- ಬೆಳೆಗಳಿಗೆ ಬೆಂಬಲ ಬೆಲೆ ನೀಡಿಲ್ಲ, ರಸ್ತೆ ಗುಂಡಿಗಳ ಮುಚ್ಚಿಲ್ಲ
ಹೊನ್ನಾಳಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯವಾಗಿದೆ. ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚಿಲ್ಲ. ಕೂಡಲೆ ಎಲ್ಲ ಗುಂಡಿಗಳನ್ನು ಮುಚ್ಚಿಸಬೇಕು. ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿ ನ.18ರಂದು ಮಂಗಳವಾರ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಹೊನ್ನಾಳಿ ತಾಲೂಕಿನಾದ್ಯಂತ ಬೃಹತ್ ಪ್ರತಿಭಟನೆ ಹಾಗೂ ಹೊನ್ನಾಳಿ ಬಂದ್ ಮಾಡಲಾಗುವುದು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ತಾಲೂಕಿನ ಕುಂದುರು ಗ್ರಾಮದಲ್ಲಿ ಗುರುವಾರ ನ.18ರಂದು ಪ್ರತಿಭಟನೆ ಹಾಗೂ ಬಂದ್ ಆಚರಣೇ ಬಗ್ಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿದರು.ಕಾಂಗ್ರೆಸ್ ಸರ್ಕಾರ ಈವರೆವಿಗೂ ಬೆಳೆಗಳಿಗೆ ಬೆಂಬಲ ಬೆಲೆ ನೀಡಿಲ್ಲ. ರಸ್ತೆ ಗುಂಡಿಗಳಿಂದಾಗಿ ಸಾರ್ವಜನಿಕರು ಕಾಂಗ್ರೆಸ್ ಸರ್ಕಾರಕ್ಕೆ ಇಡೀ ಶಾಪ ಹಾಕುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಕುರ್ಚಿ ಕದನದಲ್ಲಿ ಮುಳುಗಿದೆ. ಸಚಿವರು ಬೇಡದ ವಿಚಾರಗಳಿಗೆ ಟೀಕೆ ಟಿಪ್ಪಣಿ ಮಾಡುತ್ತ ಕಾಲ ಕಳೆಯುತ್ತಿದ್ದಾರೆ ಹೊರತು, ಸಾಮಾನ್ಯರ ಕಷ್ಟ-ನಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ದೂರಿದರು.
ರೈತರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ನ.18ರ ಅಗತ್ಯ ವಸ್ತುಗಳನ್ನು ಹೊರತುಪಡಿಸಿ, ಶಾಲಾ- ಕಾಲೇಜುಗಳು, ಅಂಗಡಿ ಮುಂಗಟ್ಟುಗಳು, ಬಸ್ಗಳ ಸಂಚಾರ ಬಂದ್ ಮಾಡಲಾಗುವುದು. ವರ್ತಕರು, ಖಾಸಗಿ ಬಸ್ ಮಾಲೀಕರು, ಆಟೋ ಚಾಲಕರು ನಮಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
- - -
ರಾಜ್ಯ ಸರ್ಕಾರದ ವಿರುದ್ಧ ನ.18ರಂದು ಹೊನ್ನಾಳಿ ಬಂದ್ ಬಗ್ಗೆ ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು.