ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಪತ್ರಿಕಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ಡಿ.ದೇವರಾಜ್ ಅರಸು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಉತ್ತಮ ಸಹಕಾರ ನೀಡಬೇಕು:
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ನ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್, ವಿದ್ಯುತ್ ಇಲ್ಲದೆ ದಿನ ಕಳೆಯಲು ಸಾಧ್ಯವಿಲ್ಲ. ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ವಿದ್ಯುತ್ ಇಲಾಖೆಯ ನೌಕರರು ಹಗಲು ರಾತ್ರಿ ಎನ್ನದೇ, ಗಾಳಿ, ಮಳೆ, ಚಳಿಯನ್ನು ಲೆಕ್ಕಿಸದೇ ದಿನದ ಇಪ್ಪತ್ತನಾಲ್ಕು ಗಂಟೆಯೂ ನಾಗರಿಕರ ಸೇವೆಗೆ ಶ್ರಮಿಸುತ್ತಿರುವುದು ಶ್ಲಾಘನೀಯ. ಸಾರ್ವಜನಿಕರು ವಿದ್ಯುತ್ ನೌಕರರ ಸಮಸ್ಯೆಯನ್ನು ಅರಿತು ಅವರಿಗೆ ಉತ್ತಮ ಸಹಕಾರ ನೀಡಬೇಕು ಎಂದರು.ಹಿಂದುಳಿದ ವರ್ಗಗಳ ಹರಿಕಾರ ಡಿ.ದೇವರಾಜು ಅರಸು ಅವರ ಹೆಸರಿನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವಿಭಿನ್ನವಾದ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದು, ಮತ್ತಷ್ಟು ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯುವಂತಾಗಲಿ ಎಂದು ಹಾರೈಸಿದರು.ಕ್ರಾಂತಿಕಾರಿ ರಾಜಕೀಯ ತಂದವರು:ಅಹಿಂದಾ ಒಕ್ಕೂಟದ ಸ್ಥಾಪಕಾಧ್ಯಕ್ಷರು ಹಾಗೂ ಸಹಮತ ವೇದಿಕೆಯ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಕರ್ನಾಟಕ ಕಂಡ ಹತ್ತು ಹಲವು ಮುಖ್ಯಮಂತ್ರಿಗಳಲ್ಲಿ ಡಿ.ದೇವರಾಜು ಅರಸು ಅವರು ಕ್ರಾಂತಿಕಾರಿ ರಾಜಕೀಯ ತಂದವರು. ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ಜಾರಿಗೆ ತಂದಿದ್ದ ಉಳುವವನೇ ಭೂಮಿಯ ಒಡೆಯ ಎಂಬ ಕ್ರಾಂತಿಕಾರಿ ಭೂ ಸುಧಾರಣಾ ಕಾಯ್ದೆ ದೇಶದಲ್ಲಿಯೇ ಮಾದರಿಯಾಗಿತ್ತು. ಕರ್ನಾಟಕದಲ್ಲಿ ಜಮೀನ್ದಾರಿ ಪದ್ಧತಿ, ಜೀತ ಪದ್ಧತಿ ಮತ್ತು ತಲೆಮೇಲೆ ಮಲ ಹೊರುವ ಅನಿಷ್ಟ ಪದ್ಧತಿಗಳನ್ನು ನಿರ್ಮೂಲನೆ ಮಾಡಿದ ಶ್ರೇಯಸ್ಸು ದೇವರಾಜ ಅರಸು ಅವರಿಗೆ ಸಲ್ಲುತ್ತದೆ. ಅರಸು ರಾಜ್ಯದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಬಹುವಾಗಿ ಶ್ರಮಿಸಿದ್ದರು. ಆಯನೂರು ಆಯೋಗವನ್ನು ರಚಿಸಿ ಹಿಂದುಳಿದ ವರ್ಗಗಳಿಗೆ ಮಿಸಲಾತಿಯನ್ನು ತಂದರು.ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಪ್ರೋತ್ಸಾಹ:
