ಬೆಳಗಾವಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, 2013-18ರವರೆಗೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಬಣ್ಣಿಸಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ ಮನಮೋಹನ್ ಸಿಂಗ್ ಅವರು ಜಗತ್ತಿನ ಖ್ಯಾತ ಅರ್ಥಶಾಸ್ತ್ರಜ್ಞರಾಗಿ ಬೆಳೆದವರು. ಪಿ.ವಿ.ನರಸಿಂಹರಾವ್ ಅವರ ಸಂಪುಟದಲ್ಲಿ ಆರ್ಥಿಕ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದರು. ಉದಾರೀಕರಣದ ಮೂಲಕ ಭಾರತ ವಿಶ್ವಮಟ್ಟಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಅಪಾರ ಜ್ಞಾನ ಹಾಗೂ ದೂರದೃಷ್ಟಿಯ ಯೋಜನೆಗಳು, ಭಾರತ ಆರ್ಥಿಕ ಮುಗ್ಗಟ್ಟಿನಿಂದ ಹೊರಬರಲು ಕಾರಣವಾಯಿತು ಎಂದು ಹೇಳಿದರು.
2004ರಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿ, ಸೋನಿಯಾ ಗಾಂಧಿಯವರು ಪ್ರಧಾನಿಯಾಗಲು ನಿರಾಕರಿಸಿದ ಸಂದರ್ಭದಲ್ಲಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನಿಯಾಗಿ ಆಯ್ಕೆ ಮಾಡಲಾಗುತ್ತದೆ. ಹತ್ತು ವರ್ಷಗಳ ಕಾಲ ಪ್ರಧಾನಿಯಾಗಿ ದೇಶದ ಅಧಿಕಾರದ ಚುಕ್ಕಾಣಿ ಹಿಡಿದ ಮನಮೋಹನ್ ಸಿಂಗ್ ದೇಶವನ್ನು ಆರ್ಥಿಕ, ಸಾಮಾಜಿಕವಾಗಿ ಅಭಿವೃದ್ಧಿಗೊಳಿಸಿದರು. ದೇಶ ಕಂಡ ಪ್ರಾಮಾಣಿಕ ಪ್ರಧಾನಮಂತ್ರಿಗಳಲ್ಲಿ ಒಬ್ಬರು. ರಾಜಕಾರಣದಲ್ಲಿ ಪ್ರಾಮಾಣಿಕರು ಸಿಗುವುದು ವಿರಳ. ಆದರೆ, ತಮ್ಮ ಅಧಿಕಾರಾವಧಿಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿ, ದೇಶದ ಆರ್ಥಿಕತೆಯಲ್ಲಿ ತಮ್ಮ ಹೆಜ್ಜೆಗುರುತು ಬಿಟ್ಟುಹೋಗಿದ್ದಾರೆ ಎಂದು ಬಣ್ಣಿಸಿದರು.
ಸಿಂಗ್ ನಿಧನದಿಂದ ದೇಶಕ್ಕೆ ದೊಡ್ಡ ನಷ್ಟ:
ಅವರ ಬದುಕು, ಆರ್ಥಿಕ ನೀತಿಗಳು ನಮಗೆಲ್ಲ ಪ್ರೇರಣೆ ಹಾಗೂ ಸ್ಫೂರ್ತಿ ನೀಡುತ್ತದೆ. ದೀರ್ಘಾವಧಿಯವರೆಗೆ ಅಧಿಕಾರದಲ್ಲಿದ್ದರೂ ಅತ್ಯಂತ ಸರಳ, ವಿನಯವಂತರಾಗಿದ್ದ ಶ್ರೀಯುತರು ದೇಶದ ಗೌರವಯುತ ವ್ಯಕ್ತಿಯಾಗಿದ್ದರು. ಇಂದು ಅವರು ನಮ್ಮನ್ನು ಅಗಲಿದ್ದು, ಭಾರತಕ್ಕೆ ಆದ ದೊಡ್ಡ ನಷ್ಟ. ಅವರ ಸಾವಿನ ದುಃಖ ಭರಿಸುವ ಶಕ್ತಿಯನ್ನು ಕುಟುಂಬ ವರ್ಗದವರಿಗೆ, ಅಭಿಮಾನಿ ಬಳಗಕ್ಕೆ ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.
ಆಹಾರ ಭದ್ರತೆ ಕಾಯ್ದೆಯಡಿ ಅನ್ನಭಾಗ್ಯ ಯೋಜನೆ:
ಮನಮೋಹನ್ ಸಿಂಗ್ ದೇಶದಲ್ಲಿ ಮೊದಲ ಬಾರಿಗೆ ಆಹಾರ ಭದ್ರತೆ ಕಾಯ್ದೆ ಜಾರಿಗೆ ತಂದರು. ದೇಶದಲ್ಲಿ ಬಡತನವಿದ್ದಿದ್ದರಿಂದ ಕಡಿಮೆ ದರದಲ್ಲಿ ಆಹಾರ ಲಭಿಸುವಂತಾಗಬೇಕೆಂಬ ಸದುದ್ದೇಶದಿಂದ ಈ ಕಾನೂನು ಜಾರಿಗೆ ತರಲಾಯಿತು. ನಂತರ ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಿಪಿಎಲ್ ಕಾರ್ಡ್ದಾರರಿಗೆ ಅನ್ನಭಾಗ್ಯ ಯೋಜನೆಯಡಿ ಒಂದು ರು. ದರದಲ್ಲಿ ಕೆಜಿ ಅಕ್ಕಿ ನೀಡುವ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಯಿತು. ನಂತರದ ದಿನಗಳಲ್ಲಿ ಐದು ಕೆಜಿಯಿಂದ 7 ಕೆಜಿಯವರೆಗೆ ಹೆಚ್ಚಿಸಿ ಉಚಿತವಾಗಿ ನೀಡಲಾಗುತ್ತಿತ್ತು. ಇಂದು ನರೇಂದ್ರ ಮೋದಿಯವರು ನೀಡುತ್ತಿರುವ ಐದು ಕೆಜಿ ಆಹಾರಧಾನ್ಯ ಹಂಚಿಕೆಯ ಯೋಜನೆ ಪ್ರಾರಂಭವಾದದ್ದು ಮನಮೋಹನ್ ಸಿಂಗ್ ಅವರ ದೂರದೃಷ್ಟಿಯಿಂದ. ದೇಶದ ಬಡವರು, ನಿರುದ್ಯೋಗಿಗಳ ಕಷ್ಟ ನಿವಾರಣೆಗೆ ಪೂರಕ ಯೋಜನೆ ಜಾರಿಗೊಳಿಸಿದ್ದರು ಎಂದು ಹೇಳಿದರು.
ಮನಮೋಹನ್ ಸಿಂಗ್ ಅವರೊಂದಿಗಿನ ಒಡನಾಟದ ಬಗ್ಗೆ ಸ್ಮರಿಸಿದ ಸಿಎಂ, ಅವರು ಪ್ರಧಾನಿ ಆಗಿದ್ದಾಗ ಭೇಟಿ ಮಾಡಿದ್ದು ನಾನು. ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ. ಕರ್ನಾಟಕದಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ಆಗಮಿಸಿ ರಾಜ್ಯದ ಆರ್ಥಿಕತೆ ಅಭಿವೃದ್ಧಿಗೆ ಸಲಹೆ ಸೂಚನೆ ನೀಡಿದ್ದರು ಎಂದು ಹೇಳಿದರು.