-ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಸಿದ್ದಪ್ಪ ಹೊಟ್ಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ
ಕನ್ನಡಪ್ರಭ ವಾರ್ತೆ ಯಾದಗಿರಿ
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದೊಂದಿಗೆ 2024ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಪುರಸ್ಕೃತರಾದ 11 ಶಿಕ್ಷಕರಿಗೆ ಅಭಿನಂದನಾ ಸಮಾರಂಭವನ್ನು ನ.10 ರಂದು ಬೆಳಿಗ್ಗೆ 10:30ಕ್ಕೆ ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಸಿದ್ದಪ್ಪ ಹೊಟ್ಟಿ ಹೇಳಿದರು.ನಗರದ ಜಿಲ್ಲಾ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿಶ್ವಕರ್ಮ ಏಕದಂಡಗಿ ಮಠದ ಶ್ರೀಕುಮಾರ ಮಹಾ ಸ್ವಾಮೀಜಿ ಅವರು ಸಾನಿಧ್ಯ ವಹಿಸಲಿದ್ದಾರೆ. ನಿವೃತ್ತ ಶಿಕ್ಷಕ ಗುಂಡೇರಾವ್ ಪಂಚಾಹತ್ರಿ ಅವರು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಚಾರ್ಯರಾದ ಪ್ರೊ. ಸಿ. ಎಂ. ಪಟ್ಟೇದಾರ, ರಾಮಯ್ಯ ಶಾಬಾದಿ, ಜಿ. ಹಫೀಜ್ ಪಟೇಲ, ಶರಣಬಸ್ಸಪ್ಪ ನಾಶಿ, ಸೋಮಣ್ಣ ಹಿರೇಮನಿ ಆಗಮಿಸಲಿದ್ದಾರೆ. ಸಮರ್ಥ ನಾಗರಿಕರನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಕುರಿತು ಡಾ. ಗಾಳೆಪ್ಪ ಪೂಜಾರಿ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಹಿರಿಯ ಸಾಹಿತಿ ಅಯ್ಯಣ್ಣ ಹುಂಡೇಕಾರ್, ಕಸಾಪ ಗೌರವ ಕಾರ್ಯದರ್ಶಿ ಡಾ. ಭೀಮರಾಯ ಲಿಂಗೇರಿ, ಕಸಾಪ ಗೌರವ ಕೋಶಾಧ್ಯಕ್ಷ ಬಸವರಾಜ ಅರಳಿ ಮೋಟಳ್ಳಿ, ವೆಂಕಟೇಶ ಕಲಕಂಭ ವೀರಭದ್ರಯ್ಯ ಸ್ವಾಮಿ ಜಾಕಾಮಠ ಸೇರಿದಂತೆ ಇತರರಿದ್ದರು.
7ವೈಡಿಆರ12: ಯಾದಗಿರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಸಿದ್ದಪ್ಪ ಹೊಟ್ಟಿ ಅವರು ಮಾತನಾಡಿದರು.