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ಮಡಿಕೇರಿ ತಾಲೂಕು ಸಂಚಾಲಕ ದೀಪಕ್ ಪೊನ್ನಪ್ಪ, ಸಮಾಜದ ಹಾಗೂ ದೀನ ದಲಿತ ಏಳಿಗಾಗಿ ದುಡಿದವರನ್ನು ಪ್ರತಿದಿನ ನೆನಪಿಸಿಕೊಂಡರೆ ಮಾತ್ರ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಆ ನಿಟ್ಟಿನಲ್ಲಿ ದಲಿತ ಸಂಘರ್ಷ ಸಮಿತಿ ಉತ್ತಮ ನಾಯಕರ ಹೆಸರಿನಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದು, ಶ್ರಮಿಕರನ್ನು ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಸನ್ಮಾನಿಸಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ ಎಂದರು. ಕಾಂಗ್ರೆಸ್ ಮುಖಂಡ ಜೆ.ಮೋಹನ್ ಮೌರ್ಯ ಮಾತನಾಡಿ, ರಾಜ್ಯದಲ್ಲಿ 70-80ರ ದಶಕದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಪರಿವರ್ತನೆಗೆ ಗಟ್ಟಿಯಾದ ಅಡಿಗಲ್ಲು ಹಾಕಿದ್ದ ದೇವರಾಜ ಅರಸು ಅವರು ಡಾ.ಬಿ ಆರ್ ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನದ ಆಶಯಗಳನ್ನು ಜಾರಿಗೆ ತರಲು ಪ್ರಾಮಾಣಿಕ ಪ್ರಯತ್ನಗಳನ್ನು ನಡೆಸಿದ್ದರು ಎಂದರು. ಡಿಎಸ್ಎಸ್ ಪೊನ್ನಂಪೇಟೆ ತಾಲೂಕು ಸದಸ್ಯ ಹೆಚ್.ಆರ್.ಜಗದೀಶ್ ಮಾತನಾಡಿ, ಡಿ.ದೇವರಾಜು ಅರಸು ಅವರ ಅಂದಿನ ಕಾಲಘಟ್ಟದಲ್ಲಿ ಹಿಂದುಳಿದ ವರ್ಗಗಳ ಏಳಿಗೆಗಾಗಿ ಅವಿರತ ಶ್ರಮ ವಹಿಸಿದ್ದಾರೆ. ಆದರೆ ಇಂದು ಬಡವರ ಪರ ಎಂದು ಹೇಳಿಕೊಳ್ಳುವ ಸರ್ಕಾರ ಬಡವರಿಗಾಗಿ ಯಾವುದೇ ಸೌಲಭ್ಯಗಳನ್ನು ನೀಡುತ್ತಿಲ್ಲ. ಹೋರಾಟದ ಮೂಲಕ ಸರ್ಕಾರದ ಗಮನ ಸೆಳೆದರೂ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಇನ್ನಾದರೂ ಸರ್ಕಾರ ಬಡವರಿಗೆ ನಿವೇಶನ ಕಲ್ಪಿಸಲು ಮುಂದಾಗಬೇಕು ಎಂದರು. ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿಯ ಸದಸ್ಯ ರಮೇಶ್ ನಿರೂಪಿಸಿದರು, ರಾಜ್ಯ ಸಮಿತಿ ಸದಸ್ಯ ವೀರಭದ್ರಯ್ಯ ಸ್ವಾಗತಿಸಿ, ಟಿ.ಪಿ.ರಮೇಶ್ ಅವರ ಪರಿಚಯ ಮಾಡಿದರು. ಹೆಚ್.ಆರ್.ಜಗದೀಶ್ ವಂದಿಸಿದರು. ಕಾರ್ಯಕ್ರಮದಲ್ಲಿ ಸುಮಾರು 30 ವಿದ್ಯುತ್ ಇಲಾಖೆಯ ನೌಕರರು, ಕನ್ನಡ ಸಾಹಿತ್ಯ ಪರಿಷತ್ನ ಕೊಡಗು ಜಿಲ್ಲಾಧ್ಯಕ್ಷ ಕೇಶವ ಕಾಮತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿ ಹೆಚ್.ಎ.ಮೋಹನ್ ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಹಿಂದಾ ಒಕ್ಕೂಟದ ಸ್ಥಾಪಕರು ಹಾಗೂ ಸಹಮತ ವೇದಿಕೆಯ ಅಧ್ಯಕ್ಷ ಟಿ.ಪಿ.ರಮೇಶ್ ಅವರಿಗೆ ಅಹಿಂದ ಭೂಷಣ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.