ಕನ್ನಡಪ್ರಭ ವಾರ್ತೆ, ಚಾಮರಾಜನಗರ
ನಗರದ ಚಾಮರಾಜೇಶ್ವರ ಉದ್ಯಾನವನ ಮುಂಭಾಗದ ಬಿಜೆಪಿ ಮಂಡಲದ ಅಧ್ಯಕ್ಷ ಕಾಡಹಳ್ಳಿ ಕುಮಾರ್ ಹಾಗೂ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸೂರ್ಯಬಾಲರಾಜ್ ನೇತೃತ್ವದಲ್ಲಿ ಸಮಾವೇಶಗೊಂಡು ಬಿಜೆಪಿ ಬಾವುಟ ಹಿಡಿದು ಮೆರವಣಿಗೆ ನಡೆಸಿ, ಭುವನೇಶ್ವರಿ ವೃತ್ತದಲ್ಲಿ ಬಿಜೆಪಿ, ಶಿವಸೇನಾ, ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಮಹಾರಾಷ್ಟ್ರ ಸಿಎಂ ಪರ ಘೋಷಣೆಗಳನ್ನು ಕೂಗಿದರು. ನಂತರ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಚುಡಾ ಮಾಜಿ ಅಧ್ಯಕ್ಷ ಕುಲಗಾಣ ಶಾಂತಮೂರ್ತಿ ಮಾತನಾಡಿ, ಸುಭದ್ರ ಹಾಗೂ ಸದೃಢ ಭಾರತ ನಿರ್ಮಾಣ ಮಾಡುವಲ್ಲಿ ಬಿಜೆಪಿ ಹಾಗೂ ಶಿವಸೇನಾ ನೇತೃತ್ವದ ಮೈತ್ರಿಕೂಟದಿಂದ ಮಾತ್ರ ಸಾಧ್ಯ ಎಂಬುದನ್ನು ಅರಿತಿರುವ ಮಹಾರಾಷ್ಟ್ರದ ಪ್ರಜ್ಞಾವಂತ ಮತದಾರರು ಮತ್ತೋಮ್ಮೆ ಮಹಾನಗರ ಪಾಲಿಕೆಯಲ್ಲಿ ಸಾಬೀತು ಮಾಡಿದ್ದಾರೆ. ಮಹಾನಗರ ಪಾಲಿಕೆ ಅಭಿವೃದ್ಧಿ ಮತ್ತು ಮುಂಬೈ ನಗರವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಬಿಜೆಪಿ, ಶಿವಸೇನಾ ಮೈತ್ರಿಕೂಟಕ್ಕೆ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ಇದೊಂದು ಐತಿಹಾಸಿಕ ಗೆಲುವಾಗಿದ್ದು, ಮುಂದಿನ ಚುನಾವಣೆಗಳಿಗೆ ದಿಕ್ಸೂಚಿಯಾಗಿದೆ ಎಂದರು.ಮಹಾರಾಷ್ಟ್ರ ಜನರರಿಗೆ ಕೃತಜ್ಞತೆ ಹಾಗೂ ಅಲ್ಲಿನ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರಿಗೆ ಚಾಮರಾಜಗನರ ಜಿಲ್ಲೆಯ ಜನತೆ ಪರವಾಗಿ ಹಾಗೂ ಪಕ್ಷದ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಶಾಂತಮೂರ್ತಿ ತಿಳಿಸಿದರು.