ಹೊನ್ನೂರು ಗೌರಮ್ಮರಿಗೆ ಜಿಲ್ಲಾಡಳಿತದಿಂದ ಸನ್ಮಾನ

KannadaprabhaNewsNetwork |  
Published : Apr 22, 2025, 01:48 AM IST
21ಸಿಎಚ್‌ಎನ್‌55ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಮೈಸೂರು ಆಕಾಶವಾಣಿ ಹಾಗೂ ಕರ್ನಾಟಕ ಜಾನಪದ ಅಕಾಡಮಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹಾಗೂ ಅಕಾಡಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಅವರು ಪ್ರಶಸ್ತಿಗೆ ಭಾಜನರಾಗಿರುವ ಜಿಲ್ಲೆಯ ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದ ಗೌರಮ್ಮ ಅವರಿಗೆ ಶಾಲು ಹೊದಿಸಿ ಫಲತಾಂಬೂಲ, ಸ್ಮರಣಿಕೆ ನೀಡಿ ಸನ್ಮಾನಿಸಿದರು. | Kannada Prabha

ಸಾರಾಂಶ

ಚಾಮರಾಜನಗರದಲ್ಲಿ ಹೊನ್ನೂರು ಗ್ರಾಮದ ಗೌರಮ್ಮ ಅವರಿಗೆ ಶಾಲು ಹೊದಿಸಿ ಫಲತಾಂಬೂಲ, ಸ್ಮರಣಿಕೆ ನೀಡಿ ಸನ್ಮಾನಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಸೋ... ಎನ್ನಿರೇ... ಸೋಬಾನ ಎನ್ನಿರೇ...ಎಂದು ಸೋಬಾನೆ ಪದಗಳನ್ನು ಮದುವೆ, ಜಾತ್ರೆ, ಉತ್ಸವಗಳು ಸೇರಿದಂತೆ ಇನ್ನಿತರೆ ಕಾರ್ಯಕ್ರಮಗಳಲ್ಲಿ ಹಾಡುತ್ತಾ ಹೆಸರುವಾಸಿಯಾಗಿ ಕರ್ನಾಟಕ ಜಾನಪದ ಅಕಾಡಮಿಯ 2023ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಪಡೆದಿರುವ ಹೊನ್ನೂರು ಗೌರಮ್ಮರನ್ನು ಜಿಲ್ಲಾಡಳಿತ ಹಾಗೂ ಜಾನಪದ ಅಕಾಡಮಿಯಿಂದ ಗೌರವಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಮೈಸೂರು ಆಕಾಶವಾಣಿ ಹಾಗೂ ಕರ್ನಾಟಕ ಜಾನಪದ ಅಕಾಡಮಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಹಾಗೂ ಅಕಾಡಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಪ್ರಶಸ್ತಿಗೆ ಭಾಜನರಾಗಿರುವ ಜಿಲ್ಲೆಯ ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದ ಗೌರಮ್ಮರಿಗೆ ಶಾಲು ಹೊದಿಸಿ ಫಲತಾಂಬೂಲ, ಸ್ಮರಣಿಕೆ ನೀಡಿ ಸನ್ಮಾನಿಸಿದರು.

ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ, ಗಡಿಜಿಲ್ಲೆ ಚಾಮರಾಜನಗರ ಸಾಕಷ್ಟು ಅರಣ್ಯ ಪ್ರದೇಶಗಳಿಂದ ಕೂಡಿರುವ ಸಂಪದ್ಬರಿತ, ಸುಂದರ ಜಿಲ್ಲೆಯಾಗಿದೆ. ಜಾನಪದ ಕಲೆಗಳ ತವರೂರು ಸಹ ಚಾಮರಾಜನಗರವೇ ಆಗಿದೆ. ನಶಿಸಿ ಹೋಗುತ್ತಿರುವ ಜಾನಪದ ಕಲೆಗಳಿಗೆ ಪುನಶ್ಚೇತನ ನೀಡುವ ನಿಟ್ಟಿನಲ್ಲಿ ಕರ್ನಾಟಕ ಜಾನಪದ ಅಕಾಡಮಿ ಜಿಲ್ಲೆಯ ಕಲಾವಿದರನ್ನು ಗುರುತಿಸಿ ಗೌರವಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.

