ಸೂಕ್ತ ಪರಿಹಾರಕ್ಕಾಗಿ ಹೆದ್ದಾರಿ ಸಂತ್ರಸ್ತ ರೈತರ ಪ್ರತಿಭಟನೆ

KannadaprabhaNewsNetwork |  
Published : Feb 10, 2026, 01:45 AM IST
9ಎಚ್ಎಸ್ಎನ್17 : ದೋಣಿಗಲ್ ಸಮೀಪ ನಡೆಯುತ್ತಿರುವ ರಸ್ತೆ ಕಾಮಗಾರಿ ಸ್ಥಳದಲ್ಲಿ ಪ್ರತಿಭಟನೆ ನಡೆಸಲಾಯಿತು | Kannada Prabha

ಸಾರಾಂಶ

ಕಂದಲಿಯಿಂದ ಹೆಗ್ಗದ್ದೆವರೆಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿಯಿಂದ ದೋಣಿಗಾಲ್‌ ಸಮೀಪ ವ್ಯಾಪಕ ಹಾನಿ ಉಂಟಾಗಿದ್ದು, ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡದೇ ಯಾವುದೇ ಕಾಮಗಾರಿ ನಡೆಸಬಾರದು ಎಂದು ಒತ್ತಾಯಿಸಿ ಗ್ರಾಮಸ್ಥರು ಹಾಗೂ ರೈತರು ಸೋಮವಾರ ಕಾಮಗಾರಿ ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು. ಸಂತ್ರಸ್ತರು ಈ ಬಗ್ಗೆ ಹಲವು ಬಾರಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಜಿಲ್ಲಾಡಳಿತಕ್ಕೆ ಲಿಖಿತ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರಕಿಲ್ಲ. ಅಲ್ಲದೆ, ಮೂಲ ಡಿಪಿಆರ್‌ (ವಿಸ್ತೃತ ಯೋಜನಾ ವರದಿ) ಪ್ರಕಾರ ಕಾಮಗಾರಿ ನಡೆಸದೇ ಅದರ ಸ್ವರೂಪವನ್ನು ಬದಲಾಯಿಸಿ ಬಲವಂತವಾಗಿ ಕಾಮಗಾರಿ ಮುಂದುವರಿಸಲಾಗುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಸಕಲೇಶಪುರ

ಕಂದಲಿಯಿಂದ ಹೆಗ್ಗದ್ದೆವರೆಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿಯಿಂದ ದೋಣಿಗಾಲ್‌ ಸಮೀಪ ವ್ಯಾಪಕ ಹಾನಿ ಉಂಟಾಗಿದ್ದು, ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡದೇ ಯಾವುದೇ ಕಾಮಗಾರಿ ನಡೆಸಬಾರದು ಎಂದು ಒತ್ತಾಯಿಸಿ ಗ್ರಾಮಸ್ಥರು ಹಾಗೂ ರೈತರು ಸೋಮವಾರ ಕಾಮಗಾರಿ ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು.

ಕಳೆದ ಐದು ವರ್ಷಗಳ ಹಿಂದೆ ಆರಂಭವಾದ ರಸ್ತೆ ಕಾಮಗಾರಿಯ ವೇಳೆ ಮಳೆಗಾಲದ ನೀರು ಸರಾಗವಾಗಿ ಹರಿಯಲು ಅಗತ್ಯವಾದ ಚರಂಡಿ, ಕಲ್ವರ್ಟ್ ಹಾಗೂ ನೀರು ಹರಿವಿನ ವ್ಯವಸ್ಥೆಗಳನ್ನು ಸಮರ್ಪಕವಾಗಿ ರೂಪಿಸದೆ ಸುಮಾರು 120 ಅಡಿಗೂ ಹೆಚ್ಚು ಎತ್ತರದಲ್ಲಿ ಮಣ್ಣು ತುಂಬಲಾಗಿದೆ. ಇದರ ಪರಿಣಾಮ ಮಳೆಗಾಲದಲ್ಲಿ ನೀರು ಹಾಗೂ ಮಣ್ಣು ಕೃಷಿಭೂಮಿಗಳಿಗೆ ಹರಿದು ಸುಮಾರು 20 ಎಕರೆಗೂ ಅಧಿಕ ಕಾಫಿ, ಅಡಿಕೆ ಹಾಗೂ ಇತರೆ ಬೆಳೆಗಳ ತೋಟಗಳು ಸಂಪೂರ್ಣವಾಗಿ ನಾಶವಾಗಿವೆ. ಇದರಿಂದ ಮುಂದಿನ 30 ರಿಂದ 35 ವರ್ಷಗಳವರೆಗೆ ಕೃಷಿ ಚಟುವಟಿಕೆ ನಡೆಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು. ಸಂತ್ರಸ್ತರು ಈ ಬಗ್ಗೆ ಹಲವು ಬಾರಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಜಿಲ್ಲಾಡಳಿತಕ್ಕೆ ಲಿಖಿತ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರಕಿಲ್ಲ. ಅಲ್ಲದೆ, ಮೂಲ ಡಿಪಿಆರ್‌ (ವಿಸ್ತೃತ ಯೋಜನಾ ವರದಿ) ಪ್ರಕಾರ ಕಾಮಗಾರಿ ನಡೆಸದೇ ಅದರ ಸ್ವರೂಪವನ್ನು ಬದಲಾಯಿಸಿ ಬಲವಂತವಾಗಿ ಕಾಮಗಾರಿ ಮುಂದುವರಿಸಲಾಗುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಹಾನಿಗೊಳಗಾದ ಭೂಮಿ ಹಾಗೂ ಬೆಳೆಗಳಿಗೆ ವೈಜ್ಞಾನಿಕವಾಗಿ ಮೌಲ್ಯಮಾಪನ ಮಾಡಿ ಪರಿಹಾರ ನಿಗದಿಪಡಿಸಬೇಕು. ಅಲ್ಲಿಯವರೆಗೂ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದರು. ಸಂತ್ರಸ್ತೆ ಪ್ರಿಯಾಂಕ ಮಾತನಾಡಿ, ನಾವು ನಾಲ್ಕು ದಶಕಗಳಿಂದ ಬೆಳೆಸಿಕೊಂಡು ಬಂದ ಕಾಫಿ ತೋಟಗಳು ಸಂಪೂರ್ಣವಾಗಿ ಹಾಳಾಗಿವೆ. ಹಲವು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಸ್ಪಂದನೆ ಇಲ್ಲ. ಪ್ರಶ್ನೆ ಮಾಡಿದವರ ಮೇಲೆಯೇ ದೂರು ದಾಖಲಿಸುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು.

ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ ಹಾಗೂ ಡಿವೈಎಸ್ಪಿ ಮಾಲತೇಶ್ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚಿಸಿದರು. ಸಂತ್ರಸ್ತರ ಬೇಡಿಕೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು. ಈ ತಿಂಗಳ 12ರಂದು ಜಿಲ್ಲಾಧಿಕಾರಿ ಸಮ್ಮುಖದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಂತ್ರಸ್ತರೊಂದಿಗೆ ತ್ರಿಪಕ್ಷೀಯ ಸಭೆ ನಡೆಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂಬ ಭರವಸೆಯ ಮೇಲೆ ಗ್ರಾಮಸ್ಥರು ಹಾಗೂ ರೈತರು ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆದರು.

ಸಭೆಯಲ್ಲಿ ಸ್ಪಷ್ಟ ನಿರ್ಧಾರ ಹಾಗೂ ಪರಿಹಾರ ಘೋಷಣೆಯಾಗದಿದ್ದರೆ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಗ್ರಾಮಸ್ಥರು ತಿಳಿಸಿದರು.* ಬಾಕ್ಸ್ ಐಟಂ:

ಬೆಳಿಗ್ಗೆ ಮನವೊಲಿಕೆ ಸಂಜೆ ನಿಷೇಧಾಜ್ಞೆ

ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ದೋಣಿಗಲ್ ಪ್ರದೇಶದಲ್ಲಿ ರಸ್ತೆ ಕಾಮಗಾರಿ ಪ್ರಾರಂಭಗೊಂಡಿದ್ದು, ಕಾಮಗಾರಿ ಸುಗಮವಾಗಿ ನಡೆಯುವ ಹಿನ್ನೆಲೆ ಫೆಬ್ರವರಿ 9ರಿಂದ ಮಾರ್ಚ್ 7ರವರೆಗೆ ದೋಣಿಗಲ್ ರಸ್ತೆಯಿಂದ ಕೆಸಗನಹಳ್ಳಿ ರಸ್ತೆಯವರೆಗೆ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.ಈ ಅವಧಿಯಲ್ಲಿ 5 ಜನರಿಗಿಂತ ಹೆಚ್ಚು ಗುಂಪಾಗಿ ಸೇರುವುದು, ಆಯುಧಗಳು ಹಾಗೂ ಮಾರಕಾಸ್ತ್ರಗಳನ್ನು ಹೊತ್ತುಕೊಂಡು ಓಡಾಡುವುದು, ಘೋಷಣೆ ಕೂಗಿ ಅಥವಾ ಪ್ರಚಾರ ಸಾಮಗ್ರಿಗಳೊಂದಿಗೆ ಪ್ರತಿಭಟನೆ ನಡೆಸುವುದು ನಿಷಿದ್ಧ. ಕಾಮಗಾರಿ ಸಿಬ್ಬಂದಿಯನ್ನು ಹೊರತುಪಡಿಸಿ ಇತರರು ನಿಷೇಧಿತ ಪ್ರದೇಶ ಪ್ರವೇಶಿಸಬಾರದು. ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತೋಟದ ಕಾರ್ಮಿಕರ ಮೇಲೆ ಚಿರತೆ ದಾಳಿ
ಕನ್ನಡ ಭಾಷಾ ನೀತಿಯ ಅನುಷ್ಠಾನಕ್ಕೆ ವಿಶೇಷ ಕ್ರಮ: ಡಿಸಿ ಪ್ರಭುಲಿಂಗ ಕವಳಿಕಟ್ಟಿ