ಕನ್ನಡಪ್ರಭವಾರ್ತೆ ಪುತ್ತೂರು
ಅವರು ರಾಷ್ಟ್ರಭಕ್ತ ನಾಗರಿಕ ವೇದಿಕೆ ಸುರತ್ಕಲ್ ವತಿಯಿಂದ ಮಾಜಿ ಸೈನಿಕರ ಸಂಘ ಪುತ್ತೂರು ಇದರ ಸಹಯೋಗದೊಂದಿಗೆ ಕಾರ್ಗಿಲ್ ವಿಜಯ್ ದಿವಸ್ ಆಚರಣೆಯ ಅಂಗವಾಗಿ ಪುತ್ತೂರು ಸೈನಿಕ ಭವನದಲ್ಲಿ ಬುಧವಾರ ಅರ್ಹ ಸೈನಿಕರ ಕುಟುಂಬಗಳಿಗೆ ಸೈನಿಕ ಕಲ್ಯಾಣ ನಿಧಿ ವಿತರಣೆಯಲ್ಲಿ ಭಾಗವಹಿಸಿ ಮಾತನಾಡಿದರು.
ರಾಷ್ಟ್ರಭಕ್ತ ನಾಗರಿಕ ವೇದಿಕೆ ಮೂಲಕ ಈ ಉದ್ದೇಶದಿಂದ ಸುಮಾರು 13 ವರ್ಷಗಳ ಹಿಂದೆ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಯುವಜನರಲ್ಲಿ ದೇಶಭಕ್ತಿಯ ಮನೋಭಾವ ಬೆಳೆಸಿ, ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ಸೇನೆಗೆ ಸೇರುವಂತೆ ಪ್ರೇರೇಪಿಸುವುದು ಇದರ ಮತ್ತೊಂದು ಪ್ರಮುಖ ಗುರಿಯಾಗಿದೆ. ಇಂದು ಈ ಪ್ರಯತ್ನ ಯಶಸ್ಸಿನತ್ತ ಸಾಗುತ್ತಿರುವುದು ಸಂತಸದ ವಿಷಯವಾಗಿದೆ. ವಿವಿಧ ಸಂಘ-ಸಂಸ್ಥೆಗಳು, ರೋಟರಿ, ಸಹಿತ ಅನೇಕ ಸಂಘಟನೆಗಳು ಈ ಕಾರ್ಯದಲ್ಲಿ ಕೈಜೋಡಿಸುವ ಮೂಲಕ ಇನ್ನಷ್ಟು ಶಕ್ತಿ ತುಂಬಿದೆ. ಒಂದು ಸಂಘಟನೆಯಿಂದ ಎಲ್ಲ ಸೈನಿಕ ಕುಟುಂಬಗಳ ಸಂಕಷ್ಟಗಳನ್ನು ನಿವಾರಿಸಲು ಸಾಧ್ಯವಿಲ್ಲ. ಆದರೂ ನಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಈ ವರ್ಷ 23 ಸೈನಿಕ ಕುಟುಂಬಗಳಿಗೆ ರು. 6.90 ಲಕ್ಷ ನೆರವು ವಿತರಿಸಲು ಸಾಧ್ಯವಾಗಿದೆ. ಅದು ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆತ್ಮಸ್ಥೈರ್ಯ ತುಂಬುವ ಪ್ರಯತ್ನವಾಗಿದೆ ಎಂದು ಹೇಳಿದರು.ರಾಷ್ಟ್ರಭಕ್ತ ವೇದಿಕೆ ಉಪಾಧ್ಯಕ್ಷ ಮತ್ತು ಜಿಲ್ಲಾ ಮಾಜಿ ಸೈನಿಕ ಸಂಘದ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಮಾತನಾಡಿ, ವೇದಿಕೆಯು ನಿರಂತರ 13 ವರ್ಷಗಳಿಂದ ಸೈನಿಕರಿಗಾಗಿ ಸೇವೆ ಮಾಡುತ್ತಿದೆ. ಕೇವಲ ಹಣ ನೀಡುವುದು ಮಾತ್ರವಲ್ಲ ಪ್ರತಿ ವರ್ಷ ವಿದ್ಯಾರ್ಥಿಗಳಿಗೆ ದೇಶ ರಕ್ಷಣೆಯ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಸುಮಾರು ಐದಾರು ಸಾವಿರ ಮಂದಿ ಜಿಲ್ಲೆಯಲ್ಲಿ ಮಾಜಿ ಸೈನಿಕರಿದ್ದಾರೆ. ಆದರೆ ಸಂಘದ ಸದಸ್ಯರಾಗಿರುವುದು ಕೇವಲ ಸಾವಿರ ಸಂಖ್ಯೆ ಮಾತ್ರ. ಮಾಜಿ ಸೈನಿಕರು ಸಂಘದ ಸದಸ್ಯರಾಗುವಂತೆ ಮನವಿ ಮಾಡಿದರು.
ಪುತ್ತೂರು ಮಾಜಿ ಸೈನಿಕರ ಸಂಘದ ಅಧ್ಯಕ್ಷ ವಸಂತ ಗೌಡ ಸ್ವಾಗತಿಸಿದರು. ಸಾರ್ಜಂಟ್ ರಮಾನಾಥ ರೈ ವಂದಿಸಿದರು. ಉಪಾಧ್ಯಕ್ಷ ಸುಂದರ ಗೌಡ ನಡುಬೈಲು ಕಾರ್ಯಕ್ರಮ ನಿರೂಪಿಸಿದರು.