ಐತಿಹಾಸಿಕ, ಪೌರಾಣಿಕ ಸ್ಮಾರಕಗಳಿಗೆ ಬೇಕಿದೆ ಮೂಲಸೌಕರ್ಯ

KannadaprabhaNewsNetwork |  
Published : Jun 16, 2025, 01:17 AM IST
ಸಸಸ | Kannada Prabha

ಸಾರಾಂಶ

ದೇಶದ ಮೂಲೆ ಮೂಲೆಯಿಂದ ಹನುಮಂತನ ಭಕ್ತರು ಹಾಗೂ ವಿದೇಶಿಗಳಿಂದಲೂ ಅಂಜನಾದ್ರಿ ಬೆಟ್ಟಕ್ಕೆ ಪ್ರತಿ ವರ್ಷ ಲಕ್ಷಾಂತರ ಸಂಖ್ಯೆಯಲ್ಲಿ ಪ್ರವಾಸಿಗರು, ಭಕ್ತರು ಆಗಮಿಸುತ್ತಾರೆ. ದುರಂತ ಎಂದರೆ ಇಲ್ಲಿ ಕನಿಷ್ಠ ಸೌಲಭ್ಯವೂ ಇಲ್ಲದಂತಾಗಿದೆ.

ಸೋಮರಡ್ಡಿ ಅಳವಂಡಿ ಕೊಪ್ಪಳ

ಜಿಲ್ಲೆಯಲ್ಲಿರುವ ಪೌರಾಣಿಕ, ಐತಿಹಾಸಿಕ ಪ್ರವಾಸಿ ತಾಣಗಳನ್ನು ಮನದುಂಬಿ ಕೊಂಡಾಡುವ ಪ್ರವಾಸಿಗರು ಕೊಪ್ಪಳ ಜಿಲ್ಲೆಯನ್ನು ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಅವುಗಳ ಸಂರಕ್ಷಣೆಯ ಕುರಿತು ಶಪಿಸುವಂತಾಗಿದೆ.

ಹೌದು, ದೇಶ, ವಿದೇಶ ಪ್ರವಾಸಿಗರನ್ನು ಕೈಬಿಸಿ ಕರೆಯುವ ಐತಿಹಾಸಿಕ, ಪೌರಾಣಿಕ ಸ್ಮಾರಕಗಳನ್ನು ರಕ್ಷಣೆ ಮಾಡುವುದು ಸೇರಿದಂತೆ ಬರುವ ಪ್ರವಾಸಿಗರಿಗೆ ಕೊಪ್ಪಳ ಜಿಲ್ಲೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇರಿಸು ಮುರಸನ್ನುಂಟು ಮಾಡುತ್ತಿದೆ.

ದೇಶದ ಮೂಲೆ ಮೂಲೆಯಿಂದ ಹನುಮಂತನ ಭಕ್ತರು ಹಾಗೂ ವಿದೇಶಿಗಳಿಂದಲೂ ಅಂಜನಾದ್ರಿ ಬೆಟ್ಟಕ್ಕೆ ಪ್ರತಿ ವರ್ಷ ಲಕ್ಷಾಂತರ ಸಂಖ್ಯೆಯಲ್ಲಿ ಪ್ರವಾಸಿಗರು, ಭಕ್ತರು ಆಗಮಿಸುತ್ತಾರೆ. ದುರಂತ ಎಂದರೆ ಇಲ್ಲಿ ಕನಿಷ್ಠ ಸೌಲಭ್ಯವೂ ಇಲ್ಲದಂತಾಗಿದೆ.

ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬಜೆಟ್ ನಲ್ಲಿ ಘೋಷಣೆಯಾಗುವ ಅನುದಾನ ನಂತರ ಕಾರ್ಯರೂಪಕ್ಕೆ ಬರುವುದೇ ಅಪರೂಪ ಎನ್ನುವಂತಾಗಿದೆ.ಈಗಾಗಲೇ ಘೋಷಣೆಯಾಗಿರುವ ₹200 ಕೋಟಿ ಪೈಕಿ ಕೇವಲ ₹21 ಕೋಟಿ ವೆಚ್ಚದ ಕಾಮಗಾರಿ ಕುಂಟುತ್ತಾ, ತೇವಳುತ್ತಾ ಸಾಗುತ್ತಿದೆ. ಬರುವ ಪ್ರವಾಸಿಗರು ಶೌಚಕ್ಕೆ ಹೋಗಲು ಸೂಕ್ತ ವ್ಯವಸ್ಥೆ ಇಲ್ಲಿಲ್ಲ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಇಲ್ಲ.

