ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದ ಪೊಲೀಸ್ ಆಯುಕ್ತಾಲಯಕ್ಕೆ ಸೋಮವಾರ ಭೇಟಿ ನೀಡಿದ ಅವರು, ಸಾಮಾಜಿಕ ಜಾಲತಾಣ ನಿಗಾ ಘಟಕ, ನಿಯಂತ್ರಣ ಕೊಠಡಿಗಳನ್ನು ಖುದ್ದಾಗಿ ವೀಕ್ಷಿಸಿ ಸಲಹೆ-ಸೂಚನೆಗಳನ್ನು ನೀಡಿದರು.
ಸಾಮಾಜಿಕ ಜಾಲತಾಣಗಳ ನಿಗಾ ಘಟಕಕ್ಕೆ ಭೇಟಿ ನೀಡಿದ ಅವರು, ಆಕ್ಷೇಪಾರ್ಹ ಮಾಹಿತಿ, ಸುಳ್ಳುಸುದ್ದಿಗಳು ಬಂದಾಗ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂಬುವುದರ ಬಗ್ಗೆ ಮಾಹಿತಿ ಪಡೆದುಕೊಂಡು ಸೂಕ್ತ ತಾಂತ್ರಿಕ ತರಬೇತಿ ಹೊಂದಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸಲು ಸೂಚನೆ ನೀಡಿದರು.ಇದಾದ ಬಳಿಕ ನಗರ ನಿಯಂತ್ರಣ ಕೊಠಡಿಯನ್ನು ಹಾಗೂ ವೈರ್ಲೆಸ್ ವಿಭಾಗದ ಕಾರ್ಯಚಟುವಟಿಕೆಗಳನ್ನು ಹಾಗೂ ದಾಖಲೆ ಕೊಠಡಿಯನ್ನು ಖುದ್ದಾಗಿ ವೀಕ್ಷಿಸಿದರು. ನಿಯಂತ್ರಣ ಕೊಠಡಿಗೆ ಬರುವ ಕರೆಗಳು ಹಾಗೂ ಮಾಹಿತಿಯ ಲಾಗ್ ಪುಸ್ತಕವನ್ನು ಪರಿಶೀಲಿಸಿದರಲ್ಲದೇ ಪ್ರತಿಯೊಂದು ದಾಖಲೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
ಸಂಚಾರ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಡ ಕಟ್ಟಲು 7 ದಿನಗಳ ಕಾಲಾವಕಾಶ ನೀಡಬೇಕು. ಇದಾದ ಬಳಿಕ ನ್ಯಾಯಾಲಯದಿಂದ ಸಮನ್ಸ್ ಹೋಗಬೇಕು, ದಂಡ ಕಟ್ಟದಿದ್ದರೇ ಅಥವಾ ನ್ಯಾಯಾಲಯಕ್ಕೆ ಹಾಜರಾಗದಿದ್ದರೇ ವಾಹನ ಸೀಜ್ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಸಿಸಿಟಿವಿ ದೃಶ್ಯಾವಳಿ ವೀಕ್ಷಣೆ:
ಬೆಳಗಾವಿ ನಗರದ ವಿವಿಧ ವೃತ್ತಗಳು ಹಾಗೂ ರಸ್ತೆಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಗೃಹಸಚಿವ ಜಿ.ಪರಮೇಶ್ಚರ ವೀಕ್ಷಿಸಿದರು.ಸಿಸಿಟಿವಿ ಮೇಲೆ ನಿಗಾವಹಿಸಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಪ್ರತಿಯೊಂದು ಕ್ಯಾಮೆರಾ ಅಳವಡಿಸಿರುವ ವೃತ್ತ ಮತ್ತು ರಸ್ತೆ ಕುರಿತು ಸಂಪೂರ್ಣ ಮಾಹಿತಿ ಇರಬೇಕು.
ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ ಅವರು, ವಿವಿಧ ಘಟಕಗಳ ಕಾರ್ಯನಿರ್ವಹಣೆ ಕುರಿತು ವಿವರಿಸಿದರು. ಸಾಮಾಜಿಕ ಜಾಲತಾಣ ನಿಗಾ ಘಟಕವು ಕ್ರಿಯಾಶೀಲವಾಗಿದ್ದು, ಪ್ರತಿಯೊಂದು ಚಟುವಟಿಕೆಗಳ ಮೇಲೆ ನಿಗಾವಹಿಸಲಾಗಿದೆ. ಇತ್ತೀಚೆಗೆ ಪ್ರಕರಣಗಳನ್ನು ಕೂಡ ದಾಖಲಿಸಲಾಗಿದೆ ಎಂದರು.
ಇದಲ್ಲದೇ ಅಧಿವೇಶನ ಸಂದರ್ಭದಲ್ಲೂ ಯಾವುದೇ ರೀತಿಯ ಅಹಿತಕರ ಘಟನೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ತೀವ್ರ ನಿಗಾ ವಹಿಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತರಾದ ಸಿದ್ದರಾಮಪ್ಪ ತಿಳಿಸಿದರು.ನಗರದಲ್ಲಿ ಯಾವುದೇ ರೀತಿಯ ಆಕ್ಷೇಪಾರ್ಹ ಪೋಸ್ಟ್ಗಳು, ಕೋಮುಭಾವನೆ ಕೆರಳಿಸುವ ಪೋಸ್ಟ್, ಪ್ರಚೋದಾತ್ಮಕ ಹೇಳಿಕೆ, ಘಟನೆಗಳು ಕಂಡುಬಂದರೆ ಕೂಡಲೇ ಐಟಿ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಡಿಸಿಪಿ ರೋಹನ್ ಜಗದೀಶ್ ಎಚ್ಚರಿಕೆ ನೀಡಿದರು.
ಹೊಂದಾಣಿಕೆಗಾಗಿ ಎಚ್ಡಿಕೆ ದತ್ತಮಾಲೆ ಹಾಕುವುದಾಗಿ ಹೇಳಿಕೆಬೆಳಗಾವಿ: ಬಿಜೆಪಿಯವರೊಂದಿಗೆ ಹೊಂದಾಣಿಕೆ ಆಗುವುದಕ್ಕಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ದತ್ತಮಾಲೆ ಹಾಕುವುದಾಗಿ ಹೇಳಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ವ್ಯಂಗ್ಯವಾಡಿದರು.ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂದರ್ಭ ಬಂದರೇ ನಾನು ದತ್ತಮಾಲೆ ಧರಿಸುವೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗ ಜೆಡಿಎಸ್ನವರು ಬಿಜೆಪಿ ಜತೆಗೆ ಅಲೈಯನ್ಸ್ ಮಾಡಿಕೊಂಡಿದ್ದಾರೆ. ಅವರಿಗೂ ಬಿಜೆಪಿಯವರಿಗೂ ಹೊಂದಾಣಿಗೆ ಆಗಬೇಕಲ್ವೆ? ಅದಕ್ಕಾಗಿ ಎಚ್ಡಿಕೆ ಮಾಲೆ ಹಾಕುವುದಾಗಿ ಹೇಳಿದ್ದಾರೆ ಎಂದು ಲೇವಡಿ ಮಾಡಿದರು.
ಮುಖ್ಯಮಂತ್ರಿ ಬದಲಾದರೇ ಸಿಎಂ ರೇಸ್ನಲ್ಲಿ ಪರಮೇಶ್ವರ ಇರ್ತಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಾನು ಬೆಂಗಳೂರಿನಲ್ಲಿ ಸ್ಪಷ್ಟನೆ ಕೊಟ್ಟಿದ್ದೇನೆ. ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ನನ್ನ ಪ್ರಶ್ನಿಸಬೇಡಿ ಎಂದು ಕೋರಿದರು.