ಜಾನಪದ ಕಲೆಗಳು, ಹಾಡುಗಳು ಇನ್ನಷ್ಟು ಪಸರಿಸಿ ಬೆಳಕಿಗೆ ಬರಬೇಕು. ಆಕಾಶವಾಣಿ ಈ ನಿಟ್ಟಿನಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿದೆ. ಅದರಲ್ಲೂ ಮದುವೆ, ಉತ್ಸವಗಳಂತಹ ಶುಭ ಸಮಾರಂಭಗಳಲ್ಲಿ ಹಾಡುವ ಸೋಬಾನೆ ಪದಗಳನ್ನು ಸಂಗ್ರಹಿಸಿ (ಡಾಕುಮೆಂಟೇಶನ್) ದಾಖಲೀಕರಣ ಮಾಡಲು ಮುಂದಾಗಬೇಕು. ಹೊನ್ನೂರು ಗೌರಮ್ಮ ಇನ್ನಷ್ಟು ಕಾಲ ಜೀವಿಸಿ ಮತ್ತಷ್ಟು ಮದುವೆಗಳನ್ನು ಮಾಡಿಸಲಿ ಎಂದು ಹಾರೈಸಿದರು.

ಕರ್ನಾಟಕ ಜಾನಪದ ಅಕಾಡಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಮಾತನಾಡಿ, ಅಕಾಡಮಿಯ ವಾರ್ಷಿಕ ಪ್ರಶಸ್ತಿಗೆ ರಾಜ್ಯದ ಎಲ್ಲಾ ಜಿಲ್ಲೆಗಳ ಕಲಾವಿದರನ್ನು ಪರಿಗಣಿಸಲಾಗುತ್ತಿದೆ. 2023ರ ಸಾಲಿನ ಪ್ರಶಸ್ತಿಗೆ ಜಿಲ್ಲೆಯ ಹೊನ್ನೂರು ಗೌರಮ್ಮರನ್ನು ಆಯ್ಕೆಯಾಗಿದ್ದರು. ಪ್ರಶಸ್ತಿ ಪ್ರದಾನ ಸಮಾರಂಭವು 2025ರ ಮಾ.15ರಂದು ಬೀದರ್‌ನಲ್ಲಿ ಆಯೋಜಿತವಾಗಿತ್ತು. ಸೋಬಾನೆ ಕಲಾವಿದರಾದ ಹೊನ್ನೂರು ಗೌರಮ್ಮ ಅವರು ಅಂಧರಾಗಿದ್ದು, ಅನಿವಾರ್ಯ ಕಾರಣಗಳಿಂದ ಪ್ರಶಸ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಇಲ್ಲಿಯೇ ಬಂದು ಗೌರವಿಸಲಾಗಿದೆ ಎಂದು ಹೇಳಿದರು.

ಅಕಾಡಮಿಯ ಸದಸ್ಯರು ಹಾಗೂ ಮೈಸೂರು ಆಕಾಶವಾಣಿಯ ಡಾ.ಉಮೇಶ್ ಮಾತನಾಡಿ, ಇಂದಿನ ವಿಜ್ಞಾನ, ತಂತ್ರಜ್ಞಾನ ಯುಗದಲ್ಲೂ ಜಾನಪದ ಕಲೆಗಳು, ಹಾಡುಗಳು ತಮ್ಮ ಜೀವಂತಿಕೆ ಕಂಡುಕೊಂಡಿವೆ. ಸೋಬಾನೆ ಪದಗಳು ಕೇವಲ ರಂಜನೀಯವಲ್ಲ. ಅವು ಮದುವೆಯಾಗುವ ಹೊಸ ಜೋಡಿಗಳಿಗೆ ಮುಂದಿನ ಬದುಕಿನ ಮೌಲ್ಯಗಳನ್ನು ಕಟ್ಟಿಕೊಡುವ ಮಾರ್ಗದರ್ಶಿಗಳಾಗಿವೆ ಎಂದರು. ಹೊನ್ನೂರು ಗೌರಮ್ಮ ಕೆಲ ಸೋಬಾನೆ ಪದಗಳನ್ನು ಹಾಡಿ ಎಲ್ಲರನ್ನು ರಂಜಿಸಿದರು. ಜಿಪಂ ಉಪ ಕಾರ್ಯದರ್ಶಿ ಪಿ.ಲಕ್ಷ್ಮಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮುನಿರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಿದಂಬರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಂಜುಂಡಯ್ಯ, ಕರ್ನಾಟಕ ಜಾನಪದ ಅಕಾಡಮಿ ರಿಜಿಸ್ಟಾರ್ ನಮ್ರತಾ, ಜನಪದ ಗಾಯಕರಾದ ಸಿ.ಎಂ.ನರಸಿಂಹಮೂರ್ತಿ ಇತರರು ಕಾರ್ಯಕ್ರಮದಲ್ಲಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುರ್ಚಿ ಕಿತ್ತಾಟ ರಾಜ್ಯದವರೇ ಬಗೆಹರಿಸಿಕೊಳ್ಳಬೇಕು: ಖರ್ಗೆ
ಸದೃಢ ಆರೋಗ್ಯಕ್ಕೆ ಹಲ್ಲು ಸದೃಢವಾಗಿರಲಿ