ರಾಜ್ಯದಲ್ಲಿ ಮತ್ತೆ ಭುಗಿಲೆದ್ದ ಹಿಜಾಬ್‌ ವಿವಾದ

KannadaprabhaNewsNetwork |  
Published : Dec 05, 2025, 12:45 AM IST
ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು. | Kannada Prabha

ಸಾರಾಂಶ

ರಾಜ್ಯದಲ್ಲಿ ಮತ್ತೆ ಹಿಜಾಬ್‌ ವಿವಾದ ಭುಗಿಲೆದ್ದಿದೆ. ಹಾವೇರಿ ಜಿಲ್ಲೆ ಅಕ್ಕಿಆಲೂರಿನ ಸಿ.ಜಿ.ಬೆಲ್ಲದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೆಲ ವಿದ್ಯಾರ್ಥಿನಿಯರು ಬುರ್ಖಾ ಧರಿಸಿ ಬಂದಿದ್ದನ್ನು ಖಂಡಿಸಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದು, ವಿವಾದಕ್ಕೆ ಕಾರಣವಾಗಿದೆ.

ಕನ್ನಡಪ್ರಭ ವಾರ್ತೆ ಹಾನಗಲ್ಲ

ರಾಜ್ಯದಲ್ಲಿ ಮತ್ತೆ ಹಿಜಾಬ್‌ ವಿವಾದ ಭುಗಿಲೆದ್ದಿದೆ. ಹಾವೇರಿ ಜಿಲ್ಲೆ ಅಕ್ಕಿಆಲೂರಿನ ಸಿ.ಜಿ.ಬೆಲ್ಲದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೆಲ ವಿದ್ಯಾರ್ಥಿನಿಯರು ಬುರ್ಖಾ ಧರಿಸಿ ಬಂದಿದ್ದನ್ನು ಖಂಡಿಸಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದು, ವಿವಾದಕ್ಕೆ ಕಾರಣವಾಗಿದೆ. ಬಳಿಕ, ಕಾಲೇಜಿನ ಪ್ರಾಚಾರ್ಯ ಡಾ। ವೀರೇಶ ಕುಮ್ಮೂರ ಅವರು ವಿದ್ಯಾರ್ಥಿಗಳ ಮನವೊಲಿಸಿದ್ದು, ಕಾಲೇಜಿನ ಸಮವಸ್ತ್ರ ಪಾಲನೆಗೆ ವಿದ್ಯಾರ್ಥಿಗಳು ಒಪ್ಪಿದ್ದಾರೆ. ಆ ಮೂಲಕ ವಿವಾದ ಸುಖಾಂತ್ಯಗೊಂಡಿದೆ.

ಹಾನಗಲ್ಲ ತಾಲೂಕಿನ ಅಕ್ಕಿಆಲೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಮಧ್ಯಾಹ್ನ 12.30ರ ವೇಳೆಗೆ ಕೆಲ ವಿದ್ಯಾರ್ಥಿನಿಯರು ಬುರ್ಕಾ ಧರಿಸಿ ಬಂದಿದ್ದರು. ಇದರಿಂದ ಆಕ್ರೋಶಗೊಂಡ ಕೆಲ ವಿದ್ಯಾರ್ಥಿಗಳು, ಕೇಸರಿ ಶಾಲು ಧರಿಸಿ ಬಂದರು. ಇದು ಕಾಲೇಜಿನಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರ ನಡುವಿನ ಚರ್ಚೆಗೆ ಕಾರಣವಾಯಿತು.

ವಿಷಯ ತಿಳಿದ ಪ್ರಾಚಾರ್ಯ ಡಾ.ವೀರೇಶ ಕುಮ್ಮೂರ, ಬುರ್ಕಾ ಧರಿಸಿದ ವಿದ್ಯಾರ್ಥಿನಿಯರು ಹಾಗೂ ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳನ್ನು ಕರೆದು, ಬುದ್ಧಿ ಹೇಳಿದರು. ಕಾಲೇಜಿನ ಆವರಣದಲ್ಲಿ ಕಾಲೇಜಿನ ಸಮವಸ್ತ್ರವನ್ನೇ ಧರಿಸಬೇಕು. ಅನಗತ್ಯವಾಗಿ ಗೊಂದಲ ಸೃಷ್ಟಿಗೆ ಅವಕಾಶ ಮಾಡಿಕೊಡಬೇಡಿ. ಕಾಲೇಜಿನ ಶಿಸ್ತು ಉಲ್ಲಂಘನೆ ಸರಿ ಅಲ್ಲ ಎಂದು ಮನವರಿಕೆ ಮಾಡಿಕೊಟ್ಟರು. ಅವರ ಮಾತಿಗೆ ಎಲ್ಲರೂ ಸಮ್ಮತಿ ಸೂಚಿಸಿದ್ದು, ವಿವಾದ ಸುಖಾಂತ್ಯಗೊಂಡಿದೆ.

ಇದೇ ಕಾಲೇಜಿನಲ್ಲಿ ಒಂದು ತಿಂಗಳ ಹಿಂದೆ ಇಂತಹುದೇ ಘಟನೆ ನಡೆದಿತ್ತು. ಆಗಲೂ ಪ್ರಾಚಾರ್ಯರು, ಉಪನ್ಯಾಸಕರು ವಿದ್ಯಾರ್ಥಿಗಳಿಗೆ ತಿಳುವಳಿಕೆ ಹೇಳಿದ್ದರು ಎನ್ನಲಾಗಿದೆ. ಆದಾಗ್ಯೂ, ಮತ್ತೆ ಗುರುವಾರ ಈ ಘಟನೆ ಮರುಕಳಿಸಿದೆ. ಈ ಮಧ್ಯೆ, ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಕ್ರಮ ಜರುಗಿಸಲು ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕ ಸಿಬ್ಬಂದಿ ನಿರ್ಧರಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡೆಲ್ಲಿಯಲ್ಲಿ ಬಿಜೆಪಿ ರೆಬಲ್ಸ್‌ ಟೀಂ:ಬಿಎಲ್‌ಎಸ್‌ ಜತೆ ರಮೇಶ ಚರ್ಚೆ
ಮಳೆ, ಚಳಿ ಪರಿಣಾಮ: ಸೊಪ್ಪು, ತರಕಾರಿ ಬೆಲೆ ಏರಿಕೆ