ಕನ್ನಡಪ್ರಭ ವಾರ್ತೆ ಭಾಲ್ಕಿ
ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರ ನೇತೃತ್ವದದಲ್ಲಿ ಮಠಾಧೀಶರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಶಾಲು ಹೊದಿಸಿ, ಹಾರ ಹಾಕಿ ಬಸವಣ್ಣನವರ ಮೂರ್ತಿ, ವಚನಗಳ ಪುಸ್ತಕ ನೀಡಿ ಗೌರವಿಸಿದರು.
ನಂತರ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಸಿದ್ದರಾಮಯ್ಯನವರ ಜತೆಗೆ ಮುಂದೆ ಆಗಬಹುದಾದ ಬಸವಣ್ಣನವರ ಕಾರ್ಯಗಳ ಕುರಿತು ಚರ್ಚಿಸಿ, ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರನ್ನಾಗಿ ಘೋಷಣೆ ಮಾಡಬೇಕೆನ್ನುವ ಬಹುದಿನಗಳ ಬೇಡಿಕೆ ಈಡೇರಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಅಭಿನಂದಿಸುವುದಾಗಿ ತಿಳಿಸಿದರು.ತಾವು ಬಸವಣ್ಣವರ ಅನುಯಾಯಿ ಆಗಿ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅಳವಡಿಸಲು ಆದೇಶ ಹೊರಡಿಸಿರುವುದು, ಬಸವಕಲ್ಯಾಣ ಅನುಭವ ಮಂಟಪ ಕಟ್ಟಡ ನೀಲ ನಕಾಶೆ ತಮ್ಮ ಅವಧಿಯಲ್ಲಿ ಪೂರ್ಣಗೊಂಡಿದೆ ಎಂದು ಸ್ಮರಿಸಿದರು.