ಸುಳ್ಳುಸುದ್ದಿ, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾವಹಿಸಿ

KannadaprabhaNewsNetwork |  
Published : Nov 21, 2023, 12:45 AM IST
ಬೆಳಗಾವಿ ಪೊಲೀಸ್‌ ಆಯುಕ್ತರ ಕಚೇರಿಗೆ ಗೃಹಸಚಿವ ಜಿ.ಪರಮೇಶ್ವರ ಭೇಟಿ ನೀಡಿ ಪರಿಶೀಲಿಸಿದರು. | Kannada Prabha

ಸಾರಾಂಶ

ಆಕ್ಷೇಪಾರ್ಹ ಮಾಹಿತಿ, ಸುಳ್ಳುಸುದ್ದಿಗಳು ಬಂದಾಗ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂಬುವುದರ ಬಗ್ಗೆ ಮಾಹಿತಿ ಪಡೆದುಕೊಂಡು ಸೂಕ್ತ ತಾಂತ್ರಿಕ ತರಬೇತಿ ಹೊಂದಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸಲು ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಸಮಾಜದಲ್ಲಿ ಅಶಾಂತಿ ಮೂಡಿಸುವಂತಹ ಸುಳ್ಳುಸುದ್ದಿಗಳು, ಪ್ರಚೋದನಾಕಾರಿ ಹೇಳಿಕೆ ಅಥವಾ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಆಗಿರುವುದು ಕಂಡುಬಂದರೆ ತಕ್ಷಣವೇ ಕಾರ್ಯಪ್ರವೃತ್ತರಾಗಿ ಸೂಕ್ತಕ್ರಮ ತೆಗೆದುಕೊಳ್ಳಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಪೊಲೀಸ್ ಆಯುಕ್ತಾಲಯಕ್ಕೆ ಸೋಮವಾರ ಭೇಟಿ ನೀಡಿದ ಅವರು, ಸಾಮಾಜಿಕ ಜಾಲತಾಣ ನಿಗಾ ಘಟಕ, ನಿಯಂತ್ರಣ ಕೊಠಡಿಗಳನ್ನು ಖುದ್ದಾಗಿ ವೀಕ್ಷಿಸಿ ಸಲಹೆ-ಸೂಚನೆಗಳನ್ನು ನೀಡಿದರು.

ಸಾಮಾಜಿಕ ಜಾಲತಾಣಗಳ ನಿಗಾ ಘಟಕಕ್ಕೆ ಭೇಟಿ ನೀಡಿದ ಅವರು, ಆಕ್ಷೇಪಾರ್ಹ ಮಾಹಿತಿ, ಸುಳ್ಳುಸುದ್ದಿಗಳು ಬಂದಾಗ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂಬುವುದರ ಬಗ್ಗೆ ಮಾಹಿತಿ ಪಡೆದುಕೊಂಡು ಸೂಕ್ತ ತಾಂತ್ರಿಕ ತರಬೇತಿ ಹೊಂದಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸಲು ಸೂಚನೆ ನೀಡಿದರು.

ಇದಾದ ಬಳಿಕ ನಗರ ನಿಯಂತ್ರಣ ಕೊಠಡಿಯನ್ನು ಹಾಗೂ ವೈರ್‌ಲೆಸ್‌ ವಿಭಾಗದ ಕಾರ್ಯಚಟುವಟಿಕೆಗಳನ್ನು ಹಾಗೂ ದಾಖಲೆ ಕೊಠಡಿಯನ್ನು ಖುದ್ದಾಗಿ ವೀಕ್ಷಿಸಿದರು. ನಿಯಂತ್ರಣ ಕೊಠಡಿಗೆ ಬರುವ ಕರೆಗಳು ಹಾಗೂ ಮಾಹಿತಿಯ ಲಾಗ್ ಪುಸ್ತಕವನ್ನು ಪರಿಶೀಲಿಸಿದರಲ್ಲದೇ ಪ್ರತಿಯೊಂದು ದಾಖಲೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

ಸಂಚಾರ ನಿಯಮ ಉಲ್ಲಂಘನೆ ಕ್ರಮಕ್ಕೆ ನಿರ್ದೇಶನ:

ಸಂಚಾರ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಡ ಕಟ್ಟಲು 7 ದಿನಗಳ ಕಾಲಾವಕಾಶ ನೀಡಬೇಕು. ಇದಾದ ಬಳಿಕ ನ್ಯಾಯಾಲಯದಿಂದ ಸಮನ್ಸ್ ಹೋಗಬೇಕು, ದಂಡ ಕಟ್ಟದಿದ್ದರೇ ಅಥವಾ ನ್ಯಾಯಾಲಯಕ್ಕೆ ಹಾಜರಾಗದಿದ್ದರೇ ವಾಹನ ಸೀಜ್ ಮಾಡಬೇಕು ಎಂದು ನಿರ್ದೇಶನ ನೀಡಿದರು.

ಸಂಚಾರ ನಿಯಮ ಉಲ್ಲಂಘನೆ ದಂಡ ವಿಧಿಸುವ ವಿಧಾನ, ಚಲನ್ ಜನರೇಟ್ ಮಾಡುವ ವಿಧಾನವನ್ನು ಪರಿಶೀಲಿಸಿದರು.

ಸಿಸಿಟಿವಿ ದೃಶ್ಯಾವಳಿ ವೀಕ್ಷಣೆ:

ಬೆಳಗಾವಿ ನಗರದ ವಿವಿಧ ವೃತ್ತಗಳು ಹಾಗೂ ರಸ್ತೆಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಗೃಹಸಚಿವ ಜಿ.ಪರಮೇಶ್ಚರ ವೀಕ್ಷಿಸಿದರು.

