ಮಣ್ಣಿನ ಫಲವತ್ತತೆ ಕಾಪಾಡುವುದರಿಂದ ಹೆಚ್ಚು ಇಳುವರಿ ಸಾಧ್ಯ

KannadaprabhaNewsNetwork |  
Published : Dec 06, 2024, 09:01 AM IST
ಪೊಟೋ: 5ಎಸ್ಎಂಜಿಕೆಪಿ05ಶಿವಮೊಗ್ಗದ ಐ.ಸಿ.ಎ.ಆರ್.-ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಗುರುವಾರ ಏರ್ಪಡಿಸಿದ್ದ ವಿಶ್ವ ಮಣ್ಣು ದಿನಾಚರಣೆ ಕಾರ್ಯಕ್ರಮವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತುತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಡಾ.ಆರ್.ಸಿ.ಜಗದೀಶ ಉದ್ಘಾಟಿಸಿದರು. | Kannada Prabha

ಸಾರಾಂಶ

ಶಿವಮೊಗ್ಗದ ಐಸಿಎಆರ್‌ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆದ ವಿಶ್ವ ಮಣ್ಣು ದಿನಾಚರಣೆ ಕಾರ್ಯಕ್ರಮವನ್ನು ಡಾ.ಆರ್.ಸಿ.ಜಗದೀಶ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ರೈತರು ಗುಣಮಟ್ಟ ಮತ್ತು ಹೆಚ್ಚಿನ ಇಳುವರಿ ಪಡೆಯಲು ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳುವುದು ಅತಿ ಮುಖ್ಯ ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತುತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಡಾ.ಆರ್.ಸಿ.ಜಗದೀಶ ಹೇಳಿದರು.

ಶಿವಮೊಗ್ಗದ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಗುರುವಾರ ನಡೆದ ವಿಶ್ವ ಮಣ್ಣು ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅವರು, ಪ್ರತಿನಿತ್ಯ ಬರಿಗಾಲಲ್ಲಿ ಮಣ್ಣಿನ ಮೇಲೆ ನಡೆದಾಡಿದರೆ ಮಣ್ಣಿನ ಗುಣ ಧರ್ಮವನ್ನು ತಿಳಿಯಲು ಸಾಧ್ಯವಾಗುತ್ತದೆ. ಇದರಿಂದ ಆ ಮಣ್ಣಿನ ನಿರ್ವಹಣೆ ಮಾಡುವುದು ಸುಲಭವಾಗುತ್ತದೆ ಎಂದರು.

ಪ್ರತಿಯೊಬ್ಬ ರೈತರು ಪ್ರತಿ 2 ವರ್ಷಕ್ಕೊಮ್ಮೆ ತಮ್ಮ ಜಮೀನಿನ ಮಣ್ಣಿನ ಪರೀಕ್ಷೆ ಮಾಡಿಸಬೇಕು. ಶಿಫಾರಸ್ಸು ಮಾಡಿದಷ್ಟೇ ಪ್ರಮಾಣದ ಗೊಬ್ಬರಗಳನ್ನು ಭೂಮಿಗೆ ಹಾಕುವುದರಿಂದ ಮಣ್ಣಿನ ಫಲವತ್ತತೆ ಹೆಚ್ಚಿಸುವುದರ ಜೊತೆಗೆ ಬೇಸಾಯದ ಖರ್ಚು ಕಡಿಮೆ ಮಾಡಿಕೊಂಡು ಹೆಚ್ಚಿನ ಇಳುವರಿ ಪಡೆಯಬಹುದು. ಅಲ್ಲದೆ, ಮಣ್ಣಿನ ಫಲವತ್ತತೆಯ ಮಾಹಿತಿ ನಕ್ಷೆ ತಯಾರಿಸುವುದು ಇತ್ತೀಚಿನ ದಿನಗಳಲ್ಲಿ ಅವಶ್ಯವಿದೆ ಎಂದು ಹೇಳಿದರು.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತುತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ಡಾ.ಪಿ.ಕೆ.ಬಸವರಾಜ್ ಮಾತನಾಡಿ, ಕೃಷಿ ಪರಿಸರ ವ್ಯವಸ್ಥೆ ಹಾಗೂ ಹವಾಮಾನ ನಿಯಂತ್ರಣದಲ್ಲಿ ಮಣ್ಣು ಪ್ರಮುಖ ಪಾತ್ರ ವಹಿಸುತ್ತದೆ. ಇದು ನೈಸರ್ಗಿಕ ಫಿಲ್ಟರ್ ರೂಪದಲ್ಲಿ ಕೆಲಸ ಮಾಡುತ್ತದೆ. ಮಣ್ಣಿನ ಸರಿಯಾದ ವಿಶ್ಲೇಷಣೆ ಮಣ್ಣಿನ ಫಲವತ್ತತೆ ಕಾಪಾಡುವಲ್ಲಿ ಅತೀ ಮುಖ್ಯ ಪಾತ್ರ ವಹಿಸುತ್ತದೆ ಎಂದು ಹೇಳಿದರು.

