ರಸಗೊಬ್ಬರ, ಇಂಧನ ಬೆಲೆ ಏರಿಕೆ; ರೈತರ ಮೇಲೆ ಆರ್ಥಿಕ ಹೊರೆ ಇಳಿಸಿ

KannadaprabhaNewsNetwork |  
Published : May 26, 2026, 02:30 AM IST
ಹೂವಿನಹಡಗಲಿಯ ಕರ್ನಾಟಕ ರಾಜ್ಯ ರೈತ ಸಂಘವು ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.  | Kannada Prabha

ಸಾರಾಂಶ

ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ಸಿಗದೆ ನಷ್ಟ ಅನುಭವಿಸುತ್ತಿದ್ದಾರೆ.

ಹೂವಿನಹಡಗಲಿ: ರಸಗೊಬ್ಬರ, ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಿಂದ ರೈತರಿಗೆ ಆರ್ಥಿಕ ಹೊರೆ ಉಂಟಾಗಿದೆ. ಬೆಲೆ ಏರಿಕೆಗೆ ಕಡಿವಾಣ ಹಾಕಬೇಕೆಂದು ರಾಜ್ಯ ರೈತ ಸಂಘ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ತಾಲೂಕು ಅಧ್ಯಕ್ಷ ಎಚ್‌.ಸಿದ್ದಪ್ಪ, ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆಗಾಗಿ ಸಿದ್ಧತೆ ಮಾಡಿಕೊಳ್ಳುತ್ತಿರುವ ಈ ಸಂದರ್ಭದಲ್ಲಿ ರೈತರಿಗೆ ರಸಗೊಬ್ಬರ ಮತ್ತು ಡೀಸೆಲ್ ಬೆಲೆ ಏರಿಕೆಯು ತೀವ್ರ ಆಘಾತವನ್ನು ಉಂಟುಮಾಡಿದೆ. ಕಳೆದ ಕೆಲವು ತಿಂಗಳುಗಳಿಂದ ಡೀಸೆಲ್ ಬೆಲೆ ನಿರಂತರ ಏರಿಕೆಯಾಗಿದ್ದು, ಟ್ರ್ಯಾಕ್ಟರ್ ಉಳುಮೆ, ನೀರಾವರಿ ಪಂಪ್‌ಸೆಟ್ ಬಳಕೆ ಮತ್ತು ಬೆಳೆ ಸಾಗಾಣಿಕಾ ವೆಚ್ಚವು ದುಪ್ಪಟ್ಟಾಗಿದೆ. ಇದರ ಜೊತೆಗೆ ರಸಗೊಬ್ಬರಗಳ ಬೆಲೆಯೂ ಗಗನಕ್ಕೇರಿದ್ದು, ಸಣ್ಣ ಮತ್ತು ಮಧ್ಯಮ ವರ್ಗದ ರೈತರಿಗೆ ಬಿತ್ತನೆಗೆ ದುಸ್ತರವಾಗಿದೆ ಎಂದರು.

ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ಸಿಗದೆ ನಷ್ಟ ಅನುಭವಿಸುತ್ತಿದ್ದಾರೆ. ಕೃಷಿ ವೆಚ್ಚದ ಈ ಹೊರೆ ರೈತರ ಬೆನ್ನುಮೂಳೆ ಮುರಿದಂತಾಗಿದೆ. ರೈತರ ಹಿತದೃಷ್ಟಿಯಿಂದ ರಸಗೊಬ್ಬರಗಳ ಬೆಲೆ ಕೂಡಲೇ ಇಳಿಸಬೇಕು, ಇಲ್ಲವೇ ರೈತರಿಗೆ ನೇರ ನಗದು ವರ್ಗಾವಣೆ ಮೂಲಕ ಹೆಚ್ಚುವರಿ ಸಹಾಯಧನ ಒದಗಿಸಬೇಕೆಂದು ಒತ್ತಾಯಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಶಿವರಾಜ ಹೊಳಗುಂದಿ ಮಾತನಾಡಿ, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಡೀಸೆಲ್ ರಿಯಾಯ್ತಿ ದರದಲ್ಲಿ ಲಭ್ಯವಾಗುವಂತೆ ಮಾಡಬೇಕಿದೆ. ಬೆಳೆದ ಬೆಳೆಗಳಿಗೆ ಸ್ವಾಮಿನಾಥನ್ ಆಯೋಗದ ಶಿಫಾರಸ್ಸಿನಂತೆ ವೈಜ್ಞಾನಿಕ ಬೆಂಬಲ ಬೆಲೆ ನಿಗದಿಪಡಿಸಬೇಕಿದೆ. ರಸಗೊಬ್ಬರಗಳ ಬೆಲೆ ಏರಿಕೆ ಮತ್ತು ಡೀಸೆಲ್ ದರ ಹೆಚ್ಚಳದಿಂದ ಕೃಷಿ ಉತ್ಪಾದನಾ ವೆಚ್ಚವು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ. ಉಳುಮೆ, ಬಿತ್ತನೆ, ಕೊಯ್ಲು ಮತ್ತು ಸಾಗಾಣಿಕೆಗೆ ಡೀಸೆಲ್ ಅತ್ಯಗತ್ಯವಾಗಿದೆ ಬೆಲೆ ಏರಿಕೆಯಿಂದ ರೈತರು ಸಾಲದ ಸುಳಿಗೆ ಸಿಲುಕುತ್ತಿದ್ದಾರೆ. ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಜಿಲ್ಲಾ ಮಹಿಳಾ ಅಧ್ಯಕ್ಷೆ ವಿಜಯಲಕ್ಷ್ಮಿ, ಉಪಾಧ್ಯಕ್ಷ ವಿಠಲ ನಾಯ್ಕ, ವಿ.ಬಿ. ಚನ್ನಬಸಪ್ಪ, ಜಿಲ್ಲಾ ಉಪಾಧ್ಯಕ್ಷ ಕೆ.ಗನಿಸಾಬ್, ತಾಲೂಕ ಕಾರ್ಯ ಅಧ್ಯಕ್ಷ ಡಾಕ್ಯಾ ನಾಯ್ಕ, ಕಾರ್ಯದರ್ಶಿ ವೆಂಕಟೇಶ್ ನಾಯ್ಕ, ಜಿಲ್ಲಾ ಕಾರ್ಯದರ್ಶಿ ದುರುಗಪ್ಪ, ಭೋಜ್ಯನಾಯ್ಕ, ದವಲ್ ಸಾಬ್, ಶೇಖರ ನಾಯ್ಕ, ಬಸವರಾಜ್ ಸೇರಿದಂತೆ ಇತರರು ತಹಸೀಲ್ದಾರ್‌ ಕೆ.ಎಂ.ಗುರುಬಸವರಾಜ ಅವರಿಗೆ ಮನವಿ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

(ರಾಜ್ಯಕ್ಕೂ ಮುಖ್ಯ) ಪ್ರಗತಿಪರ ಚಿಂತನೆ ಯತಿ ವಿಶ್ವೇಶ ತೀರ್ಥರು: ಈಶ್ವರ ಖಂಡ್ರೆ
2015ರ ನಂತರದ ಒತ್ತುವರಿ ತೆರವಿಗೆ ಖಂಡ್ರೆ ಸೂಚನೆ