ಗದಗ: ಡಿ.ಕೆ. ಶಿವಕುಮಾರ ಮುಂದಿನ ಮುಖ್ಯಮಂತ್ರಿ ಆಗುತ್ತಾರೆ, ಅವರ ಸಚಿವ ಸಂಪುಟದಲ್ಲಿ ತಮ್ಮ ಮಂತ್ರಿ ಸ್ಥಾನ ಖಚಿತ ಪಡಿಸಿಕೊಳ್ಳುವುದಕ್ಕಾಗಿ ಎಚ್.ಕೆ. ಪಾಟೀಲ ಅವರು ಈಗ ಪತ್ರ ರಾಜಕಾರಣ ಪ್ರಾರಂಭ ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಆರೋಪಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ವಿಚಾರವಾಗಿ ಸಚಿವ ಎಚ್.ಕೆ. ಪಾಟೀಲ ಅವರು ಮುಖ್ಯಮಂತ್ರಿಗೆ ಬರೆದ ಪತ್ರದ ವಿಚಾರವಾಗಿ ಕುಮಾರಸ್ವಾಮಿ ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸಿಲ್ಲ. ಪತ್ರ ಬರೆದ ಉದ್ದೇಶವನ್ನೂ ಸ್ಪಷ್ಟಪಡಿಸಿಲ್ಲ. ಅದನ್ನು ಬಿಟ್ಟು ಬೇರೆ ಎಲ್ಲವನ್ನೂ ಮಾತನಾಡಿದ್ದಾರೆ. ಸಚಿವ ಎಚ್.ಕೆ. ಪಾಟೀಲ ಅವರಿಗೆ ಅಕ್ರಮ ಗಣಿಗಾರಿಕೆ ಬಗ್ಗೆ ನಿಜವಾಗಿಯೂ ಕಳಕಳಿ ಇದ್ದಿದ್ದರೆ, ಅಧಿಕಾರಕ್ಕೆ ಬಂದ ತಕ್ಷಣವೇ ಕ್ರಮ ಕೈಗೊಳ್ಳಬಹುದಿತ್ತು. ಆವಾಗಲೇ ಪತ್ರ ಬರೆಯಬಹುದಿತ್ತು, ಎರಡು ವರ್ಷ ಮೌನವಾಗಿದ್ದು, ಈಗ ಪತ್ರ ಬರೆಯುತ್ತಿರುವ ಉದ್ದೇಶವಾದರೂ ಏನು ಎಂದು ಪ್ರಶ್ನಿಸಿದರು.ರಾಜ್ಯದ ಸಂಪತ್ತು ರಾಜ್ಯಕ್ಕೆ ಬರಬೇಕು ಎಂದು ತಿಳಿಸಿದ್ದಾರೆ. ಹಾಗಾದರೆ ಈ ಹಿಂದೆ ಇವರ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಇದು ಎಚ್.ಕೆ. ಪಾಟೀಲ ಅವರಿಗೆ ಗೊತ್ತಿರಲಿಲ್ಲವೇ? ಆದರೆ ಮುಖ್ಯಮಂತ್ರಿ ಬದಲಾವಣೆ ಸಂದರ್ಭದಲ್ಲೇ ಈ ಪತ್ರ ಬರೆದಿರುವುದರ ಹಿಂದೆ ರಾಜಕೀಯ ಉದ್ದೇಶ ಅಡಗಿರುವುದು ಮಾತ್ರ ಸ್ಪಷ್ಟವಾಗಿ ಗೋಚರವಾಗುತ್ತಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಎಂ.ಎಸ್. ಪರ್ತಗೌಡ್ರ, ಬಸವರಾಜ ಅಪ್ಪಣ್ಣವರ, ರಮೇಶ ಹುಣಸಿಮರದ, ಸಂತೋಷ ಪಾಟೀಲ, ಅಭಿಷೇಕ ಕಂಬಳಿ, ಪ್ರಫುಲ್ ಪುಣೇಕರ್, ಹರೀಶ ಹಡಗಲಿಮಠ ಹಾಜರಿದ್ದರು.