ವಿವಿಯ ಶಿಕ್ಷಣ ನಿರ್ದೇಶಕ ಡಾ.ಬಿ.ಹೇಮ್ಲಾನಾಯ್ಕ್ ಮಾತನಾಡಿ, ಇರುವುದು ಒಂದೇ ಭೂಮಿ, ಆದ್ದರಿಂದ ಮಣ್ಣಿನ ಆರೋಗ್ಯ ಕಾಪಾಡಲು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ಸಾವಯವ ಗೊಬ್ಬರ ತಯಾರಿಸಿ ತಮ್ಮ ಜಮೀನಿಗೆ ಬಳಸಿಕೊಳ್ಳುವುದರಿಂದ ಮಣ್ಣಿನ ಫಲವತ್ತತೆ ಹೆಚ್ಚಿಸಿಕೊಳ್ಳಬಹುದು ಎಂದು ತಿಳಿಸಿದರು.

ವಿವಿಯ ವಿಸ್ತರಣಾ ನಿರ್ದೇಶಕ ಡಾ.ಕೆ.ಟಿ.ಗುರುಮೂರ್ತಿ ಮಾತನಾಡಿ, ಕರ್ನಾಟಕದ ಮಣ್ಣಿನಲ್ಲಿ ಸಾವಯವ ಅಂಶ ಶೇ.40ರಷ್ಟು ಕೊರತೆ ಇದೆ. ಆದ್ದರಿಂದ ರೈತರು ಮಣ್ಣು ನಿರ್ವಹಣೆಯ ಮಹತ್ವವನ್ನು ಅರಿಯಬೇಕಿದೆ. ಇದಕ್ಕೆ ರೈತರು ಸಾವಯವ ಕೃಷಿ, ಹಸಿರೆಲೆ ಗೊಬ್ಬರಗಳನ್ನು ಯಥೇಚ್ಚವಾಗಿ ಬಳಸಿ ಮಣ್ಣಿನ ನಿರ್ವಹಣೆ ಮಾಡಬೇಕಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನೂತನ ಮಾದರಿಯ ‘ಮಣ್ಣು ಆರೋಗ್ಯ ಚೀಟಿ’ಯನ್ನು ಬಿಡುಗಡೆಗೊಳಿಸಿ, ಫಲಾನುಭವಿ ರೈತರಿಗೆ ವಿತರಿಸಿದರು. ಕಾರ್ಯಕ್ರಮದಲ್ಲಿ ಕೆ.ವಿ.ಕೆ.ಯಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಡಾ.ಸಿ.ಸುನಿಲ್ ಸ್ವಾಗತಿಸಿದರು. ವಿಜ್ಞಾನಿ (ಮಣ್ಣು ವಿಜ್ಞಾನ) ಡಾ.ಎಂ.ಸಿ.ಅಂಜಲಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ತಾಂತ್ರಿಕ ಅಧಿಕಾರಿ ಡಾ. ಆರ್.ನಾಗರಾಜ, ನಿರೂಪಿಸಿದರು. ಡಾ. ಮಂಜುನಾಥ ಬಿ.ಕುದರಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5000 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ : ಲಕ್ಷ್ಮೀ
ನಾಯಿಗಳ ಮೇಲೂ ತೆರಿಗೆ ಹೇರಿಕೆಗೆ ಮುಂದಾದ ಸರ್ಕಾರ!