ಮೀನು ಸಾಕಾಣಿಕೆಯಿಂದ ಅಧಿಕ ಲಾಭ: ಕೃಷಿ ಸಚಿವ ಚಲುವರಾಯಸ್ವಾಮಿ

KannadaprabhaNewsNetwork |  
Published : Dec 02, 2025, 01:30 AM IST
1ಕೆಎಂಎನ್ ಡಿ11 | Kannada Prabha

ಸಾರಾಂಶ

ಮಹಿಳೆಯರ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗಿ ರಾಜ್ಯ ಸರ್ಕಾರ ಹಲವು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಇದರ ಜೊತೆಗೆ ಈಗ ಮತ್ಸ್ಯ ಸಂಜೀವಿನಿ ಯೋಜನೆ ಜಾರಿಗೊಳಿಸುವ ಮೂಲಕ ಮಹಿಳಾ ಒಕ್ಕೂಟಗಳನ್ನು ಸದೃಢಗೊಳಿಸಲು ಮುಂದಾಗಿದೆ.

ಕನ್ನಡಪ್ರಭ ವಾರ್ತೆ ನಾಗಮಂಗಲ

ಗ್ರಾಮೀಣ ಪ್ರದೇಶದ ಮಹಿಳಾ ಒಕ್ಕೂಟಗಳನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮತ್ಸ್ಯ ಸಂಜೀವಿನಿ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ತಾಲೂಕಿನ ತುಪ್ಪದಮಡು ಗ್ರಾಮದಲ್ಲಿ ಮೀನುಗಾರಿಕೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಮತ್ತು ಗ್ರಾಪಂ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಮತ್ಸ್ಯ ಸಂಜೀವಿನಿ ಯೋಜನೆಗೆ ಚಾಲನೆ ನೀಡಿ ಮಾತನಾಡಿ, ಮಹಿಳೆಯರ ಆರ್ಥಿಕ ಅಭಿವೃದ್ಧಿ ಮತ್ತು ಕುಟುಂಬ ನಿರ್ವಹಣೆಗೆ ಮತ್ಸ್ಯ ಸಂಜೀವಿನಿ ಯೋಜನೆ ಸಹಕಾರಿಯಾಗಲಿದೆ ಎಂದರು.

ಮಹಿಳೆಯರ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗಿ ರಾಜ್ಯ ಸರ್ಕಾರ ಹಲವು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಇದರ ಜೊತೆಗೆ ಈಗ ಮತ್ಸ್ಯ ಸಂಜೀವಿನಿ ಯೋಜನೆ ಜಾರಿಗೊಳಿಸುವ ಮೂಲಕ ಮಹಿಳಾ ಒಕ್ಕೂಟಗಳನ್ನು ಸದೃಢಗೊಳಿಸಲು ಮುಂದಾಗಿದೆ. ಮೀನು ಸಾಕಾಣಿಕೆಯಿಂದ ಅಧಿಕ ಲಾಭ ಮತ್ತು ಹೆಚ್ಚು ಅನುಕೂಲವಾಗುತ್ತದೆ. ಹಾಗಾಗಿ ಮಹಿಳಾ ಸ್ವ ಸಹಾಯ ಗುಂಪುಗಳು ಈ ಯೋಜನೆ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಒಟ್ಟು 250 ಮಂದಿ ಮಹಿಳಾ ಸದಸ್ಯರನ್ನೊಳಗೊಂಡ 49 ಸ್ವ ಸಹಾಯ ಗುಂಪುಗಳು ಮತ್ತು 49 ಕೆರೆಗಳನ್ನು ಮತ್ಸ್ಯ ಸಂಜೀವಿನಿ ಯೋಜನೆಗೆ ಆಯ್ಕೆ ಮಾಡಿ ಒಟ್ಟು 9 ಲಕ್ಷ ಮೀನು ಮರಿಗಳನ್ನು ಬಿಟ್ಟು ಸಾಕಾಣಿಕೆ ಮಾಡಿಸುವ ಗುರಿ ಹೊಂದಲಾಗಿದೆ. ತಾಲೂಕಿನಲ್ಲಿ ಪ್ರಾಯೋಗಿಕವಾಗಿ ತುಪ್ಪದಮಡು, ಕಾಳಿಂಗನಹಳ್ಳಿ, ದೇವರಮಲ್ಲನಾಯ್ಕನಹಳ್ಳಿ, ಭೀಮನಹಳ್ಳಿ ಹಾಗೂ ದೊಡ್ಡಾಬಾಲ ಗ್ರಾಪಂ ವ್ಯಾಪ್ತಿಗೆ ಬರುವ 5 ಕೆರೆಗಳನ್ನು ಯೋಜನೆಗೆ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದರು.

ನಂತರ ತುಪ್ಪದಮಡು ಗ್ರಾಮದ ಚಿಕ್ಕಕೆರೆಗೆ ಯೋಜನೆಯ 10 ಸಾವಿರ ಮೀನು ಮರಿಗಳನ್ನು ಬಿಟ್ಟ ಸಚಿವರು, ಗ್ರಾಮದ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರು ತಯಾರಿಸುವ ಆಹಾರ ಉತ್ಪನ್ನಗಳಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕೃತ ಪ್ರಮಾಣಪತ್ರ ವಿತರಿಸಿದರು.

ಈ ವೇಳೆ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಹಾಗೂ ಜಿಪಂ ಪ್ರಭಾರ ಉಪ ಕಾರ್ಯದರ್ಶಿ ಬಿ.ಎಚ್.ಬಾಬಾಸಾಬ್, ತಾಪಂ ಇಒ ಬಿ.ಎಸ್.ಸತೀಶ್, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್, ಗ್ರಾಪಂ ಮಾಜಿ ಅಧ್ಯಕ್ಷ ಎಂ.ರಾಘವೇಂದ್ರ, ಮುಖಂಡರಾದ ಚಿಕ್ಕಮ್ಮ, ಗೀತಾ, ಕಾಂತ, ಪುಟ್ಟಸ್ವಾಮಿ, ಎನ್‌ಆರ್‌ಎಲ್‌ಎಂ ವಿಭಾಗದ ಸಿಬ್ಬಂದಿ ಮತ್ತು ಸಂಜೀವಿನಿ ಒಕ್ಕೂಟದ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಾರತೀಯರ ಕರೆತರಲು ವಿಶೇಷ ವಿಮಾನ ಮಾಡಿ: ಮೋದಿಗೆ ಸಿಎಂ ಸಿದ್ದು ಪತ್ರ
100ಕ್ಕೂ ಕನ್ನಡಿಗರ ಹೊತ್ತು ಬಂತು ಮೊದಲ ವಿಮಾನ