ಅಂಜನಾದ್ರಿ, ಆನೆಗೊಂದಿ ಭಾಗದಲ್ಲಿ ಪೌರಾಣಿಕ ಸ್ಮಾರಕಗಳು ಸಾಕಷ್ಟು ಸಂಖ್ಯೆಯಲ್ಲಿದ್ದು, ಪಂಪಾ ಸರೋವರ, ಮಹಾಲಕ್ಷ್ಮಿಗುಡಿ, ಶ್ರೀರಾಮನಿಗಾಗಿ ಶಬರಿ ಕಾಯ್ದಿರುವ ಸ್ಥಳ ಅಷ್ಟೇ ಅಲ್ಲ, ವಾಲಿ, ಸುಗ್ರೀವರು ಕಾದಾಡಿದ ಸ್ಮಾರಕ ಸೇರಿದಂತೆ ಹತ್ತು ಹಲವು ಸ್ಮಾರಕಗಳು ಇದ್ದು, ಇವುಗಳ ಸಂರಕ್ಷಣೆ ಮಾಡಬೇಕಾಗಿದೆ.

ಅಂಜನಾದ್ರಿಗೆ ರೋಪ್ ವೇ ನಿರ್ಮಾಣ ಮಾಡಬೇಕು ಎನ್ನುವ ಬಹು ವರ್ಷಗಳ ಬೇಡಿಕೆ ಕಾಗದದಲ್ಲಿಯೇ ಕೊಳೆಯುತ್ತಿದೆ. ಇದೆಲ್ಲಕ್ಕಿಂತ ಮಿಗಿಲಾಗಿ ಪ್ರವಾಸೋದ್ಯಮ ಅಭಿವೃದ್ಧಿ ಮಾಡುವುದಕ್ಕಾಗಿ ಅಗತ್ಯ ವಸತಿ ವ್ಯವಸ್ಥೆ, ಶಾಪಿಂಗ್ ಕಾಂಪ್ಲೆಕ್ಸ್ ಸೇರಿದಂತೆ ಮೊದಲ ಅಗತ್ಯ ಪೂರೈಕೆ ಮಾಡಬೇಕಾಗಿದೆ. ಪಕ್ಕದಲ್ಲಿಯೇ ಇರುವ ಹಂಪಿಗೆ ಬರುವ ಪ್ರವಾಸಿಗರನ್ನು ಸಹ ಕೊಪ್ಪಳ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಸೆಳೆಯುವುದಕ್ಕಾಗಿ ಸೂಕ್ತ ಪ್ರಚಾರ ಮತ್ತು ಮೂಲಸೌಕರ್ಯ ಒದಗಿಸಬೇಕಾಗಿದೆ.

ಮೊರೇರ್ ತಟ್ಟೆಗಳು: ತಾಲೂಕಿನ ಚಿಕ್ಕಬೆಣಕಲ್ ಗ್ರಾಮದ ಬಳಿ ಬೆಟ್ಟದಲ್ಲಿ ಸುಮಾರು ಮೂರುವರೆ ಸಾವಿರ ವರ್ಷಗಳಷ್ಟು ಹಳೆಯದಾದ ಚರಿತ್ರೆ ಇಂದಿಗೂ ಹಿಡಿದಿಟ್ಟುಕೊಂಡ ಮೊರೇರ ತಟ್ಟೆಗಳು ವಿಶ್ವ ಪ್ರಸಿದ್ಧಿಯಾಗಿವೆ.ಅಚ್ಚರಿ ಎಂದರೇ ಇಲ್ಲಿಗೆ ಹೋಗುವುದಕ್ಕೆ ಸೂಕ್ತ ರಸ್ತೆ ಇಲ್ಲ, ಮಾರ್ಗದ ಮಾಹಿತಿ ಇಲ್ಲ. ಇವುಗಳ ಸಂರಕ್ಷಣೆಯೂ ಇಲ್ಲದಿರುವುದರಿಂದ ಪ್ರವಾಸಿಗರು ಆಗಮಿಸಲು ಸಾಧ್ಯವಾಗುತ್ತಿಲ್ಲ.