ಸಿಸಿಟಿವಿ ಮೇಲೆ ನಿಗಾವಹಿಸಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಪ್ರತಿಯೊಂದು ಕ್ಯಾಮೆರಾ ಅಳವಡಿಸಿರುವ ವೃತ್ತ ಮತ್ತು ರಸ್ತೆ ಕುರಿತು ಸಂಪೂರ್ಣ ಮಾಹಿತಿ ಇರಬೇಕು.

ಇದಲ್ಲದೇ ಸ್ಮಾರ್ಟ್ ಸಿಟಿ ಯೋಜನೆಯಡಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳ ಮೇಲೆ ಕೂಡ ನಿಗಾವಹಿಸಬೇಕು ಎಂದು ಸೂಚನೆ ನೀಡಿದರು.

ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ ಅವರು, ವಿವಿಧ ಘಟಕಗಳ ಕಾರ್ಯನಿರ್ವಹಣೆ ಕುರಿತು ವಿವರಿಸಿದರು. ಸಾಮಾಜಿಕ ಜಾಲತಾಣ ನಿಗಾ ಘಟಕವು ಕ್ರಿಯಾಶೀಲವಾಗಿದ್ದು, ಪ್ರತಿಯೊಂದು ಚಟುವಟಿಕೆಗಳ ಮೇಲೆ ನಿಗಾವಹಿಸಲಾಗಿದೆ. ಇತ್ತೀಚೆಗೆ ಪ್ರಕರಣಗಳನ್ನು ಕೂಡ ದಾಖಲಿಸಲಾಗಿದೆ ಎಂದರು.

ಇದಲ್ಲದೇ ಅಧಿವೇಶನ ಸಂದರ್ಭದಲ್ಲೂ ಯಾವುದೇ ರೀತಿಯ ಅಹಿತಕರ ಘಟನೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ತೀವ್ರ ನಿಗಾ ವಹಿಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತರಾದ ಸಿದ್ದರಾಮಪ್ಪ ತಿಳಿಸಿದರು.

ನಗರದಲ್ಲಿ ಯಾವುದೇ ರೀತಿಯ ಆಕ್ಷೇಪಾರ್ಹ ಪೋಸ್ಟ್‌ಗಳು, ಕೋಮುಭಾವನೆ ಕೆರಳಿಸುವ ಪೋಸ್ಟ್, ಪ್ರಚೋದಾತ್ಮಕ ಹೇಳಿಕೆ, ಘಟನೆಗಳು ಕಂಡುಬಂದರೆ ಕೂಡಲೇ ಐಟಿ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಡಿಸಿಪಿ ರೋಹನ್ ಜಗದೀಶ್ ಎಚ್ಚರಿಕೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಅಧೀಕ್ಷಕ ಡಾ.ರವೀಂದ್ರ ಗಡಾದಿ, ಬೆಳಗಾವಿ ನಗರ ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ಸ್ನೇಹಾ ಸೇರಿದಂತೆ ಪೊಲೀಸ್ ಆಯುಕ್ತಾಲಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹೊಂದಾಣಿಕೆಗಾಗಿ ಎಚ್‌ಡಿಕೆ ದತ್ತಮಾಲೆ ಹಾಕುವುದಾಗಿ ಹೇಳಿಕೆಬೆಳಗಾವಿ: ಬಿಜೆಪಿಯವರೊಂದಿಗೆ ಹೊಂದಾಣಿಕೆ ಆಗುವುದಕ್ಕಾಗಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ದತ್ತಮಾಲೆ ಹಾಕುವುದಾಗಿ ಹೇಳಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ವ್ಯಂಗ್ಯವಾಡಿದರು.ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂದರ್ಭ ಬಂದರೇ ನಾನು ದತ್ತಮಾಲೆ ಧರಿಸುವೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗ ಜೆಡಿಎಸ್‌ನವರು ಬಿಜೆಪಿ ಜತೆಗೆ ಅಲೈಯನ್ಸ್ ಮಾಡಿಕೊಂಡಿದ್ದಾರೆ. ಅವರಿಗೂ ಬಿಜೆಪಿಯವರಿಗೂ ಹೊಂದಾಣಿಗೆ ಆಗಬೇಕಲ್ವೆ? ಅದಕ್ಕಾಗಿ ಎಚ್‌ಡಿ‌ಕೆ ಮಾಲೆ ಹಾಕುವುದಾಗಿ ಹೇಳಿದ್ದಾರೆ ಎಂದು ಲೇವಡಿ ಮಾಡಿದರು.

ಮುಖ್ಯಮಂತ್ರಿ ಬದಲಾದರೇ ಸಿಎಂ ರೇಸ್‌ನಲ್ಲಿ ಪರಮೇಶ್ವರ ಇರ್ತಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಾನು ಬೆಂಗಳೂರಿನಲ್ಲಿ ಸ್ಪಷ್ಟನೆ ಕೊಟ್ಟಿದ್ದೇನೆ. ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ನನ್ನ ಪ್ರಶ್ನಿಸಬೇಡಿ ಎಂದು ಕೋರಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5 ಪಾಲಿಕೆಗಳಲ್ಲಿ ಜಯಭೇರಿ ಬಾರಿಸಲು ಬಿಜೆಪಿಗೆ ಒಳ್ಳೆ ಅವಕಾಶ
ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