಲ್ಲಿ ತುಳಿತಕ್ಕೊಳಗಾದ ಮಕ್ಕಳಿಗೆ ಶಿಕ್ಷಣ ಸೌಲಭ್ಯ ಕೊಡಿಸಬೇಕೆಂಬುದು ನಮ್ಮ ಗುರಿಯಾಗಿದೆ ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದರು.ಕ್ಷೇತ್ರದ ವ್ಯಾಪ್ತಿಯ ಚನ್ನಗಿರಿ ತಾಲೂಕಿನ ತ್ಯಾವಣಗಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ಉಪವಿಭಾಗ ಚನ್ನಗಿರಿ, ಸಮಾಜ ಕಲ್ಯಾಣ ಇಲಾಖೆ ದಾವಣಗೆರೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಆಶ್ರಯದಲ್ಲಿ ₹18 ಕೋಟಿ ವೆಚ್ಚದ ಡಾ.ಅಂಬೇಡ್ಕರ್ ವಸತಿ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಅಂದು ಹೋಬಳಿಗೊಂದು ವಸತಿ ಶಾಲೆ ತೆರೆದು ತುಳಿತಕ್ಕೊಳಗಾದ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕೆಂದು ಪ್ರೊ.ಕೃಷ್ಣಪ್ಪ ಹೋರಾಟ ಮಾಡಿದ್ದರು. ಅವರ ಹೋರಾಟದ ಫಲವಾಗಿ ಈ ಹಿಂದೆ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದ ಎಚ್.ಆಂಜನೇಯ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಚರ್ಚಿಸಿದಾಗ ಹೋಬಳಿಗೊಂದು ವಸತಿ ಶಾಲೆ ನಿರ್ಮಿಸಿ ಎಂದು ಸೂಚನೆ ನೀಡಿದ್ದರು. ಇದರಿಂದಾಗಿ ಎಚ್.ಆಂಜನೇಯ ರಾಜ್ಯದಲ್ಲಿ 845 ವಸತಿ ಶಾಲೆಗಳನ್ನು ನಿರ್ಮಿಸಲು ಮಂಜೂರಾತಿ ನೀಡಿದ್ದರು. ಅದರ ಫಲವಾಗಿ ಇಂದು ಭೂಮಿಪೂಜೆ ನೆರವೇರಿಸಲಾಗುತ್ತಿದೆ ಎಂದರು.ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ಕಾರಿಗನೂರು, ತ್ಯಾವಣಗಿ, ಬಸವಾಪಟ್ಟಣ, ಆನಗೋಡು ಸೇರಿದಂತೆ 5 ವಸತಿ ಶಾಲೆಗಳನ್ನು ನಿರ್ಮಿಸಲಾಗಿದೆ. ಇನ್ನೂ ಎರಡ್ಮೂರು ವಸತಿ ಶಾಲೆಗಳನ್ನು ನಿರ್ಮಿಸಬೇಕಾಗಿದೆ. ಈ ವರ್ಷ ಬಜೆಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 20 ವಸತಿ ಶಾಲೆಗಳನ್ನು ಮಂಜೂರು ಮಾಡಿದ್ದಾರೆ. ಕಾರ್ಮಿಕ ಇಲಾಖೆ 10, ಅಲ್ಪಸಂಖ್ಯಾತ ಇಲಾಖೆ ಹಿಂದುಳಿದ ವರ್ಗಗಳ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ವಸತಿ ಶಾಲೆಗಳನ್ನು ನಿರ್ಮಿಸಲಾಗುವುದು ಎಂದು ಮಾಹಿತಿ ನೀಡಿದರು.
ಈ ಸಂದರ್ಭ ಲೋಕೋಪಯೋಗಿ ಇಲಾಖೆ ಎಇಇ ರವಿಕುಮಾರ್, ಮಾಜಿ ಜಿಪಂ ಸದಸ್ಯ ಪಿ.ಸಿ. ಗೋವಿಂದಸ್ವಾಮಿ, ಬಸವಾಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ನಾಗರಾಜ್, ಮುಖಂಡರಾದ ಬಿ.ಎಚ್. ಹಾಲಪ್ಪ, ಮಹಾಬಲೇಶ್, ಲೋಹಿತಾಶ್ವ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶಶಿಕಲಾ ಮೂರ್ತಿ, ಪರಶುರಾಮ್, ಅಂಜಿನಪ್ಪ, ಶ್ರೀನಿವಾಸ್, ಗ್ರಾಪಂ ಅಧ್ಯಕ್ಷ ಕರಿಬಸಪ್ಪ, ಸದಸ್ಯರು, ಗ್ರಾಮಸ್ಥರು ಇದ್ದರು.- - -
-16ಕೆಡಿವಿಜಿ40:ಮಾಯಕೊಂಡ ಕ್ಷೇತ್ರದ ವ್ಯಾಪ್ತಿ ತ್ಯಾವಣಗಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ನಿರ್ಮಾಣಕ್ಕೆ ಶಾಸಕ ಕೆ.ಎಸ್. ಬಸವಂತಪ್ಪ ಭೂಮಿಪೂಜೆ ನೆರವೇರಿಸಿದರು.