ಕನ್ನಡಪ್ರಭ ಮತ್ತು ಸುವರ್ಣ ನ್ಯೂಸ್ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ರಾಜ್ಯ ಏಳು ಅದ್ಭುತಗಳನ್ನು ಆಯ್ಕೆ ಮಾಡಿದ್ದು, ಅದರಲ್ಲಿ ಹಿರೇಬೆಣಕಲ್ ಸಹ ಒಂದು. ಹೀಗೆ, ಏಳು ಅದ್ಭುತಗಳಲ್ಲೊಂದಾಗಿರುವ ಹಿರೇಬೆಣಕಲ್ ಮೊರೇರ ತಟ್ಟೆಗಳ ಸ್ಥಳಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಳವಾಗುತ್ತಲೇ ಇದ್ದು, ಅಭಿವೃದ್ಧಿಯ ಅಗತ್ಯವಿದೆ.

ಹುಲಿಗೆಮ್ಮ ದೇವಸ್ಥಾನಕ್ಕಂತೂ ಸಹಸ್ರಾರು ಭಕ್ತರು ನಿತ್ಯ ಆಗಮಿಸುತ್ತಾರೆ. ಇಲ್ಲಿಯೂ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಕುಮಾರರಾಮನ ಗುಡ್ಡದಲ್ಲಿ ಜಟ್ಟಂಗಿ ರಾಮೇಶ್ವರ ದೇವಸ್ಥಾನವೂ ಇದ್ದು, ಸಂರಕ್ಷಣೆ ಇಲ್ಲದಂತಾಗಿದೆ.

ದೇವಾಲಯಗಳ ಚಕ್ರವರ್ತಿ ಇಟಗಿ ಮಹಾದೇವ ದೇವಾಲಯ, ಕನಕಗಿರಿಯ ಶ್ರೀಕನಕಾಚಲಪತಿ ದೇವಸ್ಥಾನ, ಕೊಪ್ಪಳದ ಅಶೋಕ ಶಿಲಾಶಾಸನ, ಮಳೇಮಲ್ಲೇಶ್ವರ ದೇವಸ್ಥಾನ, ಕುಷ್ಟಗಿ ತಾಲೂಕಿನ ಕೋಟಿಲಿಂಗಗಳ ಪುರ ದೇವಸ್ಥಾನ, ಸೋಮೇಶ್ವರ ದೇವಸ್ಥಾನ ಹೀಗೆ ಐತಿಹಾಸಿಕ ಪ್ರವಾಸಿ ತಾಣಗಳ ಸಂಖ್ಯೆ ಅಪಾರವಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಅಗತ್ಯವಿದೆ.

ಜಿಲ್ಲೆಯಲ್ಲಿನ ಪ್ರವಾಸಿ ತಾಣಗಳ ಸಂರಕ್ಷಣೆ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿ ಪರಿಶೀಲನೆ ನಡೆಸಲು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಎರಡು ದಿನಗಳ ಕಾಲ ಭೇಟಿ ನೀಡಲಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆ ಡಿಡಿ ನಾಗರಾಜ ಹೇಳಿದರು.ಕೊಪ್ಪಳ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದ್ದು, ಇದಕ್ಕಾಗಿ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಸಚಿವರು ಈಗ ಭೇಟಿ ನೀಡುತ್ತಿರುವುದರಿಂದ ಹೆಚ್ಚಿನ ಮಹತ್ವ ಬಂದಿದೆ ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಮತಗಿಯಲ್ಲಿ ನಿವೃತ್ತ ಯೋಧ ಲಕ್ಷ್ಮಣಗೆ ಭವ್ಯ ಸ್ವಾಗತ
ಉತ್ತರದ ಅಭಿವೃದ್ಧಿಗೆ ಪ್ರತ್ಯೇಕ ರಾಜ್ಯ ಅಗತ್ಯ: ಉ.ಕ.ಹೋರಾಟ ಸಮಿತಿ